Jalgaon train accident: ಕರ್ನಾಟಕ ಎಕ್ಸ್ಪ್ರೆಸ್ ರೈಲು ದುರಂತದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಮಹಾರಾಷ್ಟ್ರದ ಜಲಗಾಂವ್ ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ನಡೆದ ಕರ್ನಾಟಕ ಎಕ್ಸ್ಪ್ರೆಸ್ ರೈಲು ದುರಂತದಲ್ಲಿ ಸಾವಿನ ಸಂಖ್ಯೆ ಏರಿದ್ದು, ಈವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.
ರೈಲು ಅಪಘಾತದಲ್ಲಿ ಈವರೆಗೆ 11 ಮಂದಿ ಸಾವನ್ನಪ್ಪಿದ್ದು 6 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಿಂದ ಬಂದಿರುವ ಮಾಹಿತಿ ಪ್ರಕಾರ ಯಾರ ಸ್ಥಿತಿಯೂ ಚಿಂತಾಜನಕವಾಗಿಲ್ಲ ಎಂದು ಜಲಗಾಂವ್ ಎಸ್ಪಿ ಡಾ.ಮಹೇಶ್ವರರೆಡ್ಡಿ ಹೇಳಿದ್ದಾರೆ.

ಜಲಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರವು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರ ನೆರವು ನೀಡಲಿದೆ ಮತ್ತು ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಜಲಗಾಂವ್ ರೈಲು ಅಪಘಾತದ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈಲ್ವೆ ಮಂಡಳಿ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳಿಂದ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದು, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಕೆಲವು ಪ್ರಯಾಣಿಕರು ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಚೈನ್ ಎಳೆದು ರೈಲಿನಿಂದ ಇಳಿದಿದ್ದರು. ಇನ್ನೊಂದು ಕಡೆಯಿಂದ ಬೆಂಗಳೂರು-ನವದೆಹಲಿ ಕರ್ನಾಟಕ ಎಕ್ಸ್ಪ್ರೆಸ್ ಕೂಡ ವೇಗವಾಗಿ ಬರುತ್ತಿತ್ತು. ಇದರಿಂದ ಹಳಿ ಮೇಲಿದ್ದ ಕೆಲವು ಪ್ರಯಾಣಿಕರ ಮೇಲೆ ರೈಲು ಹರಿದಿದೆ. ಹಲವರು ಸಾವನ್ನಪ್ಪಿದ್ದು, ಗಂಭೀರ ಗಾಯಗಳಾಗಿವೆ. ಭುಸಾವಲ್ನಿಂದ ರೈಲು ಹತ್ತಿದವರು ಯಾರೋ ಒಬ್ಬರು ಚೈನ್ ಎಳೆದರು. ನಂತರ ಅವರು ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಖಷಚಿತಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ನಲ್ಲಿ ಸಂಭವಿಸಿದ ರೈಲು ಅಪಘಾತ ಅತ್ಯಂತ ದುಃಖಕರವಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡುತ್ತಿದೆ. ಅಪಘಾತದಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ವರದಿಗಳ ಪ್ರಕಾರ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನೆಲೆ ಪ್ರಯಾಣಿಕರು ಭಯದಲ್ಲಿ ತಮ್ಮ ಜೀವ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಚಲಿಸುವ ರೈಲಿನಿಂದ ಜಿಗಿಯಲು ಕೂಡ ಯತ್ನಿಸಿದ್ದರು. ಕೊನೆಗೆ ಚೈನ್ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಯಲ್ಲಿ ಇಳಿಯುತ್ತಿದ್ದಂತೆ, ಎದುರು ದಿಕ್ಕಿನಲ್ಲಿ ವೇಗವಾಗಿ ಬಂದ ಕರ್ನಾಟಕ ಎಕ್ಸ್ಪ್ರೆಸ್ ಅವರಿಗೆ ಡಿಕ್ಕಿ ಹೊಡೆದಿತ್ತು. ಯಾರೋ ಹಬ್ಬಿಸಿದ ವದಂತಿಯಿಂದಾಗಿ ಈ ದುರ್ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಏರುತ್ತಿದೆ.












Click it and Unblock the Notifications