IMD Weather Forecast: ಚಂಡಮಾರುತ ಪ್ರಸರಣ ಪ್ರಭಾವ, ನೈಋತ್ಯ ಮಾನ್ಸೂನ್ ಸಕ್ರಿಯ: ಈ ಭಾಗಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್
IMD Weather Forecast: ಭಾರತದ ವಿವಿಧ ಪ್ರದೇಶಗಳಲ್ಲಿ ಚಂಡಮಾರುತ ಪ್ರಸರಣ, ವಾಯುಭಾರ ಕುಸಿತ ಹಾಗೂ ನೈಋತ್ಯ ಮಾನ್ಸೂನ್ ಪ್ರವೇಶದಿಂದಾಗಿ ದಕ್ಷಿಣ ಭಾರತವೂ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜುಲೈ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇದೀಗ ಮುಂದಿನ ಮೂರರಿಂದ ನಾಲ್ಕು ದಿನದ ಅವಧಿಗೆ ದಕ್ಷಿಣ ಭಾರತವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಶನಿವಾರ ಹಾಗೂ ಭಾನುವಾರ ಭಾಗದಲ್ಲಿ ಭಾರೀ ಮಳೆ ಇರಲಿದೆ. ಶನಿವಾರ ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಜುಲೈ 4ರ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್ಗಢ, ವಿದರ್ಭ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ದೇಶದಾದ್ಯಂತ ಇದೀಗ ಸಕ್ರಿಯ ಮಾನ್ಸೂನ್ ಪ್ರವೇಶವಾಗಿದೆ. ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಪ್ರದೇಶಗಳಲ್ಲಿ ಮಾನ್ಸೂನ್ ಈ ಬಾರಿ ತಡವಾಗಿ ಪ್ರವೇಶಿಸಿದೆ. ಮಾನ್ಸೂನ್ ಸಂಪೂರ್ಣವಾಗಿ ಪ್ರವೇಶಿಸಿರುವುದರಿಂದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದೆ. ವಾಯುವ್ಯ ಮತ್ತು ಪೂರ್ವ ಭಾರತದಾದ್ಯಂತ ಮಾನ್ಸೂನ್ ಸಕ್ರಿಯವಾಗಿದೆ. ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿಯಿಂದ ತೇವಾಂಶ ತುಂಬಿದ ಗಾಳಿ ಬೀಸುವ ಅನುಕೂಲಕರ ವಾತಾವರಣ ಇರುವುದರಿಂದ ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ.
ವಾಯುವ್ಯ ಭಾರತದಲ್ಲಿಯು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಅಲ್ಲದೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭಾರೀ ಮಳೆ ಆಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಹಾಗೂ ದುರ್ಬಲ ಪ್ರದೇಶಗಳಲ್ಲಿ ಭೂಕುಸಿತದ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಗರಿಷ್ಠ ತಾಪಮಾನವು ದೆಹಲಿಯಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ, ಮಧ್ಯ ಮತ್ತು ಪೂರ್ವ ಭಾರತದ ವಿವಿಧ ಭಾಗಗಳಲ್ಲಿ ಮಿಂಚು - ಗುಡುಗು ಸಹಿತ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ. ಇನ್ನು ಭಾರತದಾದ್ಯಂತ ನೈಋತ್ಯ ಮಾನ್ಸೂನ್ ಜುಲೈ ಮೊದಲ ವಾರದವರೆಗೆ ಸಕ್ರಿಯವಾಗಿರಲಿದೆ. ಎರಡನೇ ವಾರವೂ ಮಳೆ ಇರಲಿದೆ.
ದಕ್ಷಿಣ ಭಾರತದಲ್ಲಿಯೂ ಭಾರೀ ಮಳೆ
ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನ ವಿವಿಧ ಪ್ರದೇಶಗಳಲ್ಲೂ ಮಳೆ ಆರ್ಭಟ ಇದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತ ಇರುವುದರಿಂದ ಕರಾವಳಿ ಹಾಗೂ ಮಲೆನಾಡು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications