ಕತುವಾ ಅತ್ಯಾಚಾರ-ಕೊಲೆ ಪ್ರಕರಣ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ
ಕತುವಾ, ಏಪ್ರಿಲ್ 13: ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲು ಅಡ್ಡಿಪಡಿಸಿದ ವಕೀಲರ ವಿರುದ್ಧ ಸ್ಯು ಮೋಟೋ ಕ್ರಮ ಕೈಗೊಳ್ಳುವಂತೆ ವಕೀಲರ ತಂಡವೊಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಲ್ಲಿ ಮನವಿ ಮಾಡಿಕೊಂಡಿದೆ.
ಕಾಮುಕರಿಗೆ ಬಲಿಯಾದ ಮುಗ್ಧ ಬಾಲಕಿ ಪರ ಒಗ್ಗೂಡಿದ ಧ್ವನಿ
ಈ ಕುರಿತು ಇಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಜನವರಿ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಕತುವಾ ಪ್ರಾಂತ್ಯದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳನ್ನು ಎಂಟು ಜನ ಕಾಮುಕ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ್ದರು.
ಆಕೆಗೆ ಮತ್ತು ಬರುವ ಔಷಧ ನೀಡಿ ಹಲವು ದಿನಗಳ ಕಾಲ ಮಂದಿರವೊಂದರಲ್ಲಿ ಅತ್ಯಾಚಾರ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳುವುದಕ್ಕೂ ಮೊದಲು ಇಲ್ಲಿನ ಪೊಲೀಸರು ಹಿಂಜರಿದಿದ್ದರು. ಆದರೆ ಒತ್ತಡದಿಂದಾಗಿ ದೂರು ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದೂ ಬೇಡಿಕೆ ಇಡಲಾಗಿದೆ.