Get Updates
Get notified of breaking news, exclusive insights, and must-see stories!

ಲಖಿಂಪುರ ಖೇರಿ ಗಲಭೆ; ರಾಷ್ಟ್ರಪತಿಗಳ ಮೊರೆ ಹೋದ ಕಾಂಗ್ರೆಸ್

ನವದೆಹಲಿ, ಅಕ್ಟೋಬರ್ 10; ಕಳೆದ ಭಾನುವಾರ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ 4 ರೈತರು ಸೇರಿ 8 ಜನರು ಮೃತಪಟ್ಟಿದ್ದಾರೆ. ಈ ಪ್ರಕರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷ ಕಾಂಗ್ರೆಸ್ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ.

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಸತ್ಯ ಶೋಧನೆಯ ವರದಿ ನೀಡಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಗಾಗಿ ಕಾಂಗ್ರೆಸ್ ನಿಯೋಗ ಸಮಯ ಕೇಳಿದೆ. ರಾಹುಲ್ ಗಾಂಧಿ ನೇತೃತ್ವದ 7 ಸದಸ್ಯರ ನಿಯೋಗ ರಾಷ್ಟ್ರಪತಿಗಳನ್ನು ಭೇಟಿಯಾಗಲಿದೆ.

ರಾಹುಲ್ ಗಾಂಧಿ, ಎ. ಕೆ. ಆಂಟನಿ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಪ್ರಿಯಾಂಗಾ ಗಾಂಧಿ ವಾದ್ರಾ, ಕೆ. ಸಿ. ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ ನೇತೃತ್ವದ ನಿಯೋಗ ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದೆ.

President

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ವರದಿಯನ್ನು ನೀಡಿದ ಪಕ್ಷ ತನ್ನ ಅಹಲವಾಲನ್ನು ಸಲ್ಲಿಕೆ ಮಾಡಲಿದೆ. ಭೇಟಿಗೆ ಸಮಯ ನೀಡುವಂತೆ ರಾಷ್ಟ್ರಪತಿಗಳ ಕಚೇರಿಗೆ ಕಾಂಗ್ರೆಸ್ ಪತ್ರವನ್ನು ಬರೆದಿದೆ.

ಲಖಿಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತೆರಳಿದ್ದರು. ಉತ್ತರ ಪ್ರದೇಶದ ಸರ್ಕಾರ, ಪೊಲೀಸರ ನಡೆಯನ್ನು ಕಾಂಗ್ರೆಸ್ ನಾಯಕರು ಖಂಡಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದೆ. ಡಿಜಿಪಿ ಉಪೇಂದ್ರ ಅಗರ್‌ವಾಲ್ ನೇತೃತ್ವದ ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದ್ದು ಎಫ್‌ಐಆರ್‌ನಲ್ಲಿ ಹೆಸರಿಸಿರುವ 7 ಮಂದಿಯಲ್ಲಿ ಮೂವರನ್ನು ಬಂಧಿಸಿದೆ.

ಶನಿವಾರ ಹಿಂಸಾಚಾರ ಪ್ರಕರಣದ ಆರೋಪಿ ಅಶಿಶ್ ಮಿಶ್ರಾ ಬಂಧಿಸಲಾಗಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಿದ್ದರು. ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು 11 ಗಂಟೆಗ ವಿಚಾರಣೆ ಬಳಿಕ ಅಶಿಶ್ ಮಿಶ್ರಾ ಬಂಧಿಸಲಾಗಿದೆ.

ಶನಿವಾರ ರಾತ್ರಿ ಅಶಿಶ್ ಮಿಶ್ರಾರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಸೋಮವಾರದ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೋಮವಾರ ಪೊಲೀಸರು ಪುನಃ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಪೊಲೀಸ್ ವಶಕ್ಕೆ ನೀಡುವಂತೆ ಅರ್ಜಿ; ಉತ್ತರ ಪ್ರದೇಶ ಪೊಲೀಸರು ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಲಿದ್ದು ಅಶಿಶ್ ಮಿಶ್ರಾ ವಶಕ್ಕೆ ನೀಡುವಂತೆ ಮನವಿ ಮಾಡಲಿದ್ದಾರೆ. ನ್ಯಾಯಾಲಯ ಪೊಲೀಸರ ವಶಕ್ಕೆ ಕೊಡಲಿದೆಯೇ? ಕಾದು ನೋಡಬೇಕಿದೆ.

ಅಶಿಶ್ ಮಿಶ್ರಾ ಪರ ವಕೀಲ ಅವದೇಶ್ ಕುಮಾರ್ ಮಾತನಾಡಿದ್ದು, "ಅಕ್ಟೋಬರ್ 11ರ ಸೋಮವಾರ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಆಗ ಕೋರ್ಟ್ ಪೊಲೀಸರ ವಶಕ್ಕೆ ನೀಡುವ ಕುರಿತು ತೀರ್ಮಾನಿಸಲಿದೆ. ಸದ್ಯಕ್ಕೆ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ" ಎಂದು ಹೇಳಿದ್ದಾರೆ.

ಮತ್ತೊಂದು ಕಡೆ ಉತ್ತರ ಪ್ರದೇಶದ ಇಬ್ಬರು ವಕೀಲರು ಲಖಿಂಪುರ ಹಿಂಸಾಚಾರದ ಕುರಿತು ಸುಪ್ರೀಂಕೋರ್ಟ್‌ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಯಬೇಕು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಬರೆದಿದ್ದರು.

ಈ ಪತ್ರದ ಆಧಾರದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಶುಕ್ರವಾರ ಉತ್ತರ ಪ್ರದೇಶ ಸರ್ಕಾರ ಘಟನೆಯ ತನಿಖೆ ಬಗ್ಗೆ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಪೀಠ ಗಲಭೆಯ ತನಿಖೆ ನಡೆಸುವ ಕುರಿತು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ ಎಂದು ಹೇಳಿತ್ತು. ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಉತ್ತರ ಪ್ರದೇಶದ ಡಿಜಿಪಿಗೆ ಸೂಚನೆ ನೀಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+