ಕೋಲಾರದಿಂದ Siddaramaiah ಸ್ಪರ್ಧೆ ಕ್ಯಾನ್ಸಲ್? ಸಿದ್ದರಾಮಯ್ಯಗೆ ಹೈಕಮಾಂಡ್ ಕೊಟ್ಟ ಸಲಹೆ ಏನು?
ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸಲಹೆ
ದೆಹಲಿ, ಮಾರ್ಚ್18: 2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸ್ಪರ್ಧೆಗೆ ವೇದಿಕೆ ರೆಡಿಯಾಗಿದ್ದು, ಎಲೆಕ್ಷನ್ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ರಾಜ್ಯದ ಜನರ ಮನ ಗೆಲ್ಲಲು ಭರ್ಜರಿ ತಯಾರಿ ಮಾಡುತ್ತಿವೆ. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕ್ಷೇತ್ರ ಗೊಂದಲ ಇನ್ನೂ ಮುಂದುವರೆದಿದೆ.
ಚುನಾವಣೆ ಕಾವು ಹೆಚ್ಚಾಗುತ್ತಿದ್ದಂತೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ರು. ಆದರೆ ಶುಕ್ರವಾರ ಕಾಂಗ್ರೆಸ್ ಹೈಕಮಾಂಡ್ ನಾಯಕ ಸಭೆಯಲ್ಲಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸಲಹೆ ನೀಡಿದೆ ಎಂದು ಹೇಳಲಾಗುತ್ತದೆ.

ಗುರುವಾರ ದೆಹಲಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ನಿಮಗೆ ಕೋಲಾರ ಸೂಕ್ತ ಅಲ್ಲ, ನೀವು ವರುಣಾದಿಂದಲೇ ಸ್ಪರ್ಧೆ ಮಾಡಿ, ನಿಮ್ಮ ಪ್ರತಿ ಒಂದು ನಿಮಿಷವೂ ಪಕ್ಷಕ್ಕೆ ಅಗತ್ಯವಾಗಿದೆ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ. ಇನ್ನೂ ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಅಂತ ತಿಳಿದು ಬಂದಿದೆ.

ಇನ್ನೂ ಈ ವೇಳೆ ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಶುಕ್ರವಾರ ನಡೆದ ಸಭೆಯಲ್ಲೇ ನನ್ನ ಟಿಕೆಟ್ ಕ್ಲಿಯರ್ ಮಾಡಿಲ್ಲ ಎಂದು ಹೇಳುವ ಮುಲಕ ಕೋಲಾರದಲ್ಲಿ ನಿಲ್ಲುವುದಿಲ್ಲ ಅಂತ ಪರೋಕ್ಷವಾಗಿ ಹೇಳಿದ್ದಾರೆ. ನನ್ನ ಸ್ಪರ್ಧೆಯ ವಿಚಾರವನ್ನ ನಾನು ಹೈಕಮಾಂಡ್ಗೆ ಬಿಟ್ಟಿದ್ದೇನೆ, ಅವರು ಏನು ತೀರ್ಮಾನ ಮಾಡ್ತಾರೋ ಮಾಡ್ಲಿ , ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ನಂಜನಗೂಡು ಟಿಕೆಟ್ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಯಾಗಿಲ್ಲ, ಆದರೆ ದೃವನಾರಾಯಣ ಪುತ್ರನಿಗೆ ಬಹುತೇಕ ಟಿಕೆಟ್ ಪಕ್ಕಾ ಆಗಿದೆ. ಇಬ್ಬರೇ ಟಿಕೆಟ್ಗೆ ಅರ್ಜಿ ಹಾಕಿದ್ದರು. ಆದರೆ, ಮಹದೇವಪ್ಪ ಅವರು ಹಿಂದೆ ಸರಿದಿದ್ದಾರೆ. ನಾನು ಕೂಡ ದೃವನಾರಾಯಣ ಪುತ್ರನಿಗೆ ಟಿಕೆಟ್ ಕೊಡಬೇಕು ಒತ್ತಾಯ ಮಾಡಿದ್ದೇನೆ. ಇನ್ನೂ ಮಾರ್ಚ್ 22 ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ ಪ್ರತ್ಯೇಕ ಮಾತುಕತೆ
ಶುಕ್ರವಾರ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ 15 ನಿಮಿಷಗಳ ಕಾಲ ಪ್ರತ್ಯೇಕ ಸಭೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೋಲಾರ ಕ್ಷೇತ್ರದ ಕುರಿತು ಮಾತುಕತೆ ನಡೆದಿದ್ದು, ಬಿಜೆಪಿ ತಂತ್ರಗಳಿಗೆ ಪ್ರತಿಕ್ರಿಯಿಸಬೇಡಿ ಎಂದು ಸಲಹೆ ನೀಡಿದ್ದಾರೆ. ಕೋಲಾರ ಕ್ಷೇತ್ರದ ವರದಿಗಳು ನಿಮಗೆ ಸೂಕ್ತ ಎನಿಸುತ್ತಿಲ್ಲ, ಇನ್ನೊಮ್ಮೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ.
ಇನ್ನೂ ರಾಹುಲ್ ಗಾಂಧಿ ಕೊಟ್ಟ ಸಲಹೆ ಬೆನ್ನಲ್ಲೆ ಸಿದ್ದರಾಮಯ್ಯ ನಿವಾಸದಲ್ಲಿಂದು ಕೋಲಾರ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ನಾಳೆ (ಭಾನುವಾರ) ಸಿದ್ದರಾಮಯ್ಯ ಕೋಲಾರಕ್ಕೆ ತೆರಳಲಿದ್ದಾರೆ. ಇನ್ನೂ ಸಭೆಯಲ್ಲಿ ಚುನಾವಣಾ ತಯಾರಿ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.
ಇನ್ನೂ ಕಾಂಗ್ರೆಸ್ ನ 120 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಲಾಗಿದ್ದು, ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಬಳಿಕ ಕಾಂಗ್ರೆಸ್ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಜೊತೆಗೆ ರಾಜ್ಯಕ್ಕೆ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿ, ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಿ, ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ನಾಯಕರ ಜೊತೆಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications