IMD Weather Forecast: ಈ ಭಾಗಗಳಲ್ಲಿ ಒಂದು ವಾರ ಗುಡುಗು, ಮಿಂಚು ಸಹಿತ ರಣಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ನಡುವೆಯೂ ಇನ್ನೂ ಕೆಲವೇ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ತಾಪಮಾನ ಮುಂದುವರೆದಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲಿದೆ. ಇನ್ನು ಇಂದು (ಜೂನ್ 12) 40.9°Cನಿಂದ 45.0°C ವರೆಗೂ ತಾಪಮಾನ ದಾಖಲಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆದರೆ, ದಕ್ಷಿಣ ಭಾರತದ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?: ಇಂದು (ಜೂನ್ 12) ತೆಲಂಗಾಣದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದಿಲಾಬಾದ್, ಕುಮಾರಂ ಭೀಮ್ ಆಸಿಫಾಬಾದ್, ಜಗ್ತಿಯಾಲ್, ವಿಕಾರಾಬಾದ್, ಸಂಗಾರೆಡ್ಡಿ, ಮಹಬೂಬ್ನಗರ, ನಾಗರ್ಕರ್ನೂಲ್, ವನಪರ್ತಿ, ನಾರಾಯಣಪೇಟ್ ಮತ್ತು ಜೋಗುಲಾಂಬ ಗದ್ವಾಲ್ ಸೇರಿದಂತೆ 10 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕರ್ನಾಟಕಕ್ಕೆ ಅವಧಿಗೂ ಮುನ್ನವೇ ಎಂಟ್ರಿ ಕೊಟ್ಟ ಮುಂಗಾರು ಮಳೆಯ ಆರ್ಭಟ ಸ್ವಲ್ಪ ದಿನಗಳ ಬಳಿಕ ತಗ್ಗಿತ್ತು. ಇದೀಗ ಮತ್ತೆ ಆರ್ಭಟ ಶುರು ಮಾಡಿದ್ದು, ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ ಮೂರು ದಿನಗಳ ಕಾಲ ವ್ಯಾಪಕವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಇಂದು (ಜೂನ್ 12) ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ಮೈಸೂರು, ದಾವಣಗೆರೆ, ಹಾಸನ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 12-15ರವರೆಗೂ ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 12-17ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, 12 ಮತ್ತು 16ರ ವರೆಗೆ ಕೇರಳ ಮತ್ತು ಮಾಹೆಯಲ್ಲಿ, ಜೂನ್ 17ರ ವರೆಗೆ ಕರ್ನಾಟಕ, ಜೂನ್ 14ರ ವರೆಗೆ ಗೋವಾದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಖೆ ಸಂದೇಶವನ್ನು ರವಾನಿಸಿದೆ.












Click it and Unblock the Notifications