IMD Weather Forecast: ಈ ಭಾಗಗಳಲ್ಲಿ ಮಾರ್ಚ್ 27, 28ರಂದು ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್ 27, 28ರಂದು ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂದಿನ ಹಲವು ದಿನಗಳ ಕಾಲ ಕಾಶ್ಮೀರ ಮತ್ತು ಲಡಾಖ್ನಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ, ಒಡಿಶಾದಲ್ಲಿ ಶಾಖದ ಅಲೆಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇದೇ ವೇಳೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬುರುಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇಂದು (ಮಾರ್ಚ್ 27) ಇನ್ನೂ ಕೆಲವೇ ಕ್ಷಣಗಳಲ್ಲಿ ಕಾಶ್ಮೀರ ಮತ್ತು ಲಡಾಖ್ನಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮತ್ತೊಂದೆಡೆ ಜಮ್ಮುವಿನಲ್ಲಿ ಭಾರೀ ಮಳೆ, ಲಡಾಖ್ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇದೇ ವೇಳೆ ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಲೂಬಹುದು ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಗಂಟೆಗೆ 20-30 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮಾರ್ಚ್ 27-28ರಂದು ಪಂಜಾಬ್ನಲ್ಲಿ ಗಂಟೆಗೆ 25-35, ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಮಾರ್ಚ್ 27-29ರ ವರೆಗೆ ಹರಿಯಾಣ, ಚಂಡೀಗಢ ಮತ್ತು ನವದೆಹಲಿಯಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಛತ್ತೀಸ್ಗಢದಿಂದ ಮನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತವಾಗುವ ಮುನ್ಸೂಚನೆ ಹಿನ್ನೆಲೆ ಇಂದು ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ಕರ್ನಾಟಕ, ಕೇರಳ ಮತ್ತು ಮಾಹೆ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುವುದಿಲ್ಲ. ನಂತರ ತಾಪಮಾನದಲ್ಲಿ 3-4°C ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಭಾರತದಲ್ಲಿ ಹಲವು ರಾಜ್ಯಗಳಲ್ಲಿ ಮುಂದಿನ 3-4 ದಿನಗಳಲ್ಲಿ ತಾಪಮಾನದಲ್ಲಿ 2-3°Cಯಷ್ಟು ಕ್ರಮೇಣ ಏರಿಕೆಯಾಗಲಿದ್ದು, ನಂತರ 2-3°Cನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ಗುಜರಾತ್ ಮತ್ತು ಮಹಾರಾಷ್ಟ್ರದ ಹಲವೆಡೆ ಮುಂದಿನ 3 ದಿನಗಳವರೆಗೆ ತಾಪಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ನಂತರ 2-3°Cನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯ ಭಾರತದ ಹಲವೆಡೆ ಮುಂದಿನ 3 ದಿನಗಳಲ್ಲಿ ತಾಪಮಾನದಲ್ಲಿ ಕ್ರಮೇಣ 2-3°Cಯಷ್ಟು ಏರಿಕೆಯಾಗಲಿದ್ದು, ನಂತರ ಹವಾಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆಗಳಿರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಾಖದ ಅಲೆ ಮತ್ತು ಬಿಸಿಗಾಳಿ ಎಚ್ಚರಿಕೆ: ಮುಂದಿನ ಕೆಲವು ದಿನಗಳಲ್ಲಿ ದೆಶದ ಹಲವೆಡೆ ಶಾಖದ ಅಲೆ ಮತ್ತು ಬಿಸಿ ಗಾಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ಮಾರ್ಚ್ 27-29ರ ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications