India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನ ಬಿರುಗಳಿ ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನು ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ಹಿಮಾಚಲ ಪ್ರದೇಶ, ಕೇರಳ, ಒಡಿಶಾ ಮತ್ತು ನವದೆಹಲಿಯ ಕೆಲವು ಪ್ರದೇಶಗಳಲ್ಲಿ ಈ ವಾರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಅಲ್ಲದೆ, ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನವದೆಹಲಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಈಗಾಗಲೇ ಮಂಗಳವಾರ ನದೆಹಲಿಯಲ್ಲಿ ಸಾಧಾರಣ ಮಳೆಯಾಗಿದೆ. ಅಲ್ಲದೆ ಇಲ್ಲಿ ಗರಿಷ್ಠ ತಾಪಮಾನ 33.6 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ನಗರದ ಇನ್ನೂ ಕೆಲವೆಡೆ ಮಂಗಳವಾರ ಬೆಳಗಿನ ವೇಳೆಗೆ 20.2 ಮಿಲಿ ಮೀಟರ್ ಮಳೆಯಾಗಿದ ಎಂದು ತಿಳಿಸಿದೆ.
ಕೇರಳಕ್ಕೆ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಈ ಭಾಗದ ಎರ್ನಾಕುಲಂ, ತ್ರಿಶೂರ್, ಮತ್ತು ಇಡುಕ್ಕಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಗುಡುಗು ಸಹಿತ ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದ ಎಂದು ತಿಳಿಸಿದೆ. ಇನ್ನು ಈ ಭಾಗದಲ್ಲಿ ಗಾಳಿ ವೇಗವು ಗಂಟೆಗೆ 40 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಈಗಾಗಲೇ ರಾಜಸ್ಥಾನದಲ್ಲಿ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗಿದ್ದು, ಜೈಪುರದ ಹಲವೆಡೆ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಹಾಗೆಯೇ ಈ ಭಾಗದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಸ್ಥಳೀಯ ಹವಾಮಾನ ಸಂಸ್ಥೆಗಳು ಮುನ್ಸೂಚನೆ ನೀಡಿವೆ.
ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಭಾರೀ ಮಳೆಯಿಂದ ಅವಾಂತರಗಳೆ ಸೃಷ್ಟಿಯಾಗಿವೆ. ಇನ್ನು ಮಾರ್ಕಂಡೆ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮತ್ತೊಂದೆಡೆ ಮುಂದಿನ 5 ದಿನ ಭಾರೀ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಚಂಬಾ, ಕಂಗ್ರಾ, ಮಂಡಿ, ಸೋಲನ್, ಸಿರ್ಮೌರ್, ಶಿಮ್ಲಾ, ಉನಾ, ಬಿಲಾಸ್ಪುರ್ ಮತ್ತು ಹಮೀರ್ಪುರ್ ಭಾಗಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇಂದು (ಆಗಸ್ಟ್ 14) ಒಡಿಶಾದ, ಮಯೂರ್ಭಂಜ್, ಕಿಯೋಂಜಾರ್ ಮತ್ತು ಸುಂದರ್ಗಢದಂತಹ ಜಿಲ್ಲೆಗಳಿಗೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಹರಿಯಾಣ ಮತ್ತು ಬೆಂಗಳೂರು ಸೇರಿ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ನೀರು ಮತ್ತು ವಿದ್ಯುತ್ ಕಡಿತವಾದ ಘಟನೆಗಳು ನಡೆದವು.












Click it and Unblock the Notifications