ಸೆಪ್ಟೆಂಬರ್ 11ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ
ನವದೆಹಲಿ, ಸೆಪ್ಟೆಂಬರ್ 8: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ನೈಋತ್ಯ ಮುಂಗಾರು ಪ್ರಭಾವದಿಂದಾಗಿ ಸೆಪ್ಟೆಂಬರ್ 11ರವರೆಗೂ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಪಶ್ಚಿಮ ಹಾಗೂ ನೈಋತ್ಯ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕೆಲವು ದಿನಗಳ ಅವಧಿ ಬಿರುಸು ಮಳೆಯಾಗುವುದಾಗಿ ತಿಳಿಸಿದೆ. ಇದೇ ಅವಧಿಯಲ್ಲಿ ತೆಲಂಗಾಣ, ವಿದರ್ಭಾ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆ ದಾಖಲಾಗುವ ಸಾಧ್ಯತೆ ಇರುವುದಾಗಿಯೂ ಹೇಳಿದೆ.
ಮಧ್ಯ ಮಹಾರಾಷ್ಟ್ರ, ಕೊಂಕಣ, ಗುಜರಾತ್ ರಾಜ್ಯಗಳಲ್ಲಿ ಸೆಪ್ಟೆಂಬರ್ 7-11ರವರೆಗೂ ಮಳೆಯಾಗಲಿದೆ. ಸೆಪ್ಟೆಂಬರ್ 8ರಂದು ಮಧ್ಯ ಮಹಾರಾಷ್ಟ್ರ ಹಾಗೂ ಕೊಂಕಣ, ಸೆಪ್ಟೆಂಬರ್ 8-9ರಂದು ಗುಜರಾತ್ನಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಇಲಾಖೆ ತಿಳಿಸಿದೆ. ನೈಋತ್ಯ ಭಾಗದ ಎಲ್ಲಾ ರಾಜ್ಯಗಳಲ್ಲಿ ಸೆಪ್ಟೆಂಬರ್ 11ರವರೆಗೂ ಅಧಿಕ ಮಳೆ ಮುಂದುವರೆಯುವುದಾಗಿ ತಿಳಿಸಿದೆ.

ಸೆಪ್ಟೆಂಬರ್ 8ರಂದು ಪಂಜಾಬ್ನಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ, ಉತ್ತರಾಖಂಡದಲ್ಲಿ ಸೆಪ್ಟೆಂಬರ್ 8ರಿಂದ 11ರವರೆಗೆ, ಹರಿಯಾಣದಲ್ಲಿ ಸೆಪ್ಟೆಂಬರ್ 10ರಂದು ಭಾರೀ ಮಳೆಯಾಗುವುದಾಗಿ ತಿಳಿಸಿದ್ದು, ಮುನ್ನೆಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಸೆಪ್ಟೆಂಬರ್ 7-11ರವರೆಗೆ ಜಮ್ಮು ಹಾಗೂ ಕಾಶ್ಮೀರ ಅಧಿಕ ಮಟ್ಟದ ಮಳೆ ಪಡೆಯುವುದಾಗಿ ಮಾಹಿತಿ ನೀಡಿದೆ. ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 10 ಹಾಗೂ 11ರಂದು ಅಧಿಕ ಮಳೆಯಾಗಲಿದೆ. ಸೆಪ್ಟೆಂಬರ್ 11ರ ನಂತರ ಒಡಿಶಾ ಹಾಗೂ ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ತಿಳಿಸಿದೆ.
ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತವಾಗಿ, ಇದರ ಪ್ರಭಾವ ಅಧಿಕ ಮಟ್ಟದ ಮಳೆಗೆ ಕಾರಣವಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಮೇಲೆ ಹೆಚ್ಚಾಗಲಿದ್ದು, ಈ ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ತಿಳಿಸಲಾಗಿದೆ. ಹೀಗಾಗಿ ಒಡಿಶಾದ ಹನ್ನೊಂದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಹಾರದಲ್ಲಿ ಮುಂದಿನ ಎರಡು ದಿನಗಳ ಕಾಲ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಪುಣೆ ನಗರದಲ್ಲಿ ಅಧಿಕ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವುದಾಗಿ ತಿಳಿಸಿದೆ.
ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಸೆಪ್ಟೆಂಬರ್ 12ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣದ ರಾಜ್ಯಗಳಲ್ಲಿ ಮಳೆ ಚಟುವಟಿಕೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಪಶ್ಚಿಮ, ವಾಯವ್ಯ ದಿಕ್ಕಿಗೆ ಮಾರುತಗಳು ಚಲಿಸಲಿದ್ದು, ಪೂರ್ವ, ಮಧ್ಯ ಹಾಗೂ ಪಶ್ಚಿಮ ಭಾರತದಲ್ಲಿ ಮಳೆ ಹೆಚ್ಚಾಗಲಿದೆ. ದಕ್ಷಿಣ ಭಾರತದಲ್ಲಿ ಇದರ ಪ್ರಭಾವ ಹೆಚ್ಚಿರಲಿದೆ ಎಂದು ತಿಳಿಸಿದೆ.
ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರದ ಕರಾವಳಿ, ತೆಲಂಗಾಣದಲ್ಲಿ ಅಲರ್ಟ್ ನೀಡಲಾಗಿದೆ. ಕೇರಳದಲ್ಲಿ ಒಂಬತ್ತು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರದಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಚುರುಕು ಪಡೆಯಲಿರುವುದಾಗಿ ಇಲಾಖೆ ತಿಳಿಸಿದೆ.











Click it and Unblock the Notifications