ಆಗಸ್ಟ್ 1ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಜುಲೈ 30: ಕಳೆದ ವಾರ ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಆರ್ಭಟಿಸಿದ್ದ ಮುಂಗಾರು ಈ ವಾರ ಉತ್ತರ ಭಾರತದತ್ತ ತಿರುಗಿದೆ. ಜಮ್ಮು ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಆಗಸ್ಟ್ 1ರವರೆಗೂ ಸುಮಾರು ಹದಿನೈದು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್ ಹಾಗೂ ಕೆಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರೆಯುವ ಸೂಚನೆ ನೀಡಿದೆ. ಅತಿ ಹೆಚ್ಚು ಮಳೆಯಾಗುವ ರಾಜ್ಯಗಳಾವುವು? ಮುಂದೆ ಓದಿ...

ಉತ್ತರಾಖಂಡ, ಹಿಮಾಚಲದಲ್ಲಿ ಎರಡು ದಿನ ಭಾರೀ ಮಳೆ
ಸದ್ಯಕ್ಕೆ ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಜಮ್ಮು ಕಾಶ್ಮೀರದಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಭಾನುವಾರದವರೆಗೂ ಮಳೆ ಮುಂದುವರೆಯಲಿದೆ. ಆನಂತರ ಮಳೆ ಪ್ರಮಾಣ ಆ ರಾಜ್ಯಗಳಲ್ಲಿ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಹಾಗೂ ಕಾಶ್ಮೀರ ಮತ್ತು ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದಾಗಿ ಇದುವರೆಗೂ ಹದಿನೇಳು ಮಂದಿ ಮೃತಪಟ್ಟಿದ್ದು, ಹಲವರು ಕಣ್ಮರೆಯಾಗಿದ್ದಾರೆ.

ವಾಯುಭಾರ ಕುಸಿತದಿಂದ ಇನ್ನೂ ಕೆಲ ದಿನ ಉತ್ತರ ಭಾರತದಲ್ಲಿ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಪಂಜಾಬ್, ಹರಿಯಾಣ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಬಿಹಾರ ಹಾಗೂ ಜಾರ್ಖಂಡ್ನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಸ್ಥಾನದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಮಧ್ಯಪ್ರದೇಶದಲ್ಲಿ ಆಗಸ್ಟ್ 1ರವರೆಗೂ ಅತಿ ಹೆಚ್ಚಿನ ಮಳೆ ಸೂಚನೆ ನೀಡಲಾಗಿದ್ದು, ಹದಿನೈದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜಸ್ಥಾನದಲ್ಲಿ ಕೂಡ ಮುಂದಿನ ಎರಡು ಮೂರು ದಿನಗಳ ಕಾಲ ಮಳೆ ಇದ್ದೇ ಇರುತ್ತದೆ ಎಂದು ಸೂಚನೆ ನೀಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೊಂಕಣ, ಗೋವಾ, ಮಹಾರಾಷ್ಟ್ರದ ಕೆಲವೆಡೆಗಳಲ್ಲಿ ಭಾನುವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಮಳೆ
ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ಆದರೂ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರೆದಿದೆ. ಇನ್ನೂ ಮೂರು ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು, ಕರಾವಳಿಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications