ದ್ವೇಷ ಭಾಷಣ: ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ ಏಕೆ?
ಹರಿದ್ವಾರ, ಜನವರಿ 21: ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಯತಿ ನರಸಿಂಗಾನಂದ ಅವರ ಜಾಮೀನು ಅರ್ಜಿಯನ್ನು ಹರಿದ್ವಾರದ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಪ್ತರಾದ ಅನೇಕ ಯತಿಗಳು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡುವ ಸಾಧ್ಯತೆಯಿದ್ದು, ಉಭಯ ರಾಜ್ಯಗಳಲ್ಲಿ ಬಿಜೆಪಿಗೆ ಮುಜುಗರ ತಂದೊಡ್ಡಿದೆ. ಉತ್ತರಾಖಂಡ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲಿಗೆ ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮುಖಂಡ ಹರೀಶ್ ರಾವತ್ ಈಗಾಗಲೇ ಘೋಷಿಸಿದ್ದಾರೆ.
ಸಿಜೆಎಂ ನ್ಯಾಯಾಲಯದ ನ್ಯಾ. ಮುಕೇಶ್ ಚಂದ್ರ ಆರ್ಯ ಅವರು, ದಸ್ನಾ ದೇವಿ ದೇಗುಲದ ಮುಖ್ಯ ಅರ್ಚಕ ಯತಿ ನರಸಿಂಗಾನಂದರಿಗೆ ಜಾಮೀನು ನಿರಾಕರಿಸಿದ್ದಾರೆ. ಈ ಕುರಿತಂತೆ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅಖಂಡ್ ಪರಶುರಾಮ್ ಅಖಾಡದ ಪರ ವಕೀಲ ಅಧೀರ್ ಕೌಶಿಕ್ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಹೊತ್ತಿರುವ ಯತಿ ನರಸಿಂಗಾನಂದ ಅವರ ಜಾಮೀನು ಅರ್ಜಿಯನ್ನು ಹರಿದ್ವಾರದ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿತ್ತು. ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಯತಿ ನರಸಿಂಗಾನಂದರನ್ನು ಜನವರಿ 15ರಂದು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಯತಿ ಪರ ವಕೀಲ ಉತ್ತಮ್ ಸಿಂಗ್ ಚೌಹಾಣ್ ತಮ್ಮ ವಾದ ಮಂಡಿಸಿ, ಆರೋಪಗಳ ಪ್ರಕಾರ 7 ವರ್ಷ ಶಿಕ್ಷೆ ಎಂದಿದೆ, ಇದು ಗುರುತರ ಆರೋಪಗಳಲ್ಲ ಹಾಗೂ ಜಾಮೀನು ಪಡೆಯಲು ಅರ್ಹವಾಗಿದೆ ಎಂದಿದ್ದಾರೆ. ಆದರೆ, ನ್ಯಾ. ಮುಕೇಶ್ ಚಂದ್ರ ಆರ್ಯ ಈ ವಾದವನ್ನು ತಿರಸ್ಕರಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಧಾರ್ಮಿಕ ಭಾವನೆ ಕೆರಳಿಸುವ ಸಲುವಾಗಿ ಮಾಡುವ ದುರುದ್ದೇಶಪೂರ್ವಕ ಕೃತ್ಯಗಳು), 509 (ಯಾವುದೇ ಮಹಿಳೆಯ ಘನತೆಗೆ ಧಕ್ಕೆ ತರುವುದು), 323 (ಸ್ವಯಂಪ್ರೇರಿತವಾಗಿ ಘಾಸಿ ಉಂಟು ಮಾಡುವುದು), 504 (ಶಾಂತಿ ಭಂಗ) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯ ಬೆಳೆಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.
ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಅವರು ಹರಿದ್ವಾರ ಧರ್ಮ ಸಂಸದ್ ಅಥವಾ ಧಾರ್ಮಿಕ ಸಭೆಯನ್ನು ಒಳಗೊಂಡ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೊದಲ ಆರೋಪಿಯಾಗಿದ್ದಾರೆ. ಇವರು ಮತಾಂತರಗೊಳ್ಳುವ ಮೊದಲು ವಸೀಮ್ ರಿಜ್ವಿ ಆಗಿದ್ದರು. ನರಸಿಂಹಾನಂದ ಅವರು ಹತ್ಯಾಕಾಂಡ ಮತ್ತು ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ ಭಾಷಣಗಳ ಮೇಲೆ ದಾಖಲಿಸಲಾದ ಎಫ್ಐಆರ್ಗಳಲ್ಲಿ ಹೆಸರಿಸಲಾದ 10 ಕ್ಕೂ ಹೆಚ್ಚು ಜನರಲ್ಲಿ ಸೇರಿದ್ದಾರೆ. ನರಸಿಂಹಾನಂದ ಮತ್ತು ತ್ಯಾಗಿ ಬಳಿಕ ಪೊಲೀಸರು ಮತ್ತೊಬ್ಬ ಧಾರ್ಮಿಕ ನಾಯಕಿ ಸಾಧ್ವಿ ಅನ್ನಪೂರ್ಣ ಅವರ ವಿಚಾರಣೆ ಮಾಡುವ ನಿರೀಕ್ಷೆ ಇದೆ.
ಇತ್ತೀಚೆಗೆ, ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಜಿತೇಂದ್ರ ತ್ಯಾಗಿ ಅಲಿಯಾಸ್ ವಸೀಮ್ ರಿಜ್ವಿ ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು. ಹರಿದ್ವಾರ ಧರ್ಮ ಸಂಸದ್ನಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿದ ದ್ವೇಷ ಭಾಷಣದ ಕುರಿತು ತನಿಖೆ ನಡೆಸುವಂತೆ ಕೋರಿದ್ದ ಪಿಐಎಲ್ಗೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಕೇಂದ್ರ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು.
ಡಿಸೆಂಬರ್ 17 ರಿಂದ 20 ರವರೆಗೆ ನಡೆದ ಹರಿದ್ವಾರದ ಕಾರ್ಯಕ್ರಮದಲ್ಲಿ ಮಾಡಿದ ದ್ವೇಷ ಭಾಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ದ್ವೇಷ ಭಾಷಣದ ವಿರುದ್ಧ ಅನೇಕರ ವಿರೋಧ ವ್ಯಕ್ತವಾಗಿತ್ತು.
Recommended Video
ಆದರೆ ಕಾರ್ಯಕ್ರಮವನ್ನು ಆಯೋಜಿಸಿದವರು ಮತ್ತು ದ್ವೇಷದ ಭಾಷಣಗಳನ್ನು ನೀಡಿದವರು ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.












Click it and Unblock the Notifications