IMD Weather Forecast: ಈ ಭಾಗಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬಿರುಬಿಸಿಲಿನ ನಡುವೆಯೂ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ಮತ್ತು ಒಡಿಶಾ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಇಂದು (ಮಾರ್ಚ್ 19) ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಮುಂದಿನ ಹಲವು ದಿನಗಳವರೆಗೆ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಗಾಳೆಯ ವೇಗ ಗಂಟೆಗೆ 30-60 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ 20 ಮತ್ತು 22ರ ನಡುವೆ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ವ್ಯಾಪಕವಾಗಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯಯತೆಯಿದೆ. ಜೊತೆಗೆ ಗಾಳಿಯ ವೇಗ ಗಂಟೆಗೆ 40-60 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪರಿಚಲನೆ ಪರಿಣಾಮ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಕಾಲ ಅರುಣಾಚಲ ಪ್ರದೇಶದಾದ್ಯಂತ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ತಾಪಮಾನ ದಾಖಲೆ ವಿವರ: ಒಡಿಶಾದದಲ್ಲಿ ಇಂದು (ಮಾರ್ಚ್ 19) ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ. ಮುಂದಿನ ಎರಡು ದಿನಗಳವರೆಗೆ ಗುಜರಾತ್ ಕರಾವಳಿಯಲ್ಲಿ ಮತ್ತು ಮಾರ್ಚ್ 19 ಮತ್ತು 20ರ ನಡುವೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾರ್ಚ್ 19-21ರ ವರೆಗೆ ಬೆಳಗಿನ ಜಾವ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಜೊತೆಹೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಬಾರಿಯೂ ಕೂಡ ಜೂನ್ ಆರಂಭದಲ್ಲೇ ಮುಂಗಾರು ಪ್ರವೇಶ ನೀಡಲಿದೆ ಎನ್ನುವ ಮುನ್ಸೂಚನೆ ಇದೆ.
ಕಳೆ ಬಾರಿ ಸುರಿದ ಮುಂಗಾರು ಮಳೆಯಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಪ್ರಮುಖ ಜಲಾಶಯಗಳು, ನದಿಗಳು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಮತ್ತೊಂದೆಡೆ ಅವಾಂತರಗಳು ಕೂಡ ಸಂಭವಿಸಿದ್ದವು.












Click it and Unblock the Notifications