ಕಣಿವೆ ರಾಜ್ಯ ಕಾಶ್ಮೀರದಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ
ಶ್ರೀನಗರ, ಜನವರಿ 11 : ಜಮ್ಮು ಮತ್ತು ಕಾಶ್ಮೀರದಲ್ಲಿ ಚುಮು-ಚುಮು ಚಳಿಯ ನಡುವೆ ಬಿಸಿ-ಬಿಸಿ ರಾಜಕೀಯ ಚರ್ಚೆಗಳು ಆರಂಭವಾಗಿವೆ. ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿವಾಸಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಭೇಟಿ ನೀಡಿದ್ದು, ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ (79) ಅವರು ಗುರುವಾರ ವಿಧಿವಶರಾಗಿದ್ದಾರೆ. ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಮುಫ್ತಿ ಮೊಮಹದ್ ಸಯೀದ್ ಅವರ ಪುತ್ರಿ ಮೆಹಬೂಬಾ ಮುಫ್ತಿ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. [ಮುಫ್ತಿ ಮೊಹಮದ್ ಸಯೀದ್ ವಿಧಿವಶ]

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮುಫ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿರುವುದು ಕಾಶ್ಮೀರದಲ್ಲಿ ಹೊಸ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಬಿಜೆಪಿ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.[ಮುಫ್ತಿ ಎಂಥಾ ರಾಜಕಾರಣಿ ಗೊತ್ತಾ?]
ಪಿಡಿಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಮೆಹಬೂಬಾ ಮುಫ್ತಿ ಅವರಿಗೆ ಸಾಂತ್ವನ ಹೇಳಲು ಸೋನಿಯಾ ಗಾಂಧಿ ಅವರು ಭೇಟಿ ಮಾಡಿದ್ದರು. ಯಾವುದೇ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಕೇಂದ್ರ ಸಚಿವ ಗಡ್ಕರಿ ಭೇಟಿ : ಬಿಜೆಪಿ ನಾಯಕ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿದ್ದಾರೆ. ಪಿಡಿಪಿ ಜೊತೆಗಿನ ಮೈತ್ರಿ ಮುಂದುವರೆಯಲಿದೆ ಮೆಹಬೂಬಾ ಮುಫ್ತಿ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.
ನಿತಿನ್ ಗಡ್ಕರ್ ಮತ್ತು ರಾಮ್ ಮಾಧವ್ ಅವರು ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಸದ್ಯ, ರಾಜ್ಯದಲ್ಲಿ ಶೋಕಾಚರಣೆ ಇದ್ದು, ಅದು ಪೂರ್ಣಗೊಳ್ಳುವ ತನಕ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.
2015ರ ಮಾರ್ಚ್ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ (ಪೀಪಲ್ ಡೆಮಾಕ್ರಟಿಕ್ ಪಾರ್ಟಿ) ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಪಿಡಿಪಿ ಅಧ್ಯಕ್ಷ ಮುಫ್ತಿ ಮೊಮಹದ್ ಸಯೀದ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. [ಪಿಟಿಐ ಚಿತ್ರ]












Click it and Unblock the Notifications