ಜಾರ್ಖಂಡ್, ಮಹಾರಾಷ್ಟ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ; ಮತದಾರರ ಸೆಳೆಯಲು ಕೊನೆ ಕ್ಷಣದ ಕಸರತ್ತು
ಜಾರ್ಖಂಡ್ ವಿಧಾನಸಭಾ ಚುನಾವಣೆ ಎರಡನೇ ಹಂತದ ಮತದಾನ ನವೆಂಬರ್ 20ರಂದು ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಎಲ್ಲಾ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದು, ಗೆಲುವಿನ ಲೆಕ್ಕಾಚಾರದಲ್ಲಿವೆ. ನವೆಂಬರ್ 13ರಂದು 43 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಇಂಡಿಯಾ ಒಕ್ಕೂಟ ಮತ್ತು ಎನ್ಡಿಎ ಜಾರ್ಖಂಡ್ ಚುನಾವಣೆ ಗೆಲ್ಲಲು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದ್ದು, ಭರ್ಜರಿಯಾಗಿ ಪ್ರಚಾರ ನಡೆಸಿದೆ, ಕಾಂಗ್ರೆಸ್ ಮತ್ತು ಇತರ ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿಇದೆ.

ಎರಡನೇ ಹಂತದ ಚುನಾವಣೆಗೂ ಮೊದಲೇ ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಆರಂಭವಾಗಿದೆ. ಕಾಂಗ್ರೆಸ್ ಸರಿಯಾಗಿ ಪ್ರಚಾರ ನಡೆಸಿಲ್ಲ ಎಂದು ಜೆಎಂಎಂ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಆತಂಕವ್ಯಕ್ತಪಡಿಸಿವೆ. ಕಾಂಗ್ರೆಸ್ ಅಭ್ಯರ್ಥಿಗಳು ಇರುವ ಕ್ಷೇತ್ರದಲ್ಲಿ ಮಾತ್ರ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಪ್ರಚಾರ ಮಾಡಿದ್ದು, ಮಿತ್ರ ಪಕ್ಷಗಳ ಅಭ್ಯರ್ಥಿಗಳು ಇರುವ ಕಡೆ ಪ್ರಚಾರಕ್ಕೆ ಬಾರದೇ ಇರುವುದಕ್ಕೆ ಅಸಮಾಧಾನ ವ್ಯಕ್ತವಾಗಿದೆ.
81 ವಿಧಾನಸಭಾ ಸದಸ್ಯ ಬಲ ಹೊಂದಿರುವ ಜಾರ್ಖಂಡ್ನಲ್ಲಿ ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದು, ಇರದಲ್ಲಿ 17 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಜೆಎಂಎಂ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದು, ಆರ್ ಜೆಡಿ 6 ಮತ್ತು ಸಿಪಿಐ (ಎಲ್) ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಕಾಂಗ್ರೆಸ್ ಅಭ್ಯರ್ಥಿಗಳು ಇರುವ ಕ್ಷೇತ್ರಗಳಲ್ಲೂ ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಮಿತ್ರಪಕ್ಷಗಳು ಹೇಳಿವೆ. ಮೊದಲ ಹಂತದ ಮತದಾನಕ್ಕೆ ಒಂದು ಗಂಟೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಕೂಡ ಮಿತ್ರಪಕ್ಷಗಳ ಬೇಸರಕ್ಕೆ ಕಾರಣವಾಗಿದೆ.
ಜೆಎಂಎಂ ಪಕ್ಷದ ನಾಯಕ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ ಕಲ್ಪನಾ ಸೊರೇನ್ ಈವರೆಗೆ 60 ಚುನಾವಣಾ ರ್ಯಾಲಿಗಳನ್ನು ಒಟ್ಟಿಗೆ ನಡೆಸಿದ್ದಾರೆ. ಆದರೆ ರಾಹುಲ್ ಗಾಂಧಿ ಈವರೆಗೆ ಕೇವಲ ಏಳು ರ್ಯಾಲಿಗಳನ್ನು ಮಾತ್ರ ನಡೆಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇವಲ 4 ರ್ಯಾಲಿಗಳಲ್ಲಿ ಮಾತ್ರ ಭಾಗವಹಿಸಿ ಮಾತನಾಡಿದ್ದಾರೆ.
ಸೀಟು ಒಪ್ಪಂದದಲ್ಲಿ ಕಾಂಗ್ರೆಸ್ ಪಾಲನ್ನು ನೋಡಿದಾಗ ಅವರು ಹೆಚ್ಚಿನ ಪ್ರಚಾರ ಮಾಡಬೇಕಿತ್ತು. ಆದರೆ ರಾಷ್ಟ್ರೀಯ ನಾಯಕರು ಜಾರ್ಖಂಡ್ನಲ್ಲಿ ಪ್ರಚಾರ ಮಾಡಲು ಹೆಚ್ಚು ಆಸಕ್ತಿ ತೋರಿಸದೇ ಇರುವುದು ಜೆಎಂಎಂ ನಾಯಕರಿಗೂ ಅಚ್ಚರಿ ತಂದಿದೆ ಎಂದು ವರದಿಯಾಗಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ 30 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 16 ಸ್ಥಾನಗಳನ್ನು ಗೆದ್ದಿತ್ತು, ಜೆವಿಎಂ ಮೂರು, ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
ಮಹಾರಾಷ್ಟ್ರ ಚುನಾವಣೆ
ಮಹಾರಾಷ್ಟ್ರದಲ್ಲಿ ಕೂಡ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಎಲ್ಲಾ 288 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ), ಮಹಾಯುತಿ ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಿದೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್ ಬಣ) ಮೈತ್ರಿ ಮಾಡಿಕೊಂಡಿದ್ದು ಮಹಾ ವಿಕಾಸ ಅಘಡಿ (ಎಂವಿಎ) ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿವೆ.












Click it and Unblock the Notifications