ಮುಂಬೈಯಲ್ಲಿ 'ಇಂಡಿಯಾ' ಮೈತ್ರಿಕೂಟದ ಸಭೆ: ಸೀಟು ಹಂಚಿಕೆ ಸೇರಿದಂತೆ ಮಹತ್ವದ ವಿಚಾರಗಳ ಚರ್ಚೆ- ಏನೇನು ತಿಳಿಯಿರಿ
ಮುಂಬೈ, ಆಗಸ್ಟ್ 30: ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ನಾಯಕರು ಮುಂಬೈ ಮಹಾನಗರದಲ್ಲಿ ಮೂರನೇ ಸಭೆ ನಡೆಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
'ಇಂಡಿಯಾ' ಮೈತ್ರಿಕೂಟದ ಸಭೆಯ ಹತ್ತು ಪ್ರಮುಖ ಅಂಶಗಳು ಇಲ್ಲಿವೆ
1- ಮುಂಬೈನ ಮಹಾನಗರದಲ್ಲಿರುವ ಐಷಾರಾಮಿ ಹೋಟೆಲ್ ಗ್ರ್ಯಾಂಡ್ ಹಯಾಟ್ನಲ್ಲಿ ಸಭೆ ನಡೆಯಲಿದೆ. ಹಿಂದಿನ ಸಭೆಗಳು ಪಾಟ್ನಾ ಮತ್ತು ಬೆಂಗಳೂರಿನಲ್ಲಿ ನಡೆದಿವೆ.

2. ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಮಗ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈಗಾಗಲೇ ಮುಂಬೈ ತಲುಪಿದ್ದಾರೆ.
3. ಪ್ರತಿಪಕ್ಷಗಳು ಅವಿಶ್ವಾಸ ಮಂಡಿಸಿದ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮುಂಬೈನ ಸಭೆಯು ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ. ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಇಂಡಿಯಾ ಮೈತ್ರಿಕೂಟ ಸೋಲು ಅನುಭವಿಸಿತ್ತು. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿತ್ತು.
4. ಲೋಕಸಭೆ ಚುನಾವಣೆ ಹಾಗೂ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವು ಈ ಬಾರಿಯ ಸಭೆಯಲ್ಲಿ ಅತ್ಯಂತ ನಿರ್ಣಾಯಕ ವಿಷಯವಾಗಿದೆ.
5. ಎರಡು ದಿನಗಳ ಸಭೆಯ ನಂತರ ಇಂಡಿಯಾ ಮೈತ್ರಿಕೂಟದ ಹೊಸ ಲೋಗೋವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
6. ಇಂಡಿಯಾ ಮೈತ್ರಿಕೂಟಕ್ಕೆ ಕೆಲವು ಹೊಸ ಪಕ್ಷಗಳ ಸೇರ್ಪಡೆ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಬಣವನ್ನು ವಿಸ್ತರಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.

7. ಪ್ರಧಾನಿ ಅಭ್ಯರ್ಥಿ ಕುರಿತು ಕುರಿತು ಯಾವುದೇ ಚರ್ಚೆ ನಡೆಯುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಗೆಲುವು ದಾಖಲಿಸಿದ ನಂತರವೇ ಪ್ರಧಾನಿಯನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಚುನಾಯಿತ ಸಂಸದರು ತಮ್ಮ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.
8. ಇದೇ ಸಭೆಯಲ್ಲಿ ಮುಂಬೈನ ಕಾಂಗ್ರೆಸ್ ಘಟಕವು ರಾಹುಲ್ ಗಾಂಧಿ ಅವರನ್ನು ಅಭಿನಂದಿಸಲಿದೆ. ರಾಹುಲ್ ಅವರು ಮತ್ತೆ ಸಂಸದರಾಗಿ ನೇಮಕವಾಗಿರುವುದಕ್ಕೆ ಕಾಂಗ್ರೆಸ್ ಘಟಕವು ಅಭಿನಂದನೆ ಸಲ್ಲಿಸಲಿದೆ.
9. ಮಹಾರಾಷ್ಟ್ರಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಪೈಪೋಟಿ ಇಲ್ಲವೆಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. 'ಮಹಾಘಟಬಂಧನದಲ್ಲಿ ಯಾವುದೇ ಪೈಪೋಟಿ ಇಲ್ಲ. ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಉದ್ಧವ್ ಠಾಕ್ರೆ ಕೂಡ ಸ್ಪಷ್ಟಪಡಿಸಿದ್ದಾರೆ. ಮೋದಿ ಸರಕಾರವನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ' ಎಂದು ನಾನಾ ಪಟೋಲೆ ತಿಳಿಸಿದ್ದಾರೆ.
10. ಛತ್ತೀಸ್ಗಢದ ಮುಖ್ಯಮಂತ್ರಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಈ ಸಭೆಯಲ್ಲಿ ಭಾಗವಹಿಸಬಹುದು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್ಸಿಪಿ ನಾಯಕ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications