ಮಾನವ ಹಕ್ಕು ಉಲ್ಲಂಘನೆಯಾಗಲು ಬಿಡುವುದಿಲ್ಲ : ರಾವತ್
ನವದೆಹಲಿ, ಜೂನ್ 17 : "ಉದ್ವಿಗ್ನಗೊಂಡಿರುವ ಕಾಶ್ಮೀರದಲ್ಲಿ ಶಾಂತಿ ಕಾಪಾಡುವುದು ಭಾರತೀಯ ಸೇನೆಯ ಮುಖ್ಯ ಉದ್ದೇಶ. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ಸೇನೆ ಬದ್ಧವಾಗಿದೆ" ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಮಾಧ್ಯಮವನ್ನು ಉದ್ದೇಶಿಸಿ ಶನಿವಾರ ಮಾತನಾಡಿದ ಅವರು, ಕಾಶ್ಮೀರದಲ್ಲಿ ಕೆಲ ಪ್ರದೇಶದಲ್ಲಿ ಮಾತ್ರ ಶಾಂತಿ ಕದಡಿದ್ದು, ಶಾಂತಿ ಕಾಪಾಡುವಲ್ಲಿ ಸೇನೆ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದೆ. ಚಿಂತೆ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
ಅಲ್ಲಿನ ವಿದ್ಯಾರ್ಥಿಗಳು ಕಲ್ಲು ತೂರಾಟದಲ್ಲಿ ತೊಡಗಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೇನೆ ಸನ್ನದ್ಧವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮಾನವೀಯ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆಯಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಅನಗತ್ಯ ಸುದ್ದಿಗಳನ್ನು ಹರಡಲಾಗುತ್ತಿರುವುದರಿಂದ ಯುವಕರು, ವಿದ್ಯಾರ್ಥಿಗಳು ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ, ಜನರ ಸಂರಕ್ಷಣೆಗಾಗಿ ಭಾರತೀಯ ಸೇನೆ ನಿರಂತರವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.