Get Updates
Get notified of breaking news, exclusive insights, and must-see stories!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿದ ಡಿ ಕೆ ಶಿವಕುಮಾರ್:‌ ಚರ್ಚೆಯಾಗಿದ್ದೇನು?

ನವದೆಹಲಿ, ಡಿಸೆಂಬರ್ 21: ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ಕುರಿತು ಚರ್ಚೆ ನಡೆಸಿದ್ದಾರೆ.

ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಸಹಕಾರ ಕೋರಿದರು. ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60 ಕಿ.ಮೀ ಉದ್ದದ ನಗರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ.

Karnataka DCM DK Shivakumar To Meet Minister Nirmala Sitharaman

ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500 ಕೋಟಿ ರೂ.ನಂತೆ ಒಟ್ಟು 30 ಸಾವಿರ ಕೋಟಿ ವೆಚ್ಚ ತಗುಲುವ ಅಂದಾಜು ಮಾಡಲಾಗಿದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಡಬೇಕು.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೆಟ್ರೋ ಸಂಪರ್ಕ ಮಾರ್ಗವನ್ನು ವಿಸ್ತರಣೆಗೆ ಬಿಎಂಆರ್ ಸಿಎಲ್ ಯೋಜನೆ ರೂಪಿಸುತ್ತಿದ್ದು, ಇದಕ್ಕೆ ಭಾರತ ಸರ್ಕಾರದ ಅನುಮತಿ ಪಡೆಯಲು ನಿಮ್ಮ ಸಹಕಾರ ಬೇಕು. ಇನ್ನು ಅತಿಯಾದ ಮಳೆ ಸಮಯದಲ್ಲಿ ಬೆಂಗಳೂರಿನ ಕೆಲವು ಭಾಗಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿಶ್ವ ಬ್ಯಾಂಕ್ ನಿಂದ 3 ಸಾವಿರ ಕೋಟಿಯಷ್ಟು ಆರ್ಥಿಕ ನೆರವನ್ನು ಕೋರಿದ್ದು, ಈ ಪ್ರಸ್ತಾವನೆ ಕೇಂದ್ರ ಹಣಕಾಸು ಸಚಿವಾಲಯ ತಲುಪಿದ್ದು ಈ ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಶ್ವ ಬ್ಯಾಂಕ್ ನಿಂದ ಹಣಕಾಸಿನ ನೆರವು ಬರುವಂತೆ ಮಾಡಬೇಕು.

ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಮುಂದಾಗಿದ್ದು, ಈ ಯೋಜನೆಯಿಂದ 67 ಟಿಎಂಸಿ ನೀರನ್ನು ಹಿಡಿದಿಟ್ಟು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ, ತಮಿಳುನಾಡಿನ ಪಾಲಿನ ನೀರು ಬಿಡುಗಡೆ ಹಾಗೂ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯ ಪೂರ್ವ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ಜಲ ಆಯೋಗದಿಂದ ಅನುಮತಿ ಪಡೆಯಲಾಗಿದೆ. ಇನ್ನು ಈ ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಅನ್ನು 2019ರಲ್ಲಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ.

