IMD Weather Forecast: ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಇನ್ನೂ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆರ್ಭಟ ತಗ್ಗಿದ್ದು, ಉತ್ತರ ಭಾರತದಲ್ಲಿ ಮಳೆ ಚುರುಕು ಪಡೆದ ಪರಿಣಾಮ ಇಲ್ಲಿನ ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣ ಆಗಿದೆ. ಪರಿಣಾಮ ಈ ಭಾಗಗಳ ಜನರು ಅಕ್ಷರಸಃ ನಲುಗಿಹೋಗಿದ್ದಾರೆ.

ಉತ್ತರ ಮತ್ತು ಪಶ್ಚಿಮ ಭಾರತದಾದ್ಯಂತ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆ ಮುಂದುವರೆದಿದೆ. ಇನ್ನು ಇಂದು (ಸೆಪ್ಟೆಂಬರ್ 6) ಭಾರೀ ಮಳೆ ಹಿನ್ನೆಲೆ ಪೂರ್ವ ರಾಜಸ್ಥಾನ ಮತ್ತು ಗುಜರಾತ್ಗೆ ಭಾರತೀಯ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ಈ ಭಾಗಗಳಲ್ಲಿನ ಜನರು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುವ ಆತಂಕದಲ್ಲಿದ್ದಾರೆ.
ಮತ್ತೊಂದೆಡೆ, ಪಶ್ಚಿಮ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದ ಕೆಲವು ಭಾಗಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನು
ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನವದೆಹಲಿಯ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಬಗ್ಗೆ ವರದಿಯಾಗಿದೆ.
ರಾಷ್ಟ್ರ ರಾಜಧಾನಿ ನವದೆಯಲ್ಲಿ ಇಂದು (ಸೆಪ್ಟೆಂಬರ್ 6) ಪೂರ್ತಿ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಗೆ ಹೋಲಿಕೆ ಮಾಡಿದರೆ, ಇದೀಗ ದೆಹಲಿಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಇಲ್ಲಿನ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಅಲ್ಲದೆ, ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಲೋಹಾ ಪುಲ್ ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ಶುಕ್ರವಾರ ನವದೆಹಲಿಯಲ್ಲಿ ಗರಿಷ್ಠ ತಾಪಮಾನ 33.2°C ಮತ್ತು ಕನಿಷ್ಠ 24°C ದಾಖಲಾಗಿದ್ದು, ಎರಡೂ ಋತುಮಾನದ ಸರಾಸರಿಗಿಂತ ತುಸು ಕಡಿಮೆ ಆಗಿದೆ. ಕಳೆದ 24 ಗಂಟೆಗಳಲ್ಲಿ ಪಾಲಂನಲ್ಲಿ ಅತಿ ಹೆಚ್ಚು 13.3 ಮಿ.ಮೀ, ಸಫ್ದರ್ಜಂಗ್ನಲ್ಲಿ 7.6 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಮುಂಗಾರು ಆರ್ಭಟಕ್ಕೆ ತತ್ತರಿಸಿದ ಜನ: ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ಮುಂಗಾರು ಆರ್ಭಟಕ್ಕೆ ತತ್ತರಿಸಿ ಹೋಗಿವೆ. ಈ ಋತುವಿನಲ್ಲಿ ಈ ಭಾಗಗಳಲ್ಲಿ ಭೂಕುಸಿತಗಳು, ಪ್ರವಾಹಗಳು ಮತ್ತು ಕಟ್ಟಡ ಕುಸಿತಗಳಿಂದಾಗಿ 300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಹಳ್ಳಿಗಳು ಮತ್ತು ಪ್ರಮುಖ ಹೆದ್ದಾರಿಗಳು ಜಲಾವೃತವಾಗಿವೆ. ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಪಂಜಾಬ್ನಲ್ಲಿ ಭಾರೀ ಮಳೆಯಿಂದಾಗಿ ತುಂಬಾ ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಕೃಷಿ ಭೂಮಿ ಜಲಾವೃತವಾಗಿ ಜನರು ಬೀದಿಗೆ ಬಂದಿರುವ ಬಗ್ಗೆ ವರದಿಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಇಲ್ಲಿನ ಜನರು ಇನ್ನೂ ಏನೆಲ್ಲಾ ಕಾದಿದೆಯೋ ಎನ್ನುವ ಆತಂಕದಲ್ಲಿದ್ಧಾರೆ.
ಮುಂದಿನ ಮೂರು ದಿನಗಳಲ್ಲಿ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪೂರ್ವ ಮತ್ತು ಪಶ್ಚಿಮ ರಾಜಸ್ಥಾನ ಸೇರಿದಂತೆ ರಾಜ್ಯಗಳು ಸೆಪ್ಟೆಂಬರ್ 10ರ ವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಈ ನಡುವೆಯೂ ತಮಿಳುನಾಡು, ಕೇರಳ, ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.












Click it and Unblock the Notifications