Jammu & Kashmir Terrorist Attack: ಜೈಶ್ ಬೆಂಬಲಿತ ಭಯೋತ್ಪಾದಕ ಗುಂಪಿನಿಂದ ದಾಳಿ: ಸೇನಾ ಮುಖ್ಯಸ್ಥರ ಮಾಹಿತಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ನಡೆದ ಭಯೋತ್ಪಾದನಾ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಜೈಶ್ ಬೆಂಬಲಿತ ಭಯೋತ್ಪಾದಕ ಗುಂಪು, ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ಸೈನಿಕರ ಮೇಲೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
Anguished by the tragedy in Poonch District (J&K), where the Indian Army has lost its brave soldiers after a truck caught fire. In this tragic hour, my thoughts are with the bereaved families.
— Rajnath Singh (@rajnathsingh) April 20, 2023
ಪೂಂಚ್ ಜಿಲ್ಲೆಯ ಭಿಂಬರ್ ಗಲಿಯಿಂದ ಸಾಂಗಿಯೋಟ್ಗೆ ತೆರಳುತ್ತಿದ್ದ ಸೇನಾ ವಾಹನದ ಮೇಲೆ ಅಪರಿಚಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಓರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ರಾಜೌರಿಯ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಉಗ್ರರಿಗಾಗಿ ಸೇನಾ ಪಡೆಗಳು ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಘಟನೆ ನಡೆದ ಪೂಂಚ್ಗೆ ಆಗಮಿಸುತ್ತಿದ್ದಾರೆ. ರಜೌರಿ ಸೆಕ್ಟರ್ನಲ್ಲಿ ಮಧ್ಯಾಹ್ನ 3 ಸುಮಾರಿಗೆ ಈ ಘಟನೆ ನಡೆದಿದೆ. ಸೇನಾ ವಾಹನದ ಮೇಲೆ ಗ್ರೆನೇಡ್ ಮೂಲಕ ದಾಳಿ ಮಾಡಿರುವುದರಿಂದ ವಾಹನಕ್ಕೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಎಂದು ಉತ್ತರ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.
ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸಾಕಷ್ಟು ದೂರದವರೆಗೆ ಸ್ಪಷ್ಟವಾಗಿ ಏನೂ ಕಾಣಿಸುವುದಿಲ್ಲ. ಈ ಪರಿಸ್ಥಿತಿಯ ಲಾಭ ಪಡೆದಿರುವ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಉತ್ತರ ಕಮಾಂಡ್ ತಿಳಿಸಿದೆ. ಗುಂಡಿನ ದಾಳಿಯಲ್ಲಿ ರಾಷ್ಟ್ರೀಯ ರೈಫಲ್ಸ್ ಘಟಕದ ಯೋಧರು ಹುತಾತ್ಮರಾಗಿದ್ದಾರೆ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಾಗಿ ಅವರನ್ನು ನಿಯೋಜಿಸಲಾಹಗಿತ್ತು.
ಕೆಲವು ಮೂಲಗಳು ವರದಿ ಮಾಡಿರುವ ಪ್ರಕಾರ, ಮೂರು ಕಡೆಯಿಂದ ಗುಂಡಿನ ದಾಳಿಯನ್ನು ನಡೆಸಲಾಗಿದೆ, ನಂತರ ಗ್ರೆನೇಡ್ ದಾಳಿ ಮಾಡಿದ್ದಾರೆ. ಇಂಧನ ಟ್ಯಾಂಕ್ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಾಹನ ಹೊತ್ತಿ ಉರಿದಿದೆ. ನಾಲ್ವರು ಉಗ್ರರು ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ತೀವ್ರ ಶೋಧದ ಬಳಿಕವೂ ಉಗ್ರರು ದಾಳಿ ಬಳಿಕ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ, ಅವರು ಸ್ಥಳ ಬದಲಾವಣೆ ಮಾಡಿದ್ದು ಶೋಧಕಾರ್ಯ ಮುಂದುವರೆದಿದೆ.
ರಾಜನಾಥ್ ಸಿಂಗ್ ಟ್ವೀಟ್
ಭಯೋತ್ಪಾದಕ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿದರು. ಸೈನಿಕರು ಸದ್ಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ರಕ್ಷಣಾ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ದಾಳಿಯ ನಂತರ ರಕ್ಷಣಾ ಸಚಿವ ಟ್ವೀಟ್ ಮಾಡಿ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. "ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಟ್ರಕ್ಗೆ ಬೆಂಕಿ ಹೊತ್ತಿಕೊಂಡ ನಂತರ ಭಾರತೀಯ ಸೇನೆಯು ತನ್ನ ವೀರ ಸೈನಿಕರನ್ನು ಕಳೆದುಕೊಂಡಿರುವುದಕ್ಕೆ ತೀವ್ರ ದುಃಖವಾಗುತ್ತಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ" ಎಂದು ಟ್ವೀಟ್ ಮಾಡಿದ್ದರು.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಯೋಧರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. "ಪೂಂಚ್ನಲ್ಲಿ ನಡೆದ ಘೋರ ದುರಂತದಲ್ಲಿ ವೀರ ಸೈನಿಕರು ಪ್ರಾಣ ಕಳೆದುಕೊಂಡಿರುವುದು ನನಗೆ ತೀವ್ರ ದುಃಖ ತಂದಿದೆ. ಈ ದೇಶ ಅವರ ಉದಾತ್ತ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ಆ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ" ಎಂದರು.












Click it and Unblock the Notifications