Karnataka Politics: ಕಾಂಗ್ರೆಸ್ ಹೈಕಮಾಂಡ್ ಜೊತೆ ಸಿಎಂ - ಡಿಸಿಎಂ ಚರ್ಚೆ, ಈ ಕ್ಷಣದ 5 ಪ್ರಮುಖ ಬೆಳವಣಿಗೆ
Karnataka Politics: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಏಕಕಾಲಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಒನ್ ಟು ಒನ್ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಾಗಿನಿಂದಲೂ ಡಿ.ಕೆ ಶಿವಕುಮಾರ್ ಅವರ ಪಟ್ಟಾಭಿಷೇಕದ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಡಿಕೆ ಬ್ರದರ್ಸ್ "ನಾವು ನಮ್ಮ ಕೂಲಿ ಕೇಳುತ್ತಿದ್ದೇವೆ" ಎಂದಿದ್ದರು. ಪಕ್ಷದ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಕೆಲಸ ಮಾಡಿದ್ದೇವೆ. ಇದಕ್ಕೆ ಪ್ರತಿಫಲ ನಿರೀಕ್ಷೆ ಮಾಡುತ್ತಿದ್ದೇವೆ ಎನ್ನುವುದು ಡಿ.ಕೆ ಶಿವಕುಮಾರ್ ಬ್ರದರ್ಸ್ ಅವರ ಮಾತಾಗಿತ್ತು. ಇದೀಗ ಮುಖ್ಯಮಂತ್ರಿ ಬದಲಾವಣೆ - ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಬೆಳಗ್ಗೆ 11ಕ್ಕೆ ಮಹತ್ವದ ಸಭೆ
ಇನ್ನು ಮೇ 26ರ ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚರ್ಚಿಸಲಿದ್ದಾರೆ. ಇಬ್ಬರೂ ನಾಯಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ಕೇರಳಂ ಸರ್ಕಾರ ರಚನೆಯಾದ ನಂತರ ಕರ್ನಾಟಕದಲ್ಲಿ ಬಹಳಷ್ಟು ದಿನಗಳಿಂದ ಗೊಂದಲವಾಗಿರುವ ವಿವಿಧ ವಿಚಾರಗಳನ್ನು ಬಗೆಹರಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಂದಾಗಿದೆ. ಆದರೆ ಹೈಕಮಾಂಡ್ನ ನಿರ್ಧಾರವೇನು ಎನ್ನುವುದು ಸದ್ಯಕ್ಕೆ ಇರುವ ಕುತೂಹಲವಾಗಿದೆ. ಕಾಂಗ್ರೆಸ್ನ ವರಿಷ್ಠರು ಈಚೆಗೆ ಕರ್ನಾಟಕದ ಕಾಂಗ್ರೆಸ್ನ ಹಲವು ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದರು. ಹಲವು ನಾಯಕರು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎದುರಾಗಿರುವ ಗೊಂದಲವನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದರು.

ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಚರ್ಚೆ ಆಗಬಹುದಾದ 5 ವಿಷಯಗಳು
ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಮೇ 26ರಂದು ಐದು ಪ್ರಮುಖ ವಿಷಯಗಳನ್ನು ಚರ್ಚೆ ಮಾಡುವುದು ಬಹುತೇಕ ಫಿಕ್ಸ್ ಆಗಿದೆ. ಅದರಲ್ಲಿ ಹಲವು ಪ್ರಮುಖ ವಿಷಯಗಳಿವೆ.
ಮುಖ್ಯಮಂತ್ರಿ ಬದಲಾವಣೆ
ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಕಗ್ಗಂಟಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವು ಇಂದು ಪ್ರಮುಖವಾಗಿ ಚರ್ಚೆ ಆಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಇನ್ನಷ್ಟು ಸಮಯ ಕೇಳುವ ಸಾಧ್ಯತೆ ಇದೆ. ಬೆಂಗಳೂರಿನ ಐದು ಪಾಲಿಕೆಗಳ ಚುನಾವಣೆ ಇರುವುದರಿಂದ ಈ ಹಂತದಲ್ಲಿ ಮುಖ್ಯಮಂತ್ರಿ ಬದಲಾವಣೆ ಬೇಡ ಎಂದು ವರಿಷ್ಠರಿಗೆ ಮನವರಿಕೆ ಮಾಡಿದರೆ, ಮುಂದೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ಸಿದ್ದರಾಮಯ್ಯ ಅವರು ಈ ದಾಳವನ್ನು ಹುರುಳಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಕಗ್ಗಂಟಾಗಿರುವ ಮತ್ತೊಂದು ವಿಚಾರವೆಂದರೆ, ಅದು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ವಿಷಯ. ಕಾಂಗ್ರೆಸ್ ಈಗಾಗಲೇ 3 ವರ್ಷ ಅಧಿಕಾರವಧಿ ಪೂರೈಸಿದ್ದು. ಇನ್ನು ಕೇವಲ 2 ವರ್ಷ ಮಾತ್ರ ಅಧಿಕಾರ ಇದೆ. ಹೀಗಾಗಿ, ಈ ಹಂತದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವಂತೆ ಹಲವು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ರಾಜ್ಯಸಭೆ ಚುನಾವಣೆ ವಿಚಾರ ಚರ್ಚೆ ಆಗುವ ಸಾಧ್ಯತೆ
ಇನ್ನು ಕರ್ನಾಟಕದ ಒಟ್ಟು 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18, 2026 ರಂದು ಚುನಾವಣೆ ನಡೆಯಲಿದೆ. ಹಿರಿಯ ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ. ದೇವೇಗೌಡ, ಕೆ. ನಾರಾಯಣ ಹಾಗೂ ಈರಣ್ಣ ಕಡಾಡಿ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿದ್ದು, ಈ ಕಾರಣಕ್ಕೆ ಈ ಚುನಾವಣೆ ನಡೆಯುತ್ತಿದೆ. ಪ್ರಸ್ತುತ ಇರುವ ಬಲಾಬಲದ ಪ್ರಕಾರ ಕಾಂಗ್ರೆಸ್ 3 ಹಾಗೂ ಬಿಜೆಪಿ 1 ಸ್ಥಾನವನ್ನು ಗೆಲ್ಲುವ ನಿರೀಕ್ಷೆ ಇದೆ. ಈ ವಿಚಾರದ ಬಗ್ಗೆಯೂ ಇಂದು ಸಭೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವು ಇಂದು ಪ್ರಮುಖ ಚರ್ಚೆ ಆಗಿರಲಿದೆ.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ
ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಸದ್ದು ಮಾಡಿದ್ದ ಮತದಾರರ ಪಟ್ಟಿ ಪರಿಷ್ಕರಣೆಯು ಇದೀಗ ಬೆಂಗಳೂರು - ಕರ್ನಾಟಕದಲ್ಲೂ ನಡೆಯಲಿದೆ. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಗಂಭೀರವಾಗಿ ಪರಿಗಣಿಸಿವೆ. ಅಲ್ಲದೆ ವಿವಿಧ ರಾಜ್ಯಗಳಲ್ಲಿ ಇದರ ಪರಿಣಾಮದ ಬಗ್ಗೆಯೂ ಗಂಭೀರ ಚರ್ಚೆ ನಡೆಯುತ್ತಿದೆ. ಹೀಗಾಗಿ, ಈ ವಿಷಯವೂ ಇಂದು ಚರ್ಚೆ ಆಗಲಿದೆ.
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಪಾಲಿಕೆಗಳ ಚುನಾವಣೆ
ಇನ್ನು ಮೂರು ತಿಂಗಳ ಅವಧಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ನಡೆಯಲಿದೆ. ಈ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆದ 6 ವರ್ಷಕ್ಕೂ ಹೆಚ್ಚು ಅವಧಿಯಾಗಿದೆ. ಇದೀಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶದಿಂದ ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ನಡೆಸಲೇಬೇಕಾದ ಅನಿವಾರ್ಯತೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೆ. ಈ ಚುನಾವಣೆಯನ್ನು ಹಲವು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಹಾಗೂ ಈ ಹಿಂದಿನ ಬಿಜೆಪಿ ಅವಧಿಯಲ್ಲೂ ಮುಂದೂಡಿಕೊಂಡೇ ಬರಲಾಗಿತ್ತು. ಇದೀಗ ಈ ವಿಷಯದ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ. ಒಟ್ಟಾರೆ ಇಂದಿನ ಚರ್ಚೆಯು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.














Click it and Unblock the Notifications