ಜಮ್ಮು- ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ದಾಳಿಯಲ್ಲಿ ಇಬ್ಬರು ಕಮಾಂಡಿಂಗ್ ಅಧಿಕಾರಿಗಳ ಸಾವು, ಡಿಎಸ್ಪಿಗೆ ಗಾಯ
ನವದೆಹಲಿ, ಸೆಪ್ಟೆಂಬರ್ 13: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕರ್ನಲ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು. ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಸೆಪ್ಟೆಂಬರ್ 12 ಹಾಗೂ 13 ರ ಮಧ್ಯರಾತ್ರಿಯಲ್ಲಿ ಅನಂತನಾಗ್ನ ಗರೋಲ್ ಪ್ರದೇಶದಲ್ಲಿ ಕಾರ್ಯಚರಣೆ ಪ್ರಾರಂಭವಾಯಿತು. ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಇಬ್ಬರು ಕಮಾಂಡಿಂಗ್ ಆಫಿಸರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಪೊಲೀಸ್ ಅಧಿಕಾರಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರ ಪೊಲೀಸರು, 'ಅನಂತ್ನಾಗ್ನ ಕೋಕರ್ನಾಗ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಸೇನೆ ಮತ್ತು ಜೆಕೆಪಿ (ಜಮ್ಮು ಮತ್ತು ಕಾಶ್ಮೀರ ಪೊಲೀಸ್) ಅಧಿಕಾರಿಗಳು ಗಾಯಗೊಂಡಿದ್ದಾರೆ. ವಿವರಗಳನ್ನು ನೀಡಲಾಗುವುದು' ಎಂದು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಆರಂಭವಾದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ರಾಜೌರಿಯ ನಾರ್ಲಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಎರಡನೇ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ' ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.
ಮಂಗಳವಾರ ನಾರ್ಲಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಈ ಸಂದರ್ಭದಲ್ಲಿ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ರಜೌರಿ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕ ಬಲಿಯಾಗಿದ್ದಾನೆ. ಒಬ್ಬ ಸೇನಾ ಯೋಧ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪೊಲೀಸ್ ಎಸ್ಪಿಒ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಕೇಶ್ ಸಿಂಗ್ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications