Rapid Antigen Test ಹೆಚ್ಚಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ
ನವದೆಹಲಿ, ಡಿಸೆಂಬರ್ 31; ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ Rapid Antigen Test ಸಂಖ್ಯೆಯನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಿಗೆ ಶುಕ್ರವಾರ ಈ ಕುರಿತು ಪತ್ರ ಬರೆದಿದ್ದಾರೆ. ಆರ್ಟಿಪಿಸಿಆರ್ ಪರೀಕ್ಷೆಯ ವರದಿಯು ಬರಲು 5 ರಿಂದ 8 ಗಂಟೆಯಾಗುತ್ತಿದೆ. ಆದ್ದರಿಂದ ಆರ್ಎಟಿ ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಯಾವುದೇಗೆ ವ್ಯಕ್ತಿ ಜ್ವರ/ ಜ್ವರ ರಹಿತ ಕೆಮ್ಮು, ತಲೆ ನೋವು, ಉಸಿರಾಟದ ತೊಂದರೆ, ಮೈ-ಕೈ ನೋವು, ರುಚಿ ಇಲ್ಲದಿದ್ದರೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷೆಯ ವರದಿ ಪಾಸಿಟಿವ್ ಬಂದರೆ ಆರ್ಟಿಪಿಸಿಆರ್ ಪರೀಕ್ಷೆಯನ್ನು ಸಹ ಮಾಡಬೇಕು ಎಂದು ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.

Rapid Antigen Test ಹೆಚ್ಚಿಸುವ ಜೊತೆಗೆ ಮನೆಯಲ್ಲಿಯೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಲು ಬೆಂಬಲ ನೀಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಆರ್ಟಿಪಿಸಿಆರ್ ವರದಿ ಬರುವುದು ತಡವಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಆರ್ಎಟಿ ಪರೀಕ್ಷೆಗೆ ಸೂಚನೆ ಕೊಡಲಾಗಿದೆ.
ಕೋವಿಡ್ ಪ್ರಕರಣಗಳು ಹೆಚ್ಚಳ; ಮಹಾರಾಷ್ಟ್ರ, ನವದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶುಕ್ರವಾರ ಬೆಳಗ್ಗೆ ಮಾಹಿತಿ ಪ್ರಕಾರ ದೇಶದಲ್ಲಿ 16,764 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3,48,38,804 ಆಗಿದೆ.
ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ 3451, ಚಂಡೀಗಢ್ನಲ್ಲಿ 49, ಕರ್ನಾಟಕದಲ್ಲಿ 832, ಮಹಾರಾಷ್ಟ್ರದಲ್ಲಿ 8067, ಕೇರಳದಲ್ಲಿ 2,676 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ನಿರ್ಬಂಧಗಳನ್ನು ಘೋಷಣೆ ಮಾಡಿದೆ. ಮಾಲ್, ಜ್ಯುವೆಲ್ಲರಿ ಶಾಪ್, ಬಟ್ಟೆ ಅಂಗಡಿ, ಸಿನಿಮಾ ಮಂದಿರ, ಬ್ಯುಟಿ ಪಾರ್ಲರ್ಗಳಲ್ಲಿ ಶೇ 50ರಷ್ಟು ಜನರು ಮಾತ್ರ ಇರಬೇಕು ಎಂದು ಸೂಚನೆ ನೀಡಿದೆ.
1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ರದ್ದುಗೊಳಿಸಲಾಗಿದೆ. 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಸುವಾಗ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಹೇಳಿದ್ದು, ಈ ಆದೇಶ ಜನವರಿ 10ರ ತನಕ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಹೇಳಿದೆ.
ಮುಂಬೈ ನಗರದಲ್ಲಿ ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶುಕ್ರವಾರ ನಗರದಲ್ಲಿ 5,428 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಮುಂಬೈ ನಿವಾಸಿಗಳಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಈ ಹಿನ್ನಲೆಯಲ್ಲಿ ಮುಂಬೈ ಮಹಾನಗರ ಪಾಲಿಕೆ ಹಲವಾರು ನಿರ್ಬಂಧಗಳನ್ನು ಘೋಷಣೆ ಮಾಡಿದೆ. ಜನವರಿ 15ರ ತನಕ ಜಾರಿಯಲ್ಲಿರುವಂತೆ ನಗರದಲ್ಲಿ ಸೆಕ್ಷನ್ 144 (ಸಿಆರ್ಪಿಸಿ) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಲಸಿಕೆ ಅಭಿಯಾನ; ದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಜನವರಿ 3ರ ಸೋಮವಾರದಿಂದ ಮಕ್ಕಳಿಗೆ ದೇಶದಲ್ಲಿ ಲಸಿಕೆ ಸಿಗಲಿದೆ. ಇದರಿಂದಾಗಿ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಹೋಗುವ ಮಕ್ಕಳ ಆತಂಕವನ್ನು ಮತ್ತು ಅವರ ಪೋಷಕರ ಆತಂಕವನ್ನು ಕಡಿಮೆ ಮಾಡಲಾಗುತ್ತದೆ.
ಇನ್ನು ಕೋವಿಡ್ ಹೋರಾಟದಲ್ಲಿ ತೊಡಗಿರುವ ವಾರಿಯರ್ ಗಳು, ಆರೋಗ್ಯರಕ್ಷಣಾ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ 'ಮುಂಜಾಗರೂಕತಾ ಡೋಸ್' ನೀಡಲಾಗುತ್ತದೆ. ಜನವರಿ 10 ರಂದು ಈ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ.












Click it and Unblock the Notifications