ಜ.31ರವರೆಗೆ ಪಂಚರಾಜ್ಯಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗೆ ನಿರ್ಬಂಧಿಸಿದ ಆಯೋಗ
ನವದೆಹಲಿ, ಜನವರಿ 22: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಪಂಚರಾಜ್ಯಗಳಲ್ಲಿ ಸಾರ್ವಜನಿಕ ಸಭೆ, ಚುನಾವಣಾ ಮೆರವಣಿಗೆ ಮತ್ತು ರೋಡ್ ಶೋ ಮೇಲಿನ ನಿರ್ಬಂಧವನ್ನು ಜನವರಿ 31ರವರೆಗೂ ವಿಸ್ತರಿಸಲಾಗಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಸಾರ್ವಜನಿಕ ಪ್ರಚಾರಕ್ಕೆ ನಿರ್ಬಂಧವನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ಕೊವಿಡ್-ಸಂಬಂಧಿತ ಪ್ರೋಟೋಕಾಲ್ಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಮುಖ್ಯ ಕಾರ್ಯದರ್ಶಿ ಅಥವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ವೈಯಕ್ತಿಕವಾಗಿ ಜವಾಬ್ದಾರರಾಗಿರುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ. ಕೊರೊನಾವೈರಸ್ ಶಿಷ್ಟಾಚಾರಗಳನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳ ವಿರುದ್ಧ ಚುನಾವಣಾ ಸಂಸ್ಥೆಯು ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.

ಕೆಲವು ನಿಯಮಗಳ ಸಡಲಿಸಿದ ಆಯೋಗ:
ಕೇಂದ್ರ ಚುನಾವಣಾ ಆಯೋಗ ಶನಿವಾರ ರಾಜಕೀಯ ಪಕ್ಷಗಳಿಗೆ ಕೆಲವು ಸಡಿಲಿಕೆಗಳನ್ನು ಪ್ರಕಟಿಸಿದೆ.
- ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆಗಳು ಅಥವಾ ಚುನಾವಣೆಯ 1ನೇ ಹಂತದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಸಾರ್ವಜನಿಕ ಸಭೆಗಳಿಗೆ ಜನವರಿ 28 ರಿಂದ ಅನುಮತಿ ನೀಡಲಾಗಿದೆ. ಇವುಗಳನ್ನು ಗರಿಷ್ಠ 500 ಜನರು ಅಥವಾ ಮೈದಾನದ ಸಾಮರ್ಥ್ಯದ ಶೇಕಡಾ 50ರಷ್ಟು ಜನರನ್ನು ಸೇರಿಸುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
- ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆಗಳು ಅಥವಾ ಚುನಾವಣೆಯ 2ನೇ ಹಂತದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಸಾರ್ವಜನಿಕ ಸಭೆಗಳಿಗೆ ಫೆಬ್ರವರಿ 1 ರಿಂದ ಅನುಮತಿ ನೀಡಲಾಗಿದೆ.
- ಮನೆ-ಮನೆ ಪ್ರಚಾರಕ್ಕಾಗಿ, ಗರಿಷ್ಠ ಸಂಖ್ಯೆಯ ಜನರನ್ನು ಐದರಿಂದ ಹತ್ತಕ್ಕೆ ಹೆಚ್ಚಿಸಲಾಗಿದೆ
- ಕೊವಿಡ್-19 ಶಿಷ್ಟಾಚಾರಗಳನ್ನು ಅನುಸರಿಸುವ ಷರತ್ತಿನ ಮೇಲೆ ಗೊತ್ತುಪಡಿಸಿದ ಬಹಿರಂಗ ಸ್ಥಳಗಳಲ್ಲಿ ಪ್ರಚಾರಕ್ಕಾಗಿ ವೀಡಿಯೊ ವ್ಯಾನ್ಗಳನ್ನು ಅನುಮತಿಸಲಾಗಿದೆ
ಮನೆ ಮನೆ ಪ್ರಚಾರಕ್ಕೆ ನಿಯಮಗಳು ಅನ್ವಯ:
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಸಮಾರಂಭ, ಕಾರ್ಯಕ್ರಮಗಳ ಜೊತೆ ಪ್ರಚಾರ ಮೆರವಣಿಗೆಗಳಿಗೆ ಈಗಾಗಲೇ ಎರಡು ಬಾರಿ ನಿರ್ಬಂಧವನ್ನು ವಿಸ್ತರಿಸಲಾಗಿದೆ. ಇದರ ಜೊತೆಗೆ ಚುನಾವಣಾ ಆಯೋಗವು ಕಟ್ಟುನಿಟ್ಟಾದ ಕೊವಿಡ್ ಮಾರ್ಗಸೂಚಿಗಳನ್ನು ರೂಪಿಸಿದೆ. ಮನೆ-ಮನೆಗೆ ಪ್ರಚಾರದ ಸಂದರ್ಭದಲ್ಲಿ ಐದರ ಬದಲಿಗೆ 10 ಜನರು ಭಾಗವಹಿಸುವುದಕ್ಕೆ ಅನುಮತಿ ನೀಡಲಾಗುವುದು ಎಂದು ಹೇಳಿದೆ.
ಮೂರನೇ ಬಾರಿ ನಿರ್ಬಂಧ ವಿಸ್ತರಣೆ:
ಜನವರಿ 8ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ವಿಧಾನಸಭೆ ಚುನಾವಣಾ ದಿನಾಂಕ ಘೋಷಿಸಿದ ಚುನಾವಣಾ ಆಯೋಗ, ಈ ಮೊದಲು ಜನವರಿ 15 ರವರೆಗೆ ಚುನಾವಣಾ ಮೆರವಣಿಗೆ, ರೋಡ್ ಶೋ ಮತ್ತು ಬೈಕ್ ಶೋ ರೀತಿಯ ಪ್ರಚಾರ ಕಾರ್ಯಕ್ರಮಗಳನ್ನು ನಿಷೇಧಿಸಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸಾರ್ವಜನಿಕ ಪ್ರಚಾರಕ್ಕೆ ಈ ಮೊದಲು ಜನವರಿ 15ರವರೆಗೂ ನಿರ್ಬಂಧ ವಿಧಿಸಲಾಗಿತ್ತು. ತದನಂತರ ಜನವರಿ 15ರಂದು ಸಭೆ ನಡೆಸಿದ ಆಯೋಗವು, ಅಂದು ದೇಶದಲ್ಲಿದ್ದ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಬಂಧದ ಅವಧಿಯನ್ನು ಜನವರಿ 22ರವರೆಗೆ ವಿಸ್ತರಿಸಿತ್ತು.
ಭಾರತದಲ್ಲಿ ಹೇಗಿದೆ ಕೊರೊನಾವೈರಸ್ ಪರಿಸ್ಥಿತಿ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 3.37 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 337,704 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 489 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 242,676 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 36,301,482 ಸೋಂಕಿತರು ಗುಣಮುಖರಾಗಿದ್ದರೆ, 488,911 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,113,338 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಐದು ರಾಜ್ಯಗಳಿಗೆ ಏಳು ಹಂತಗಳಲ್ಲಿ ಮತದಾನ:
ಕಳೆದ ಜನವರಿ 8ರಂದು ಐದು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆದರೆ, ಪಂಜಾಬ್ ನಲ್ಲಿ ಫೆಬ್ರವರಿ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.












Click it and Unblock the Notifications