ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮೋದಿಗೆ ಕ್ಲೀನ್ ಚಿಟ್
ನವದೆಹಲಿ, ಏಪ್ರಿಲ್ 30: ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಆಯೋಗ ಹೇಳಿದೆ.
ಮೋದಿ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಚು.ಆಯೋಗಕ್ಕೆ ಸುಪ್ರೀಂ ನೋಟಿಸ್
ಏಪ್ರಿಲ್ 1ರಂದು ಮಹಾರಾಷ್ಟ್ರದ ವಾರ್ಧಾದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮೋದಿ ಅವರು, ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯುತ್ತಿರುವುದನ್ನು ಟೀಕಿಸಿದ್ದರು. 'ಅಲ್ಪಸಂಖ್ಯಾತರು ಬಹುಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಆಶ್ರಯ ಪಡೆದುಕೊಳ್ಳುತ್ತಿದೆ' ಎಂದು ಮೋದಿ ಲೇವಡಿ ಮಾಡಿದ್ದರು.
ಬಹುಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರು ಹೆದರಿದ್ದಾರೆ ಎಂದು ಮೋದಿ ಹೇಳಿದ್ದರು.
ಇದರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಜನರನ್ನು ಧರ್ಮದ ಹೆಸರಿನಲ್ಲಿ ವಿಭಜಿಸುವ ಭಾಷಣ ಮಾಡಿದ್ದಾರೆ. ಅವರ ಮಾತುಗಳು ದ್ವೇಷಪೂರಿತವಾಗಿವೆ ಎಂದು ಆರೋಪಿಸಿತ್ತು.
ಮೋದಿ, ಅಮಿತ್ ಶಾ ಹಾಗೂ ರಾಹುಲ್ ವಿರುದ್ಧ ದೂರು ವಿಚಾರಣೆ
ಚುನಾವಣಾ ಲಾಭಕ್ಕಾಗಿ ದ್ವೇಷ ಹರಡುವ ಸಲುವಾಗಿ ಮೋದಿ ಅವರು ತಮ್ಮ ಭಾಷಣದ ಮೂಲಕ ಪ್ರಯತ್ನಿಸಿದ್ದಾರೆ. ಇದು ಜನ ಪ್ರತಿನಿಧಿ ಕಾಯ್ದೆಯ ಗಂಭೀರ ಉಲ್ಲಂಘನೆ ಎಂದು ಆರೋಪಿಸಲಾಗಿತ್ತು.
ಇದಕ್ಕೂ ಮುನ್ನ ಸುಪ್ರೀಂಕೋರ್ಟ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಮಾಡಿತ್ತು.
|
ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ
ಕಾಂಗ್ರೆಸ್ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಚುನಾವಣಾ ಆಯೋಗ, ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆಸಿದ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳಿದೆ.
ಸುಷ್ಮಿತಾ ದೇವ್ ಅರ್ಜಿ
ಈ ಕುರಿತು ಚುನಾವಣಾ ಆಯೋಗಕ್ಕೆ ದಾಖಲಾಗಿರುವ ಪ್ರಕರಣ ಕುರಿತು ಇನ್ನು 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಅವರು ಸೋಮವಾರ ಕೋರ್ಟ್ಗೆ ಸರ್ಜಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ನೋಟಿಸ್
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಮಂಗಳವಾರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಮೇ.2ಕ್ಕೆ ಮುಂದೂಡಿದೆ. ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ನೇತೃತ್ವದಲ್ಲಿ ಆಯೋಗವು ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಕುರಿತು ಚರ್ಚಿಸಿತ್ತು.
|
ಅಜಂ ಖಾನ್ ಮೇಲೆ ನಿರ್ಬಂಧ
ಚುನಾವಣಾ ಪ್ರಚಾರದ ವೇಳೆ ಅವಹೇಳನಾಕಾರಿ ಹೇಳಿಕೆಗಳನ್ನು ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಮೇಲೆ ಚುನಾವಣಾ ಆಯೋಗ ಕ್ರಮ ತೆಗೆದುಕೊಂಡಿದೆ. ಬುಧವಾರ ಬೆಳಿಗ್ಗೆ ಆರು ಗಂಟೆಯಿಂದ 48 ಗಂಟೆಗಳ ಕಾಲ ಅಜಂ ಖಾನ್ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿದೆ.