ಗಡಿ ವಿವಾದದ ಕಿಚ್ಚು: ರಾಜ್ಯಕ್ಕೆ ನೀರು ನಿಲ್ಲಿಸುವ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಸಚಿವ!
ಮುಂಬೈ, ಡಿ. 21: ಕರ್ನಾಟಕ ಮಹಾರಾಷ್ಟ್ರದ ನಡುವೆ ಗಡಿ ವಿವಾದ ಹೆಚ್ಚಾಗುತ್ತೊರುವ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ಸಚಿವರು, ಸಂಸದರು ಪದೇ ಪದೇ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿಯುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆಯಾಗಿ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಸೇರಿಕೊಂಡಿದ್ದಾರೆ.
"ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸದಿದ್ದರೆ, ಮಹಾರಾಷ್ಟ್ರವು ತನ್ನ ಅಣೆಕಟ್ಟುಗಳಿಂದ ಪಕ್ಕಷ ರಾಜ್ಯಕ್ಕೆ ನೀರು ಹರಿಸುವ ಬಗ್ಗೆ ಮರುಚಿಂತನೆ ಮಾಡಬೇಕಾಗುತ್ತದೆ" ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಬುಧವಾರ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದರೇ ರಾಜ್ಯ ನೀರು ಹರಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊಕದ್ದಮೆಗೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಮಹಾರಾಷ್ಟ್ರ ಸರ್ಕಾರವು ಕಳೆದ ತಿಂಗಳು ಸಂಪುಟ ಸದಸ್ಯರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೋಡಲ್ ಸಚಿವರನ್ನಾಗಿ ನೇಮಿಸಿದೆ.
ನಾಗ್ಪುರದ ವಿಧಾನ ಭವನ ಸಂಕೀರ್ಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಶಂಭುರಾಜ್ ದೇಸಾಯಿ, ಮಹಾರಾಷ್ಟ್ರಕ್ಕೆ ಒಂದು ಇಂಚು ಭೂಮಿ ನೀಡುವುದಿಲ್ಲ ಎಂಬ ಕರ್ನಾಟಕ ಸರ್ಕಾರದ ನಿಲುವಿನ ಬಗ್ಗೆ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಡಿ ಸಮಸ್ಯೆ ಇತ್ಯರ್ಥವಾಗಿದ್ದು, ನೆರೆ ರಾಜ್ಯಕ್ಕೆ ಒಂದು ಇಂಚು ಭೂಮಿ ನೀಡುವುದಿಲ್ಲ ಎಂಬ ರಾಜ್ಯದ ನಿಲುವನ್ನು ಕರ್ನಾಟಕ ಶಾಸಕಾಂಗ ಪುನರುಚ್ಚರಿಸಿದೆ.
ಮಂಗಳವಾರ ವಿಧಾನಸಭೆಯಲ್ಲಿ ಗಡಿ ವಿವಾದದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಅವಿರೋಧ ನಿರ್ಣಯವನ್ನು ಅಂಗೀಕರಿಸಲು ಮತ್ತು ತಮ್ಮ ನಿಲುವನ್ನು ಪುನರುಚ್ಚರಿಸಲು ಸೂಚಿಸಿದ್ದರು.
ಹೀಗಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರಿಹೊಂದದ ಇಂತಹ ಹೇಳಿಕೆಗಳನ್ನು ನಾನು ಖಂಡಿಸುತ್ತೇನೆ. ಪ್ರಕರಣದ ವಿಚಾರಣೆ ವೇಳೆ ಮುಖ್ಯಮಂತ್ರಿಯೊಬ್ಬರು ಇಂತಹ ಬೆದರಿಕೆಯ ಭಾಷೆ ಬಳಸುವುದು ಒಳ್ಳೆಯದಲ್ಲ, ಇದನ್ನು ನಿಲ್ಲಿಸಬೇಕು ಎಂದು ಶಂಭುರಾಜ್ ದೇಸಾಯಿ ಹೇಳಿದ್ದಾರೆ.

"ಮಹಾರಾಷ್ಟ್ರ ತಾಳ್ಮೆಯನ್ನು ಕಾಯ್ದುಕೊಳ್ಳುತ್ತಿದ್ದು, ಮಾರ್ಚ್ ಮತ್ತು ಏಪ್ರಿಲ್ನ ಶುಷ್ಕ ಅವಧಿಯಲ್ಲಿ ಕರ್ನಾಟಕ ರಾಜ್ಯವು ಮಹಾರಾಷ್ಟ್ರದಲ್ಲಿನ ಕೊಯ್ನಾ ಮತ್ತು ಕೃಷ್ಣಾ ಅಣೆಕಟ್ಟುಗಳ ನೀರಿನ ಪೂರೈಕೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂಬುದನ್ನು ಕರ್ನಾಟಕ ಮುಖ್ಯಮಂತ್ರಿ ನೆನಪಿನಲ್ಲಿಟ್ಟುಕೊಳ್ಳಬೇಕು" ಎಂದು ಎಚ್ಚರಿಕೆ ನೀಡಿದ್ದಾರೆ.
"ಕರ್ನಾಟಕವು ಇಂತಹ ಹೇಳಿಕೆಗಳನ್ನು ನೀಡುವುದು ನಿಲ್ಲಿಸದಿದ್ದರೆ, ಮಹಾರಾಷ್ಟ್ರವು ರಾಜ್ಯಕ್ಕೆ ಹರಿಸುತ್ತಿರುವ ನೀರಿನ ಬಗ್ಗೆ ಮರುಚಿಂತನೆ ಮಾಡಬೇಕಾಗುತ್ತದೆ" ಎಂದು ದೇಸಾಯಿ ಹೇಳಿದ್ದಾರೆ.
ಎರಡು ರಾಜ್ಯಗಳ ಗಡಿ ಪ್ರದೇಶಗಳಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರೊಂದಿಗೆ ಮಹಾರಾಷ್ಟ್ರ ದೃಢವಾಗಿ ನಿಂತಿದೆ ಎಂದು ಪುನರುಚ್ಚರಿಸಿದ್ದಾರೆ,
ಇನ್ನು, ಬುಧವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ 'ಚೀನಾ ದೇಶಕ್ಕೆ ನುಗ್ಗಿದಂತೆ ನಾವೂ ಕರ್ನಾಟಕವನ್ನೂ ನುಗ್ಗುತ್ತೇವೆ' ಎಂದು ಹೇಳುವ ಮೂಲಕ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ಅವರು ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ. ಜೊತೆಗೆ ಈ ವಿಚಾರದಲ್ಲಿ ತನಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಹೇಳಿದ್ದಾರೆ.
"ಚೀನಾ ಪ್ರವೇಶಿಸಿದಂತೆ ಕರ್ನಾಟಕಕ್ಕೆ ನಾವೂ ಪ್ರವೇಶಿಸುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ, ವಿಷಯವನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಇದಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದ್ದು, ವಿಷಯದಲ್ಲಿ ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ" ಎಂದು ಸಂಜಯ್ ರಾವುತ್ ಕಿಡಿಕಾರಿದ್ದಾರೆ.












Click it and Unblock the Notifications