ಹಿಮಾಚಲದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸೇರಿ ಐವರ ಅಮಾನತು
ಶಿಮ್ಲಾ, ಅಕ್ಟೋಬರ್ 31: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ಆಡಳಿತಾರೂಢ ಬಿಜೆಪಿ ಪಕ್ಷವು ತನ್ನ ಐವರು ಬಂಡಾಯ ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಕ್ಕಾಗಿ ಸೋಮವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಅಮಾನತುಗೊಂಡವರಲ್ಲಿ ಮಾಜಿ ಶಾಸಕರಾದ ತೇಜ್ವಂತ್ ಸಿಂಗ್ ನೇಗಿ (ಕಿನ್ನೌರ್), ಕಿಶೋರಿ ಲಾಲ್ (ಅನ್ನಿ), ಮನೋಹರ್ ಧಿಮಾನ್ (ಇಂದೋರಾ), ಕೆ ಎಲ್ ಠಾಕೂರ್ (ನಲಗಢ) - ಮತ್ತು ಬಿಜೆಪಿಯ ಹಿಮಾಚಲ ಘಟಕದ ಉಪಾಧ್ಯಕ್ಷ ಕೃಪಾಲ್ ಪರ್ಮಾರ್ ಸೇರಿದ್ದಾರೆ. ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಎಲ್ಲಾ ನಾಯಕರು ತಮ್ಮ ತಮ್ಮ ಕ್ಷೇತ್ರಗಳಿಂದ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಸೇಬು ರೈತರ ಪ್ರತಿಭಟನೆ: ಹಿಮಾಚಲ ಚುನಾವಣೆ ಮೇಲೆ ಪರಿಣಾಮ?
ಪರ್ಮಾರ್ ಫತೇಪುರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹತ್ತಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದು, ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷವು ಕಠಿಣ ಸ್ಥಿತಿಯಲ್ಲಿದೆ. ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಕ್ಕಾಗಿ ಬಿಜೆಪಿ ರಾಜ್ಯ ಘಟಕ ಕ್ರಮ ಕೈಗೊಂಡಿದೆ.
ಹಲವಾರು ಬಿಜೆಪಿ ಅಭ್ಯರ್ಥಿಗಳು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದಾರೆ ಎಂಬ ವರದಿಗಳು ಇತ್ತೀಚೆಗೆ ಹೊರಬಂದ ನಂತರ ಈ ಬೆಳವಣಿಗೆ ನಡೆದಿದೆ. ಮಂಡಿಯಲ್ಲಿ 11 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡ ನಂತರ ಸಿಎಂ ಜೈರಾಮ್ ಠಾಕೂರ್ ಅವರ ತವರು ಜಿಲ್ಲೆಯ 10 ಸ್ಥಾನಗಳ ಪೈಕಿ ಮೂರರಲ್ಲಿ ಬಿಜೆಪಿ ಬಂಡಾಯ ಎದುರಿಸುತ್ತಿದೆ.
ಬಿಜೆಪಿಯಿಂದ ಟಿಕೆಟ್ ಹಂಚಿಕೆಯ ಸಮಯದಲ್ಲಿ ಕಡೆಗಣಿಸಲ್ಪಟ್ಟ ನಂತರ ಗಿಯಾನ್ ಚಂದ್, ಮಾಜಿ ಸಚಿವ ರೂಪ್ ಸಿಂಗ್ ಅವರ ಪುತ್ರ ಅಭಿಷೇಕ್ ಮತ್ತು ಪರ್ವೀನ್ ಶರ್ಮಾ ಕ್ರಮವಾಗಿ ನಾಚನ್, ಸುಂದರ್ನಗರ ಮತ್ತು ಮಂಡಿಯಿಂದ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.