ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು, ಬಿಎಸ್ವೈಗೆ 5ನೇ ಸ್ಥಾನ!
ಬೆಂಗಳೂರು, ಆಗಸ್ಟ್ 17; ಪಕ್ಷದ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಂಸದೀಯ ಮಂಡಳಿಯನ್ನು ಬಿಜೆಪಿ ಪುನಾರಚನೆ ಮಾಡಿದೆ. 2022ರ ಅಂತ್ಯ, 2023ರಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆ, 2024ರ ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ.
ಬುಧವಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದೀಯ ಮಂಡಳಿ ಪುನಾರಚನೆ ಮಾಡಿದೆ. ಇಬ್ಬರನ್ನು ಸಮಿತಿಯಿಂದ ಕೈ ಬಿಡಲಾಗಿದ್ದು, ನಾಲ್ವರು ಹೊಸ ಸದಸ್ಯರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.
ಹೈಕಮಾಂಡ್ ಸಂದೇಶ; ಯಡಿಯೂರಪ್ಪ ಸೈಡ್ಲೈನ್ ಮಾಡಿಲ್ಲ!
ಚುನಾವಣಾ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು, ಪಕ್ಷದ ರಾಜ್ಯಾಧ್ಯಕ್ಷರ ನೇಮಕ, ರಾಜ್ಯದಲ್ಲಿನ ಪ್ರಮುಖ ಬದಲಾವಣೆಗಳು ಸೇರಿದಂತೆ ವಿವಿಧ ತೀರ್ಮಾನಗಳನ್ನು ಕೈಗೊಳ್ಳುವ ಪಕ್ಷದ ಉನ್ನತ ಮಟ್ಟದ ಸಮಿತಿಯೇ ಸಂಸದೀಯ ಮಂಡಳಿಯಾಗಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಮಂಡಳಿಯಿಂದ ಹೊರ ಹೋಗಿದ್ದಾರೆ.
Breaking: ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮಿತಿಗೆ ಸೇರ್ಪಡೆಗೊಂಡಿದ್ದಾರೆ. ಕರ್ನಾಟಕ ಮೂಲದ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಬಿ. ಎಲ್. ಸಂತೋಷ್ ಸಹ ಮಂಡಳಿ ಸೇರಿದ್ದಾರೆ. ಬಿ. ಎಸ್. ಯಡಿಯೂರಪ್ಪಗೆ ರಾಜ್ಯದ ಸಚಿವರು, ಶಾಸಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ.
75 ವರ್ಷದ ಮೀರಿದ ಯಡಿಯೂರಪ್ಪ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅವರನ್ನು ಪಕ್ಷದ ಪ್ರಮುಖ ಹುದ್ದೆಗೆ ನೇಮಕ ಮಾಡುವ ಮೂಲಕ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದೆ ಎಂಬುದಂತೂ ಸ್ಪಷ್ಟವಾಗಿದೆ. 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಕರ್ನಾಟಕದಲ್ಲಿ ಅಧಿಕಾರ ಹಿಡಿಯಬೇಕು ಎಂಬುದು ಪಕ್ಷದ ಗುರಿಯಾಗಿದೆ.
ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್ವೈ ನೇಮಕ: ಸಿಎಂ, ಸಚಿವರ ಶುಭಾಶಯ
ಸಂಸದೀಯ ಮಂಡಳಿಯ ಸದಸ್ಯರು
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಜೆ. ಪಿ. ನಡ್ಡಾ, ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿ. ಎಸ್. ಯಡಿಯೂರಪ್ಪ, ಸರ್ಬಾನಂದ ಸೋನೋವಾಲಾ, ಕೆ. ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ ಜಾತಿಯ, ಬಿ. ಎಲ್. ಸಂತೋಷ್, ಭೂಪೇಂದ್ರ ಯಾದವ್, ದೇವೇಂದ್ರ ಫಡ್ನವೀಸ್ ಇದ್ದಾರೆ.
ಮಂಡಳಿಯಿಂದ ಇಬ್ಬರು ಹೊರಕ್ಕೆ
ಬುಧವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿರುವ ಆದೇಶದ ಪ್ರಕಾರ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಮಿತಿಯಿಂದ ಹೊರ ಹೋಗಿದ್ದಾರೆ. ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರು ಹೊಸ ಮುಖಗಳಿಗೆ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ.
ಮಂಡಳಿಯ ನಾಲ್ವರು ಪ್ರಮುಖರು
ಸಂಸದೀಯ ಮಂಡಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅಧ್ಯಕ್ಷರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಾಗಿರುವ ರಾಜನಾಥ್ ಸಿಂಗ್, ಗೃಹ ಸಚಿವರಾಗಿರುವ ಅಮಿತ್ ಶಾ ನಾಲ್ವರು ಪ್ರಮುಖರು. ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಇತರರು ಸಮಿತಿಯ ಸದಸ್ಯರಾಗಿದ್ದಾರೆ. ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ಪತನದ ಬಳಿಕ ಬಿಜೆಪಿ, ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿರುವ ದೇವೇಂದ್ರ ಫಡ್ನವೀಸ್ರನ್ನು ಮಂಡಳಿಗೆ ಸೇರಿಸುವ ಬಂಪರ್ ಕೊಡುಗೆ ನೀಡಲಾಗಿದೆ.
ಯೋಗಿ ಆದಿತ್ಯನಾಥ್ ಮಂಡಳಿಯಲ್ಲಿಲ್ಲ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಸದೀಯ ಮಂಡಳಿಯಲ್ಲಿಲ್ಲ. ಆದರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಅಲ್ಲದೇ ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ರನ್ನು ಸಹ ಮಂಡಳಿಯಿಂದ ಕೈ ಬಿಡಲಾಗಿದೆ.
ಯಡಿಯೂರಪ್ಪಗೆ ಸ್ಥಾನ
2021ರ ಜುಲೈನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಹೈಕಮಾಂಡ್ ಸಂದೇಶದ ಹಿನ್ನಲೆಯಲ್ಲಿ 77 ವರ್ಷ ತುಂಬಿದ ಯಡಿಯೂರಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದರು. 75 ವರ್ಷ ದಾಟಿದವರಿಗೆ ಪಕ್ಷದಲ್ಲಿ ಯಾವುದೇ ಹುದ್ದೆ ಇಲ್ಲ ಎಂಬ ಅಲಿಖಿತ ನಿಯಮವಿದೆ. ಆದರೆ ಅದನ್ನು ಮೀರಿ ಯಡಿಯೂರಪ್ಪರನ್ನು ಸಂಸದೀಯ ಮಂಡಳಿಗೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ದಾಳ ಉರುಳಿಸಿದೆ ಎಂಬುದಂತೂ ಸತ್ಯ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಿಗೆ ಮಣೆ ಹಾಕುವ ಮೂಲಕ ಪಕ್ಷ ಅವರನ್ನು ಸೈಡ್ಲೈನ್ ಮಾಡಿಲ್ಲ ಎಂಬ ಸಂದೇಶ ಸಾರಿದೆ.