IMD Weather Forecast: ಮುಂಗಾರು ಮಳೆ.. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಈ ರಾಜ್ಯಗಳ ಜನತೆಗೆ ಐಎಂಡಿಯಿಂದ ನೆಮ್ಮದಿ ಸುದ್ದಿ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆಗಮನಕ್ಕಾಗಿ ಕಾಯುತ್ತಿದ್ದವರಿಗೆ ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ ಹಲವು ಭಾಗಗಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯಲ್ಲಿ ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದ ಹಲವು ರಾಜ್ಯಗಳಲ್ಲಿ ಬಿಸಿಲ ಬೇಗೆ ಮುಂದುವರಿದಿರುವ ನಡುವೆಯೇ ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ದೇಶದ ಒಟ್ಟು 13 ರಾಜ್ಯಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದೆ. ಮಳೆಯ ಮುನ್ಸೂಚನೆ ಇರುವ ರಾಜ್ಯಗಳ ಹಲವು ಭಾಗಗಳಲ್ಲಿ ಗಂಟೆಗೆ 50 ರಿಂದ 80 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆ?
ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಪ್ರದೇಶ, ಬಿಹಾರ್ ಮತ್ತು ಪಶ್ಚಿಮ ಬಂಗಾಳ, ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲಿ ಒಂದು ವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ನಿರಂತರವಾಗಿ ಸುರಿಯಲಿರುವ ಭಾರಿ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ಜಲಾವೃತ, ಸಂಚಾರ ದಟ್ಟಣೆ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪ್ರವಾಸದ ಪ್ಲಾನ್ನಲ್ಲಿರುವವರಿಗೆ ಮಹತ್ವದ ಮಾಹಿತಿ
ಭಾರಿ ಮಳೆಯ ಸಂದರ್ಭದಲ್ಲಿ ಈ ರಾಜ್ಯಗಳ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಹೋಗಲು ಯೋಜಿಸುತ್ತಿದ್ದವರಿಗೆ ಮಹತ್ವದ ಮಾಹಿತಿ ನೀಡಿದೆ. ಹವಾಮಾನ ಇಲಾಖೆ ಅಪ್ಡೇಟ್ಗಳನ್ನು ಪರಿಶೀಲಿಸಿ ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರವಷ್ಟೇ ನಿಮ್ಮ ಪ್ರಯಾಣವನ್ನು ಮುಂದುವರಿಸಿ ಎಂದು ಸಲಹೆ ನೀಡಲಾಗಿದೆ.
4-5 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ದೇಶದಲ್ಲಿ ನೈಋತ್ಯ ಮುಂಗಾರು ಅತ್ಯಂತ ವೇಗವಾಗಿ ಮುಂದೆ ಸಾಗುತ್ತಿದೆ. ಮುಂದಿನ 4-5 ದಿನಗಳಲ್ಲಿ ದೇಶದ ಪ್ರಮುಖ ರಾಜ್ಯಗಳ ಹಲವು ಭಾಗಗಳಿಗೆ ಮುಂಗಾರು ಮಾರುತಗಳು ವ್ಯಾಪಿಸಲಿದ್ದು, ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಭಾರತದ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ, ಪೂರ್ವ ಮತ್ತು ಮಧ್ಯ ಭಾರತದ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ್ ಮತ್ತು ದಕ್ಷಿಣ ಛತ್ತೀಸ್ಗಢ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಮಹತ್ವದ ಮಾಹಿತಿ
ಮುಂಗಾರು ಪ್ರಭಾವದಿಂದಾಗಿ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದ ಹಲವು ಭಾಗಗಳಲ್ಲಿ ಜೂನ್ 19ರ ವರೆಗೆ ಅಲೆಗಳ ಅಬ್ಬರ ಮತ್ತು ಬಿರುಗಾಳಿ ತೀವ್ರವಾಗಿರಲಿದೆ. ಆದ್ದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮವಾಗಿ ಸೂಚನೆ ನೀಡಿದೆ.
ಜೂನ್ 15 ರಿಂದ 17ರ ವರೆಗೆ ಮಳೆ
ರಾಷ್ಟ್ರ ರಾಜಧಾನಿ ದೆಹಲಿ-ಎನ್ಸಿಆರ್ನಲ್ಲಿ ಜೂನ್ 15 ರಿಂದ ಜೂನ್ 17ರ ವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 40 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ. ಇಂದು (ಜೂನ್ 15) ದೆಹಲಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಗರಿಷ್ಠ ತಾಪಮಾನದಿಂದ ಬೇಸತ್ತಿದ್ದ ಇಲ್ಲಿನ ಜನತೆಗೆ ಕೊಂಚ ಮುಕ್ತಿ ಸಿಗುವ ನಿರೀಕ್ಷೆಯಿದೆ.












Click it and Unblock the Notifications