ಈ ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸೂಚನೆ
ನವದೆಹಲಿ, ಆಗಸ್ಟ್ 10: ನೈಋತ್ಯ ಮುಂಗಾರು ಹಿಮಾಲಯದ ಕಡೆ ಹೊರಳುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತರಾಖಂಡ ಹಾಗೂ ಹಿಮಾಲಯದ ತಪ್ಪಲು ಪ್ರದೇಶಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಿಮಾಲಯ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆಗಸ್ಟ್ 10ರ ನಂತರ ಮಳೆ ಪ್ರಮಾಣ ತಗ್ಗಲಿದೆ ಎಂದು ಹೇಳಿದೆ.
ಇದರೊಂದಿಗೆ ಹಲವು ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ತಮಿಳುನಾಡು, ಕೇರಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಬಲಿಷ್ಠ ಮಾರುತಗಳ ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಆಗಸ್ಟ್ 13ರವರೆಗೂ ಮಳೆ ಅಧಿಕವಾಗಿರಲಿದೆ ಆನಂತರ ತಗ್ಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದೆ ಓದಿ...

ಉತ್ತರಾಖಂಡ ಹಾಗೂ ಹಿಮಾಲಯದ ತಪ್ಪಲಲ್ಲಿ ಭಾರೀ ಮಳೆ
ಆಗಸ್ಟ್ 10ರಿಂದ 13ರವರೆಗೆ ಜಾರ್ಖಂಡ್ನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಕೂಡ ಆಗಸ್ಟ್ 11ರಿಂದ ಮಳೆ ಹೆಚ್ಚಾಗಿ 13ರ ನಂತರ ತಗ್ಗುವುದಾಗಿ ತಿಳಿಸಿದೆ. ಉತ್ತರಾಖಂಡ ಹಾಗೂ ಹಿಮಾಲಯದ ತಪ್ಪಲಿನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಬಲಿಷ್ಠ ಮಾರುತಗಳ ಪ್ರಭಾವ
ಉತ್ತರ ಪ್ರದೇಶದ ಪೂರ್ವ ಭಾಗ ಹಾಗೂ ಬಿಹಾರದಲ್ಲಿ ಕೂಡ ಭಾರೀ ಮಳೆಯಾಗಲಿದ್ದು, ಮುಂದಿನ ನಾಲ್ಕೈದು ದಿನಗಳವರೆಗೂ ಅಧಿಕ ಮಟ್ಟದಲ್ಲಿ ಮಳೆಯಾಗುವುದಾಗಿ ತಿಳಿಸಿದೆ.
ಈಶಾನ್ಯ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಬಲಿಷ್ಠ ಮಾರುತಗಳ ಪ್ರಭಾವದಿಂದಾಗಿ ಆಗಸ್ಟ್ 11ರಿಂದ ಈ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಅಸ್ಸಾಂ ಹಾಗೂ ಮೇಘಾಲಯದಲ್ಲಿ ಆಗಸ್ಟ್ 11ರಿಂದ 13ರವರೆಗೂ ಹೆಚ್ಚಿನ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ತಮಿಳುನಾಡು, ಕೇರಳದಲ್ಲಿ ಹೆಚ್ಚಿನ ಮಳೆ
ಮುಂದಿನ ಐದು ದಿನಗಳ ಕಾಲ ತಮಿಳುನಾಡು ಹಾಗೂ ಕೇರಳದಲ್ಲಿ ಕೂಡ ಚದುರಿದ ಮಳೆಯಾಗಲಿದೆ. ಕೇರಳದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಗುಜರಾತ್ನಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಉತ್ತರಾಖಂಡದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 12-13ರಂದು ಅಧಿಕ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ
ಕರ್ನಾಟಕ ರಾಜ್ಯದಲ್ಲಿ ಮುಂಗಾರು ಪ್ರಭಾವ ತಗ್ಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.











Click it and Unblock the Notifications