Breaking: ಜಮ್ಮು ಮತ್ತು ಕಾಶ್ಮೀರ ಚುನಾವಣೆ, ಬಿಜೆಪಿ ಏಕಾಂಗಿ, ಕಾಂಗ್ರೆಸ್ ಮೈತ್ರಿ ಮಾತುಕತೆ
ಶ್ರೀನಗರ, ಆಗಸ್ಟ್ 22: ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರವು, 2019ರ ಆಗಸ್ಟ್ 5ರಂದು ರದ್ದುಪಡಿಸಿದೆ. ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಏಕಾಂಗಿಯಾಗಿ ರಾಜ್ಯದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿಗೆ ಸಿದ್ಧವಾಗಿವೆ.
ಎರಡು ದಿನಗಳ ಭೇಟಿಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಮ್ಮು & ಕಾಶ್ಮೀರದಲ್ಲಿದ್ದಾರೆ. ಮತ್ತೊಂದು ಕಡೆ ಮುಂದಿನ ವಾರದಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಕಣಿವೆ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. 90 ಸದಸ್ಯ ಬಲದ ಜಮ್ಮು & ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಒಟ್ಟು ಮೂರು ಹಂತದಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶ ಅಕ್ಟೋಬರ್ 4ಕ್ಕೆ ಪ್ರಕಟವಾಗಲಿದೆ.
ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅಭಿವೃದ್ಧಿ ಮಾದರಿಯನ್ನು ಮುಂದಿಟ್ಟುಕೊಂಡು ಮತವನ್ನು ಕೇಳಲಿದೆ. ಅಲ್ಲದೇ ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್ 5ರಂದು ರದ್ದುಪಡಿಸಿದ ಬಳಿಕ ಉಂಟಾದ ಬದಲಾವಣೆಗಳನ್ನು ಜನರಿಗೆ ಹೇಳಲಿದೆ. ಭದ್ರತೆ ಸೇರಿದಂತೆ ಇತರ ವಿಚಾರದಲ್ಲಿ ಆಗಿರುವ ಮಹತ್ವದ ಪರಿವರ್ತನೆಗಳನ್ನು ಜನರ ಮುಂದಿಡಲಿದೆ.
ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಏಕಾಂಗಿಯಾಗಿ ಎದುರಿಸಲಿದೆ. ಆದರೆ ಪಕ್ಷೇತರರು, ಸಮಾನ ಮನಸ್ಕ ಪಕ್ಷಗಳ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳುವ ಆಯ್ಕೆಯನ್ನು ಪಕ್ಷವೂ ಮುಂದಿಟ್ಟುಕೊಂಡಿದೆ. ಆದರೆ ಯಾವುದೇ ಪಕ್ಷೇತರ ನಾಯಕರು ಇನ್ನೂ ಸಹ ಬಿಜೆಪಿ ಜೊತೆ ಮೈತ್ರಿ ಮಾತುಕತೆಯನ್ನು ನಡೆಸಿಲ್ಲ.
ಆರ್ಥಿಕ ಸ್ಥಿತಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಕಣಿವೆ ರಾಜ್ಯದಲ್ಲಿ ತನ್ನ ಪ್ರಚಾರವನ್ನು ನಡೆಸಲಿದೆ. ರಾಹುಲ್ ಗಾಂಧಿ ಬುಧವಾರ ಜಮ್ಮುವಿನಲ್ಲಿ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಗುರುವಾರ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕರ ಜೊತೆ ಚುನಾವಣಾ ಪೂರ್ವ ಮೈತ್ರಿಯ ಕುರಿತು ಮಾತುಕತೆ ನಡೆಯಲಿದೆ.
ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಲೋಕಸಭೆ ಚುನಾವಣೆ 2024ಕ್ಕೆ ರಚನೆಯಾದ 'ಇಂಡಿಯಾ' ಮೈತ್ರಿಕೂಟದಲ್ಲಿ ಮಿತ್ರಪಕ್ಷಗಳು. ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆಯನ್ನು ರಾಜ್ಯದಲ್ಲಿ ಎದುರಿಸಿದ್ದವು. ಆದರೆ ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗಾಗಿ ಈಗಾಗಲೇ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಗುರುವಾರ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನ್ಯಾಷನಲ್ ಕಾನ್ಫರೆನ್ಸ್ ನಾಯಕರ ಜೊತೆ ಸಭೆ ನಡೆಸಲಿದ್ದು, ಮೈತ್ರಿ ಮಾತುಕತೆ ಅಂತಿಮವಾಗುವ ನಿರೀಕ್ಷೆ ಇದೆ. ಯಾವ ಪಕ್ಷಕ್ಕೆ, ಎಷ್ಟು ಸೀಟು ಎಂಬ ಘೋಷಣೆ ಬಳಿಕ ಆಗುವ ಸಾಧ್ಯತೆ ಇದೆ.












Click it and Unblock the Notifications