India rain: ಈ ಎರಡು ರಾಜ್ಯಗಳಲ್ಲಿ ನಾಳೆಯೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ, ಎಲ್ಲೋ ಅಲರ್ಟ್ ಘೋಷಣೆ
ನವದೆಹಲಿ, ನವೆಂಬರ್, 22: ದೇಶದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಹಾಗೆಯೇ ನಾಳೆಯೂ (ನವೆಂಬರ್ 23) ಕೂಡ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ರಾಜ್ಯಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ವಿವಿಧ ಭಾಗಗಳಲ್ಲಿ ಗುರುವಾರ ಬಿರುಸಿನ ಮಳೆಯಾಗಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ತೀರ್ಮಾನ ಮಾಡಿದೆ. ಹಾಗೆಯೇ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.
ರಾಜಧಾನಿ ಚೆನ್ನೈ ಸಹಿತ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಬುಧವಾರ (ನವೆಂಬರ್ 22) ಮಳೆ ಸುರಿದಿದೆ. ಚೆನ್ನೈಯ ಮೂಲಂಬಾಕಂ ಎಂಬಲ್ಲಿ ಸಬ್ವೇಗೆ ಪ್ರವಾಹದ ನೀರು ನುಗ್ಗಿ ಬಸ್ ಆಂಶಿಕವಾಗಿ ಮುಳುಗಿತ್ತು. ಕೂಡಲೇ ಚೆನ್ನೈ ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸ ಅನ್ನು ನೀರಿನಿಂದ ಹೊರಕ್ಕೆ ಎಳೆದಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಕಾರೈಕಲ್ ಮತಿತ್ತರ ಹಲವು ಸ್ಥಳಗಳಲ್ಲಿ ಮಳೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲೂ ಭಾರೀ ಮಳೆ ಸುರಿದಿದೆ. ಕೆಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದಿದ್ದ ಉದ್ಯಾನನಗರ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಸಂಜೆಯಾಗುತ್ತಿದ್ದಂತೆ ಏಕಾಏಕಿ ಮಳೆ ಸುರಿದಿದ್ದರಿಂದ ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರು ರಸ್ತೆಯಲ್ಲೇ ನಿಂತು ಪರದಾಡಿದ ಘಟನೆಗಳು ನಡೆದವು.
ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ (ನವೆಂಬರ್ 22) ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆ ಸುರಿಯಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಭ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಕಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಿಸಿಲಿನ ವಾತಾರವರಣ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications