Jammu And Kashmir Assembly Election 2024 Results; ಜಮ್ಮು & ಕಾಶ್ಮೀರದ ನೂತನ ಮುಖ್ಯಮಂತ್ರಿ ಘೋಷಣೆ
ಶ್ರೀನಗರ, ಅಕ್ಟೋಬರ್ 08: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ತಯಾರಿ ನಡೆಸಿವೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 90, ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರಳ ಬಹುಮತ ಪಡೆದಿದೆ. ಕಣಿವೆ ರಾಜ್ಯದ ನೂತನ ಮುಖ್ಯಮಂತ್ರಿಯೂ ಘೋಷಣೆಯಾಗಿದೆ.
2ಗಂಟೆಯ ಮಾಹಿತಿಯಂತೆ ನ್ಯಾಷನಲ್ ಕಾನ್ಫರೆನ್ಸ್ 41, ಕಾಂಗ್ರೆಸ್ 6, ಬಿಜೆಪಿ 29 ಸ್ಥಾನ, ಪಿಡಿಪಿ 4 ಮತ್ತು ಇತರರು 7 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಪಡೆದಿದೆ.

ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮುಖ್ಯಮಂತ್ರಿ ಸ್ಥಾನವನ್ನು ಪಡೆಯಲಿದೆ. ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.
"ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಿರ ಸರ್ಕಾರ ರಚನೆಯ ಅಗತ್ಯವಿತ್ತು. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸುವ ಭರವಸೆಯನ್ನು ಜನರಿಗೆ ನೀಡುತ್ತೇವೆ. ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಲಿದ್ದಾರೆ. ಪಕ್ಷವನ್ನು ಬೆಂಬಲಿಸಿದ ರಾಜ್ಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬುದ್ಗಾಮ್, ಗಂದೇರ್ಬಾಲ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡು ಕ್ಷೇತ್ರದಲ್ಲಿ ಅವರು ಗೆದ್ದರೆ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.
2009ರಲ್ಲಿ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದರು. ರಾಜ್ಯದ ಮುಖ್ಯಮಂತ್ರಿಯಾದ ಅತಿ ಕಿರಿಯ ನಾಯಕ ಎಂಬ ಹೆಗ್ಗಳಿಕೆ ಸಹ ಅವರದ್ದಾಗಿತ್ತು. ಈಗ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.
ಒಮರ್ ಅಬ್ದುಲ್ಲಾ 14ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2001 ರಿಂದ 2002ರ ತನಕ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಪಕ್ಷದ ಕೆಲಸದಲ್ಲಿ ತೊಡಗಬೇಕಾದ ಕಾರಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ರಾಜ್ಯದ ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯಕ್ಕೆ ಸ್ಥಿರ ಸರ್ಕಾರ ಬೇಕಿತ್ತು. ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ" ಎಂದು ತಿಳಿಸಿದರು.
ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಆದರೆ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ನ್ಯಾಷನಲ್ ಕಾನ್ಪರೆನ್ಸ್ ಏಕಾಂಗಿಯಾಗಿ 41 ಸೀಟುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 6 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದು, ಅಂತಿಮ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ನ್ಯಾಷನಲ್ ಕಾನ್ಪರೆನ್ಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೂ ಸಹ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಬಹುದು.












Click it and Unblock the Notifications