'ಗ್ಯಾರಂಟಿ' ಯುದ್ಧ: ಬೇರೆ ರಾಜ್ಯಗಳಲ್ಲಿ ಪೂರೈಸಿದ ಖಾತರಿಗಳ ಪಟ್ಟಿ ನೀಡಿ ಮೋದಿಗೆ ಕಾಂಗ್ರೆಸ್ ತಿರುಗೇಟು
ಬೆಂಗಳೂರು, ಏಪ್ರಿಲ್ 27: 40 ಪರ್ಸೆಂಟ್ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಜನರು ಕೊನೆಗೊಳಿಸುತ್ತಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ತನ್ನ ಖಾತರಿಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಗುರುವಾರ ತಿರುಗೇಟು ನೀಡಿದೆ.
ಕರ್ನಾಟಕದ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿಯವರು ಕಾಂಗ್ರೆಸ್ 'ಗ್ಯಾರಂಟಿ' ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬೇರೆ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭರವಸೆ ನೀಡಿತ್ತು. ಅಲ್ಲಿನ ಚುನಾವಣಾ ಭರವಸೆಗಳು ಕೇವಲ ಭರವಸೆಗಳಾಗಿಯೇ ಉಳಿದಿವೆ ಎಂದು ಮೋದಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ 'ಅಮಿತ್ ಶಾ ಮತ್ತು ಯೋಗಿ ನಂತರ, ಹತಾಶೆಯಿಂದ ಅತಿರೇಕದ ಕಾಮೆಂಟ್ಗಳನ್ನು ಮಾಡುವ ಸರದಿ ಈಗ ಮೋದಿಯವರದ್ದಾಗಿದೆ' ಎಂದು ತಿರುಗೇಟು ನೀಡಿದ್ದಾರೆ.
ಮೇ 10 ರಂದು ಕರ್ನಾಟಕದ ಜನರು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕೊನೆಗೊಳಿಸುತ್ತಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಕೆಲವು ದಿನಗಳ ನಂತರ, ರಾಜಸ್ಥಾನ, ಛತ್ತೀಸ್ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಆದಂತೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಖಾತರಿಗಳು ಜಾರಿಯಾಗುತ್ತವೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ನೀಡುತ್ತಿರುವ ಭರವಸೆಗಳನ್ನು ಅವರು ಪಟ್ಟಿ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಈ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಹಳೆಯ ಪಿಂಚಣಿ ಯೋಜನೆ, ಇಂದಿರಾಗಾಂಧಿ ನಗರ ಉದ್ಯೋಗ ಯೋಜನೆಯಡಿ 125 ದಿನಗಳ ಕೆಲಸ, ಆರೋಗ್ಯದ ಹಕ್ಕಿನ ಅಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತುರ್ತು ಚಿಕಿತ್ಸೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ರೂ 25 ಲಕ್ಷ ವಿಮೆ ಮತ್ತು ರೂ 10 ಲಕ್ಷ ವಿಮೆಯನ್ನು ಜಾರಿಗೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಛತ್ತೀಸ್ಗಢವನ್ನು ಉಲ್ಲೇಖಿಸಿದ ಅವರು, ಭೂಪೇಶ್ ಬಘೇಲ್ ಸರ್ಕಾರವು 17.87 ಲಕ್ಷ ರೈತರ 9,270 ಕೋಟಿ ಸಾಲ ಮನ್ನಾ ಮಾಡಿದೆ. ಭತ್ತದ ರೈತರಿಗೆ ರೂ 2,500/ಕ್ವಿಂಟಲ್ ಬೆಂಬಲ ಬೆಲೆಯನ್ನು ನೀಡಿದೆ. ರಾಜೀವ್ ಗಾಂಧಿ ಕಿಸಾನ್ ನ್ಯಾಯ ಯೋಜನೆ, ರೈತರಿಗೆ ರೂ 9,000 ಮತ್ತು ರೈತರಿಗೆ ಇನ್ಪುಟ್ ಸಬ್ಸಿಡಿ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಹಿಮಾಚಲ ಪ್ರದೇಶ ಸರ್ಕಾರದ ಭರವಸೆಗಳನ್ನು ಈಡೇರಿಸಲಾಗಿದೆ ಎಂದೂ ರಮೇಶ್ ಟ್ವೀಟ್ ಮಾಡಿದ್ದಾರೆ. ಹಳೆಯ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಮಹಿಳೆಯರಿಗೆ ಕನಿಷ್ಠ 1,500 ರೂ ನೀಡುತ್ತಿದ್ದೇವೆ. ಮೊದಲ ಹಂತದಲ್ಲಿ 2.5 ಲಕ್ಷ ಮಹಿಳೆಯರಿಗೆ ರಕ್ಷಣೆ ನೀಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.












Click it and Unblock the Notifications