ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ಶಿಫಾರಸ್ಸು
ಕಾಶ್ಮೀರ, ಜೂನ್ 19: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರುವರೆ ವರ್ಷಗಳಿಂದ ಪಿಡಿಪಿಯ ಮೆಹಬೂಬಾ ಮುಫ್ತಿ ಸರಕಾರದ ಭಾಗವಾಗಿದ್ದ ಬಿಜೆಪಿ ತನ್ನ ಬೆಂಬಲವನ್ನು ಇಂದು ಹಿಂತೆಗೆದುಕೊಂಡಿದೆ. ಈ ಮೂಲಕ ಮುಫ್ತಿ ಸರಕಾರ ಪತನವಾಗಿದ್ದು, ಅಲ್ಲಿ ಈಗ ರಾಷ್ಟ್ರಪತಿ ಆಡಳಿತ ಹೇರುವ ದಿನಗಳು ಸಮೀಪಿಸಿವೆ.
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂತೆಗೆದುಕೊಳ್ಳುತ್ತಿದ್ದಂತೆ, ರಾಜ್ಯಪಾಲರನ್ನು ಭೇಟಿಯಾಗಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ನಾವು ಸರಕಾರ ರಚಿಸುತ್ತಿಲ್ಲ ಎಂದಿದ್ದರು. ಜೊತೆಗೆ ಕಾಂಗ್ರೆಸ್ ಕೂಡ ಮೈತ್ರಿ ಸರಕಾರ ರಚನೆಯಿಂದ ಹಿಂದೆ ಸರಿದಿತ್ತು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳನ್ನು ಸಂಪರ್ಕಿಸಿ ರಾಜ್ಯಪಾಲರ ಆಳ್ವಿಕೆಗೆ ರಾಜ್ಯಪಾಲ ಎನ್.ಎನ್. ವೋಹ್ರಾ ಶಿಫಾರಸ್ಸು ಮಾಡಿದ್ದಾರೆ. ಈ ಕುರಿತು ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಕಾಯ್ದೆ ಸೆಕ್ಷನ್ 92ರ ಅಡಿಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ವೋಹ್ರಾ ಶಿಫಾರಸ್ಸು ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ರಾಜ್ಯಪಾಲರಿಗೆ ಪತ್ರ ಬರೆದಿರುವ ಬಿಜೆಪಿ ನಾಯಕ ಮತ್ತು ಸುಪ್ರೀಂ ಕೋರ್ಟ್ ವಕೀಲ ಅಜಯ್ ಅಗರ್ವಾಲ್, ಸಾವಿರಾರು ಕಲ್ಲು ತೂರಾಟ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಹೊರಡಿಸಲಾಗಿದ್ದ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಈ ಎಲ್ಲಾ ಪ್ರಕರಣಗಳಲ್ಲಿ ಭಾರತೀಯ ಸೇನಾ ಪಡೆ ಸಂತ್ರಸ್ತವಾಗಿದೆ ಎಂದವರು ವಿವರಿಸಿದ್ದಾರೆ.