ಈ ಯೋಜನೆಯನ್ನು ಸುಪ್ರೀಂ ಕೋರ್ಟಿನ ತೀರ್ಪಿನ ಅನುಸಾರವಾಗಿ ತಮಿಳುನಾಡಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಜಾರಿ ಮಾಡಲಾಗುವುದು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅಗತ್ಯವಿರುವ ಅನುಮತಿಯನ್ನು ನೀಡುವಂತೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯು ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಕೃಷ್ಣಾ ನೀರು ವಿವಾದ ನ್ಯಾಯಧಿಕರಣ-2 2010ರಲ್ಲಿ ತೀರ್ಪನ್ನನು ಪ್ರಕಟಿಸಿದ್ದು ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರು ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಪ್ರಮಾಣದ ನೀರಿನ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮೂಲಕ 130 ಟಿಎಂಸಿ ನೀರಿನ ಬಳಕೆಗೆ ನೆರವಾಗಲಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಯೋಜನೆಗೆ 16,900 ಕೋಟಿ ವೆಚ್ಚವಾಗಲಿದೆ. ನ್ಯಾಯಾಧಿಕರಣದ ಆದೇಶವಾಗಿ ದಶಕವೇ ಕಳೆದರೂ ಈ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ರಾಷ್ಟ್ರೀಯ ಜಲ ನೀತಿ ಅನುಸಾರ ನೀರನ್ನು ಬಹಳ ಪರಿಣಾಮಕಾರಿ ಬಳಕೆಗೆ ಕರ್ನಾಟಕ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಯೋಜನೆಯಿಂದ ಮಧ್ಯ ಕರ್ನಾಟಕ ಭಾಗದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಯ 2,25,525 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. 29.90 ಟಿಎಂಸಿಯಷ್ಟು ಅಂತರ್ಜಲ ಭರ್ತಿಗೆ ನೆರವಾಗಲಿದೆ. 2023-24ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರ ರೂ. 5,300 ಕೋಟಿ ಆರ್ಥಿಕ ನೆರವು ಘೋಷಣೆ ಮಾಡಿದ್ದು, ಇದುವರೆಗೂ ಯಾವುದೇ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಯೋಜನೆಯ ಪ್ರಗತಿ ಕುಂಠಿತವಾಗಿದೆ. ಹೀಗಾಗಿ ಈ ಯೋಜನೆಯನ್ನು 'ರಾಷ್ಟ್ರೀಯ ಯೋಜನೆ' ಎಂದು ಪರಿಗಣಿಸಿ ಹಣಕಾಸಿನ ನೆರವು ನೀಡಬೇಕು. ಬಜೆಟ್ ನಲ್ಲಿ ಘೋಷಿಸಿರುವಂತೆ ರೂ. 5,300 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು.

ಮಹದಾಯಿ ನೀರು ವಿವಾದ ನ್ಯಾಯಾಧೀಕರಣವು 2018ರಲ್ಲಿ ತನ್ನ ಆದೇಶ ನೀಡಿದ್ದು, ಈ ಆದೇಶದಲ್ಲಿ ಕಳಸಾ ನಾಲೆಗೆ 1.72 ಟಿಎಂಸಿ ಹಾಗೂ ಬಂಡೂರಿ ನಾಲೆ ಯೋಜನೆಗೆ 2.18 ಟಿಎಂಸಿ ಕುಡಿಯುವ ನೀರನ್ನು ನಿಗದಿ ಮಾಡಿದೆ. ಈ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕರಿಸಿದೆ. ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಬಾಕಿ ಇದ್ದು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

ಕರ್ನಾಟಕದ ಪೂರ್ವಭಾಗದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನ ಕೆಲವು ಭಾಗಗಳು ಬರ ಪೀಡಿತವಾಗಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಈ ಯೋಜನೆಗೆ ಮುಂದಾಗಿದ್ದೇವೆ. ಈ ಯೋಜನೆಗೆ ಒಟ್ಟು ರೂ. 23,251 ಕೋಟಿ ವೆಚ್ಚ ಅಂದಾಜು ಮಾಡಲಾಗಿದ್ದು, ಈವರೆಗೂ ರೂ. 14,698 ಕೋಟಿ ವೆಚ್ಚವಾಗಿದೆ. ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯಾಗಿದ್ದು, ಕೇಂದ್ರ ಸರ್ಕಾರ ಈ ಯೋಜನೆಗೆ ರೂ. 9177.32 ಕೋಟಿ (ಉಳಿಕೆ ಹಣ) ಅನುದಾನವನ್ನು ನೀಡಬೇಕು ಎಂದು ಮನವಿ ಮಾಡುತ್ತೇವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+