2 ಯಾತ್ರೆ, 50-50 ಫಾರ್ಮುಲಾ, ಶೀಘ್ರದಲ್ಲೇ ಮೊದಲ ಪಟ್ಟಿ: ಕಾಂಗ್ರೆಸ್ ನಡೆ ಏನು?
ಬೆಂಗಳೂರು, ಅಕ್ಟೋಬರ್ 27: ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಳೆಂಟು ತಿಂಗಳು ಬಾಕಿ ಇದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ನಡೆಸಿವೆ. ಯಾತ್ರೆಗಳು, ಸಾರ್ವಜನಿಕ ಸಭೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮೂರು ಪಕ್ಷಗಳು ಹಮ್ಮಿಕೊಂಡಿದೆ. ಈಗಾಗಲೇ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯು ಕರ್ನಾಟಕವನ್ನು ದಾಟಿದೆ. ರಾಜ್ಯದಲ್ಲಿ ಮತ್ತೊಂದು ಯಾತ್ರೆ ನಡೆಸಲು ಕಾಂಗ್ರೆಸ್ ಸಿದ್ಧವಾಗಿದೆ. ಬಿಜೆಪಿ ಜನಸಂಕಲ್ಪ ಯಾತ್ರೆ ಮಾಡಿದರೂ, ಅಷ್ಟೇನೂ ಜನಬೆಂಬಲ ದೊರೆತಿಲ್ಲ. ಜೆಡಿಎಸ್ನ ಪಂಚರತ್ನ ಯಾತ್ರೆ ನವೆಂಬರ್ 1ರಂದು ಶುರುವಾಗಲಿದೆ.
ನವೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ಸಿದ್ದರಾಮಯ್ಯ ವರ್ಚಸ್ಸು ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಎತ್ತಿ ತೋರಿಸಲು ಕಾಂಗ್ರೆಸ್ ಮುಂದಾಗಿದೆ. ಇದೇ ವೇಳೆ, ನೂತನ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಬಿಜೆಪಿಗೂ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ತೀರ್ಮಾನಿಸಿದೆ.
ಈ ವಿಚಾರವಾಗಿ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, '2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಅಂತಿಮಗೊಳಿಬೇಕಿದೆ. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಘಟಕಕ್ಕೆ ಸೂಚಿಸಿದೆ' ಎಂದಿದ್ದಾರೆ.

ಮಂಗಳವಾರ ಹಾಗೂ ಬುಧವಾರ ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು.
'ಶೀಘ್ರದಲ್ಲೇ ಸ್ಕ್ರೀನಿಂಗ್ ಸಮಿತಿ ರಚಿಸಬೇಕೆಂಬ ನಿರ್ದೇಶನವಿದೆ. ಅಭ್ಯರ್ಥಿ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಸಿದ್ದಪಡಿಸಬೇಕಿದೆ. ಬಹುತೇಕ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಅಂತಿಮಗೊಳಿಸುವಂತೆ ಸೂಚನೆ ನೀಡಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಸಭೆಯಲ್ಲಿ, ಕೆಪಿಸಿಸಿ ನೂತನ ಅಧ್ಯಕ್ಷರನ್ನು ನೇಮಿಸುವ ಕುರಿತು ಚರ್ಚಿಸಲಾಗಿದೆ. ಈ ಸಭೆಯಲ್ಲಿ ಈಗಿನ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಭಾಗಿಯಾಗಿರಲಿಲ್ಲ.
ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರ ನಿಷ್ಠಾವಂತರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ.
ಪ್ರಚಾರಕ್ಕೆ 50-50 ಫಾರ್ಮುಲಾ
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಯಾರು ಎಲ್ಲಿ ಪ್ರಚಾರ ಕೈಗೊಳ್ಳಬೇಕೆಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷದ ನಾಯಕರಾದ ಕೆ.ಸಿ.ವೇಣುಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಫಾರ್ಮುಲಾ ಒಂದನ್ನು ಕಂಡುಕೊಂಡಿದ್ದಾರೆ. ಇದೇ 50-50 ಫಾರ್ಮುಲಾ. ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ 14ರಲ್ಲಿ ಸಿದ್ದರಾಮಯ್ಯ, ಇನ್ನುಳಿದ 14ರಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸಬೇಕೆಂದು ಸೂಚಿಸಿದ್ದಾರೆ. ಈ ಇಬ್ಬರು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸಿರುವುದು ಕಾಂಗ್ರೆಸ್ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿದೆ.

ಉತ್ತರ ಕರ್ನಾಟಕದಲ್ಲಿ ನಡೆಯಲಿವೆ ಎರಡು ಯಾತ್ರೆಗಳು
ಉತ್ತರ ಕರ್ನಾಟಕದಲ್ಲಿ ಎರಡು ಯಾತ್ರೆಗಳನ್ನು ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, 'ಉತ್ತರ ಕರ್ನಾಟಕದಲ್ಲಿ ಎರಡು ಯಾತ್ರೆಗಳು ನಡೆಯಲಿವೆ. ಒಂದು ಮಹಾದಾಯಿ ಪ್ರದೇಶದಲ್ಲಿ ಹಾಗೂ ಎರಡನೆಯದು ಮೇಲಿನ ಕೃಷ್ಣಾ ಪ್ರದೇಶದಲ್ಲಿ. ಹೈದರಾಬಾದ್ ಕರ್ನಾಟಕದಲ್ಲಿ ಮೂರನೇ ಯಾತ್ರೆ ಹಮ್ಮಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ. ಆದರೆ, ಅದು ತೀರ್ಮಾನವಾಗಿಲ್ಲ' ಎಂದು ಹೇಳಿದ್ದಾರೆ.
'ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿದೆ. ಅಧಿಸೂಚನೆ ಜಾರಿಯಾಗಿಲ್ಲ. ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆ ಹೊರಡಿಸಿಲ್ಲ. ಹೈದರಾಬಾದ್ ಕರ್ನಾಟಕವನ್ನು ಬಿಜೆಪಿಯವರು ಅಭಿವೃದ್ದಿ ಮಾಡಿಲ್ಲ. 371J ಅನ್ನು ಸಕ್ರಿಯವಾಗಿ ಜಾರಿಗೆ ತಂದಿಲ್ಲ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.












Click it and Unblock the Notifications