Who is S Abdul Nazeer: ಆಂಧ್ರ ಪ್ರದೇಶ ರಾಜ್ಯಪಾಲರಾಗಿ ಕನ್ನಡಿಗ ನೇಮಕ
ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೇಮಕಗೊಂಡಿದ್ದಾರೆ. ಎಸ್. ಅಬ್ದುಲ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡದ ಮೂಲದವರು.
ನವದೆಹಲಿ, ಫೆಬ್ರವರಿ 12; ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗೌರ್ನರ್ ನೇಮಕ ಮಾಡಿದ್ದಾರೆ. ಮಹಾರಾಷ್ಟ್ರ, ಆಂಧ್ರ ಪ್ರದೇಶಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ.
ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಕನ್ನಡಿಗರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ಬೆಳವಾಯಿಯವರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಈ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು. ಅಯೋಧ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಮೂರ್ತಿಗಳ ಪೀಠದಲ್ಲಿ ಎಸ್. ಅಬ್ದುಲ್ ನಜೀರ್ ಸಹ ಒಬ್ಬರಾಗಿದ್ದರು.
ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಯುವಾಗ ಎಸ್. ಅಬ್ದುಲ್ ನಜೀರ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಔಪಚಾರಿಕ ಪೀಠದಲ್ಲಿ ಕುಳಿತು ನ್ಯಾಯಾಲಯದ ಕಲಾಪಗಳಲ್ಲಿ ಭಾಗಿಯಾಗಿದ್ದರು.
ಎಸ್. ಅಬ್ದುಲ್ ನಜೀರ್ ಪರಿಚಯ; ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಜನವರಿ 5, 1958ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಜನಿಸಿದರು.
ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಫೆಬ್ರವರಿ 18, 1983ರಲ್ಲಿ ವಕೀಲಿಕೆ ಆರಂಭಿಸಿದರು. ಬಳಿಕ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡಿದರು.
ಮೇ 12, 2003ರಂದು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಸೆಪ್ಟೆಂಬರ್ 24, 2004ರಲ್ಲಿ ಹೈಕೋರ್ಟ್ನ ಖಾಯಂ ನ್ಯಾಯಮೂರ್ತಿಯಾದರು. ಫೆಬ್ರವರಿ 17, 2017ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. 2023ರ ಜನವರಿಯಲ್ಲಿ ನಿವೃತ್ತರಾದರು.
2021ರ ಡಿಸೆಂಬರ್ನಲ್ಲಿ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೇರವೇರಿಸಿದ್ದರು.












Click it and Unblock the Notifications