ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಜಾಮೀನು
ನವದೆಹಲಿ, ಡಿಸೆಂಬರ್ 04: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ಕೋರಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಸುಪ್ರೀಂಕೋರ್ಟ್ ಬುಧವಾರದಂದು ಷರತ್ತುಬದ್ಧ ಜಾಮೀನು ನೀಡಿದೆ.
ಪಿ ಚಿದಂಬರಂ ಸಲ್ಲಿಸಿದ್ದ ರೆಗ್ಯುಲರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ, ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಜಾರಿ ನಿರ್ದೇಶನಾಲಯದ ವಿಚಾರಣೆಗೊಳಪಟ್ಟಿರುವ ಚಿದಂಬರಂ ಅವರು ಸುಮಾರು 105 ದಿನಗಳಿಂದ ತಿಹಾರ್ ಜೈಲುವಾಸಿಯಾಗಿದ್ದರು.
ಇದಕ್ಕೂ ಮುನ್ನ ಅನಾರೋಗ್ಯದ ಕಾರಣ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾಗಲೂ ಅರ್ಜಿ ತಿರಸ್ಕೃತಗೊಂಡಿತ್ತು. ಆದರೆ, ದೆಹಲಿಯಲ್ಲಿ ವಾಯ ಮಾಲಿನ್ಯ ಅಪಾಯ ಮಟ್ಟ ಮೀರಿರುವ ಹಿನ್ನಲೆಯಲ್ಲಿ ಚಿದಂಬರಂಗೆ ಮಾಸ್ಕ್ ನೀಡಬೇಕು. ಕುಡಿಯಲು ಶುದ್ಧ ನೀರನ್ನು ತಿಹಾರ್ ಜೈಲಿನಲ್ಲಿ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿತ್ತು.

ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದರು. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಾಲ್ ಈ ಮುಂಚೆ ವಾದಿಸಿದ್ದರು.
ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು" ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿತ್ತು.












Click it and Unblock the Notifications