ಜ.22ರಂದು ಪಂಚರಾಜ್ಯಗಳಲ್ಲಿ ಬಹಿರಂಗ ಪ್ರಚಾರದ ಭವಿಷ್ಯ ನಿರ್ಧಾರ
ನವದೆಹಲಿ, ಜನವರಿ 21: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ.
ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೇಂದ್ರ ಆರೋಗ್ಯ ಸಚಿವಾಲಯ, ತಜ್ಞರು, ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಂದ ಅಭಿಪ್ರಾಯ ಪಡೆದುಕೊಳ್ಳಲಾಗುತ್ತದೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಚುನಾವಣಾ ಸಮಿತಿಯು ಶನಿವಾರ ವರ್ಚುವಲ್ ಸಭೆ ನಡೆಸಲಿದೆ. ಈ ವೇಳೆ ದೇಶದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚೆ ನಡೆಯಲಿದೆ.
ಯುಪಿಯಲ್ಲಿ ಬಿಜೆಪಿಗೆ ಮತ್ತೊಂದು ಸವಾಲ್: ಬಂಧುತ್ವದ ಮೇಲೆ ಟಿಕೆಟ್ ನೀಡಲು ಒತ್ತಾಯ
ಕಳೆದ ಜನವರಿ 8ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ವಿಧಾನಸಭೆ ಚುನಾವಣಾ ದಿನಾಂಕ ಘೋಷಿಸಿದ ಚುನಾವಣಾ ಆಯೋಗ, ಈ ಮೊದಲು ಜನವರಿ 15 ರವರೆಗೆ ಚುನಾವಣಾ ಮೆರವಣಿಗೆ, ರೋಡ್ ಶೋ ಮತ್ತು ಬೈಕ್ ಶೋ ರೀತಿಯ ಪ್ರಚಾರ ಕಾರ್ಯಕ್ರಮಗಳನ್ನು ನಿಷೇಧಿಸಿತ್ತು. ಈಗ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಚುನಾವಣಾ ಪ್ರಚಾರಗಳಿಗೆ ನಿರ್ಬಂಧ ಜಾರಿಯಲ್ಲಿದೆ. ಶನಿವಾರದ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿಕೊಂಡು ನಂತರ ಬಹಿರಂಗ ಪ್ರಚಾರಕ್ಕೆ ಅವಕಾಶ ನೀಡುವುದೇ ಬೇಡವೇ ಎಂಬುದನ್ನು ತೀರ್ಮಾನಿಸಲಾಗುತ್ತದೆ.
ಚುನಾವಣಾ ಪ್ರಚಾರ ನಿರ್ಬಂಧ ವಿಸ್ತರಿಸಿದ್ದ ಆಯೋಗ:
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸಾರ್ವಜನಿಕ ಪ್ರಚಾರಕ್ಕೆ ಈ ಮೊದಲು ಜನವರಿ 15ರವರೆಗೂ ನಿರ್ಬಂಧ ವಿಧಿಸಲಾಗಿತ್ತು. ತದನಂತರ ಜನವರಿ 15ರಂದು ಸಭೆ ನಡೆಸಿದ ಆಯೋಗವು, ಅಂದು ದೇಶದಲ್ಲಿದ್ದ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಬಂಧದ ಅವಧಿಯನ್ನು ಜನವರಿ 22ರವರೆಗೆ ವಿಸ್ತರಿಸಿತ್ತು.
ಆದಾಗ್ಯೂ, ಇದು ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ಜನರು ಅಥವಾ ಸಭಾಂಗಣದ ಸಾಮರ್ಥ್ಯದ ಶೇಕಡಾ 50ರಷ್ಟು ಜನರನ್ನು ಒಳಗೊಂಡಂತೆ ಅಥವಾ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ನಿಗದಿಪಡಿಸಿದ ನಿಗದಿತ ಮಿತಿಯ ಒಳಾಂಗಣ ಸಭೆಗಳನ್ನು ನಡೆಸುವುದಕ್ಕೆ ವಿನಾಯಿತಿ ನೀಡಲಾಗಿತ್ತು.
ಭಾರತದಲ್ಲಿ ಹೇಗಿದೆ ಕೊರೊನಾವೈರಸ್ ಪರಿಸ್ಥಿತಿ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 3.47 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 347,254 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 703 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 251,777 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 38,566,027 ಸೋಂಕಿತರು ಗುಣಮುಖರಾಗಿದ್ದರೆ, 488,422 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,018,799 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಐದು ರಾಜ್ಯಗಳಿಗೆ ಏಳು ಹಂತಗಳಲ್ಲಿ ಮತದಾನ:
Recommended Video
ಕಳೆದ ಜನವರಿ 8ರಂದು ಐದು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆದರೆ, ಪಂಜಾಬ್ ನಲ್ಲಿ ಫೆಬ್ರವರಿ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.