ಲೋಕಸಭೆ ಚುನಾವಣೆಗೆ ಮಾಜಿ ಸಿಎಂ ಸ್ಪರ್ಧೆ; ಏನಿದು ಕಾಂಗ್ರೆಸ್ ಲೆಕ್ಕಾಚಾರ?
ನವದೆಹಲಿ, ಫೆಬ್ರವರಿ 14: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನೇತೃತ್ವದಲ್ಲಿ 'ಇಂಡಿಯಾ' ಮೈತ್ರಿಕೂಟ ರಚನೆಯಾಗಿದೆ. ಆದರೆ ಪಕ್ಷಗಳ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿದೆ. ಏಕಾಂಗಿಯಾಗಿಯೂ ಸಾಧ್ಯವಾದಷ್ಟು ಸೀಟುಗಳನ್ನು ಗೆಲ್ಲಬೇಕು ಎಂಬುದು ಕಾಂಗ್ರೆಸ್ ತಂತ್ರವಾಗಿದೆ.
ಈ ಬಾರಿಯ ಲೋಕಸಭೆ ಚುನಾವಣೆ ಗೆಲ್ಲಲು ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಭಾಗವಾಗಿಯೇ ಮಾಜಿ ಸಿಎಂ, ಹಾಲಿ ಶಾಸಕರು, ಮಾಜಿ ಉಪ ಮುಖ್ಯಮಂತ್ರಿಗಳನ್ನು ಕಣಕ್ಕಿಳಿಸಲಾಗುತ್ತದೆ.

ದಕ್ಷಿಣದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಹೆಚ್ಚು ಸ್ಥಾನಗಳನ್ನು ಗಳಿಸಲು ಇಲ್ಲಿ ಸಚಿವರನ್ನು ಲೋಕಸಭೆ ಕಣಕ್ಕಿಳಿಸುವ ಚರ್ಚೆ ನಡೆದಿದೆ. ಇದೇ ಮಾದರಿಯಲ್ಲಿ ಬೇರೆ-ಬೇರೆ ರಾಜ್ಯದಲ್ಲಿ ಬೇರೆ ತಂತ್ರಗಳನ್ನು ರೂಪಿಸಲಾಗುತ್ತಿದೆ.
25 ಸೀಟುಗಳಿವೆ: ರಾಜಸ್ಥಾನ ರಾಜ್ಯದಲ್ಲಿ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಪ್ರಭಾವಿ ನಾಯಕರು ಈ ನಾಯಕರನ್ನು ರಾಷ್ಟ್ರ ರಾಜಕೀಯಕ್ಕೆ ತರುವ ಭಾಗವಾಗಿ ಅವರನ್ನು ಈ ಬಾರಿಯ ಲೋಕಸಭಾ ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.
ರಾಜ್ಯದಲ್ಲಿ 25 ಲೋಕಸಭಾ ಕ್ಷೇತ್ರಗಳಿದ್ದು, ಬಿಜೆಪಿ ಅಧಿಕಾರದಲ್ಲಿದೆ.
2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಅಧಿಕಾರವನ್ನು ಬಿಜೆಪಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯದ ನಾಯಕರ ನಡುವಿನ ಭಿನ್ನಾಭಿಪ್ರಾಯ ಎಂಬುದನ್ನು ಕಾಂಗ್ರೆಸ್ ನಾಯಕರು ಸಹ ಒಪ್ಪಲೇಬೇಕು.
ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಅಧಿಕಾರ ಕಳೆದುಕೊಂಡರೂ ಸಹ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೆಹ್ಲೋಟ್ ಸರ್ದಾಪುರ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಹಾಲಿ ಅವರು ರಾಜ್ಯ ವಿಧಾನಸಭೆಯ ಶಾಸಕರು. 72 ವರ್ಷ ವಯಸ್ಸಿನ ಅವರನ್ನು ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ಕಾಂಗ್ರೆಸ್ ಅಧಿನಾಯಕಿ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚಲಿದೆ. ಜೊತೆಗೆ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಸಹ ಕಣಕ್ಕಿಳಿದರೆ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ ಎಂಬುದು ತಂತ್ರ.
ಸಚಿನ್ ಪೈಲೆಟ್ ಸಹ ರಾಜ್ಯದ ಪ್ರಭಾವಿ ಯುವ ನಾಯಕ. ವಿಧಾನಸಭೆ ಚುನಾವಣೆಯಲ್ಲಿ ಟೋಂಕ್ ಕ್ಷೇತ್ರದಲ್ಲಿ ಅವರು 29 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ರಾಜ್ಯದ ಗುಜ್ಜರ್ ಸಮುದಾಯದ ಮೇಲೆ ಅವರ ಪ್ರಭಾವ ಸಾಕಷ್ಟು ಇದೆ. ಆದ್ದರಿಂದ ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲಿದೆ ಕಾಂಗ್ರೆಸ್.
ಇಂಡಿಯಾ ಮೈತ್ರಿಕೂಟದ ಭಾಗವಾಗಿ ರಾಜಸ್ಥಾನದಲ್ಲಿ ಹೆಚ್ಚು ಕ್ಷೇತ್ರಗಳನ್ನು ಹಂಚಿಕೊಳ್ಳುವ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಭಾವಿಯಾಗಿದ್ದು, ಉಳಿದ ಪಕ್ಷಗಳು ಹೆಚ್ಚು ಸೀಟು ಕೇಳುವುದಿಲ್ಲ. ಆದ್ದರಿಂದ ಕಾಂಗ್ರೆಸ್ ಪ್ರಮುಖ ನಾಯಕರನ್ನು ಕಣಕ್ಕಿಳಿಸಿ ಗೆಲ್ಲಿಸುವ ಯೋಜನೆ ರೂಪಿಸಿದೆ.
ರಾಜಸ್ಥಾನ ವಿಧಾನಸಭೆ ಚುನಾವಣೆ ಮುಗಿದು ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಕಾರ್ನಾಪುರ್ ಕ್ಷೇತ್ರದ ಉಪ ಚುನಾವಣೆ ನಡೆಯಿತು. ಕಾಂಗ್ರೆಸ್ನ ರೂಪಿಂದರ್ ಸಿಂಗ್ ಕೂನರ್ ಬಿಜೆಪಿಯ ಸುರೇಂದ್ರ ಪಾಲ್ ಸಿಂಗ್ ಸೋಲಿಸಿದರು. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಕಾಂಗ್ರೆಸ್ ಪ್ರಭಾವ ತಗ್ಗಿಲ್ಲ ಎಂಬುದು ಸಾಬೀತಾಗಿದೆ.
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಅಸಮಾಧಾನಗಳನ್ನು ಮರೆತು ಒಂದಾದರೆ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಬಹುದು. ಸಚಿನ್ ಪೈಲೆಟ್ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಿಧಾನಸಭೆ ಚುನಾವಣೆಗೂ ಮೊದಲು ಸಭೆ ನಡೆಸಿ ಅಸಮಾಧಾನ ಬಗೆಹರಿಸಿದ್ದರು. ಆದರೆ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು.












Click it and Unblock the Notifications