Parliament Winter Session: ಲೋಕಸಭೆಯಲ್ಲಿ ಸಂವಿಧಾನ ಕುರಿತು ವಿಶೇಷ ಚರ್ಚೆ
ನವದೆಹಲಿ, ಡಿಸೆಂಬರ್14: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸಂಸತ್ ನಲ್ಲಿ ನಿನ್ನೆಯಿಂದ(ಶುಕ್ರವಾರ) ಸಂವಿಧಾನದ ಕುರಿತು ಚರ್ಚೆ ನಡೆದಿದೆ. ಡಿಸೆಂಬರ್ 13 ಮತ್ತು 14 ರಂದು ಲೋಕಸಭೆಯಲ್ಲಿ, ಡಿಸೆಂಬರ್ 16 ಮತ್ತು 17 ರಂದು ರಾಜ್ಯಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಗೆ ಸಾಕ್ಷಿಯಾಗಿದೆ.
ಲೋಕಸಭೆಯಲ್ಲಿ ಭಾರತದ ಸಂವಿಧಾನದ 75 ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸುವ ನಿರೀಕ್ಷೆಯಿದೆ . ಶುಕ್ರವಾರ ನಡೆದ ಲೋಕಸಭೆ ಅಧಿವೇಶನದಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, 'ಸಂವಿಧಾನ, ಒಂದೇ ಪಕ್ಷದ ಕೊಡುಗೆ ಅಲ್ಲ' ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂವಿಧಾನ ರಚನೆಯ ಕೆಲಸವನ್ನು ಹೈಜಾಕ್ ಮಾಡಲು ಒಂದು ಪಕ್ಷವು ಯಾವಾಗಲೂ ಪ್ರಯತ್ನಿಸುತ್ತಿದೆ. ಆದರೆ, ನಮ್ಮ ಸಂವಿಧಾನವು ಒಂದೇ ಪಕ್ಷದ ಕೊಡುಗೆ ಅಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಆರಂಭವಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನದ ಕುರಿತ ಚರ್ಚೆಗೆ ಉತ್ತರಿಸಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂವಿಧಾನದ ಕುರಿತ ಚರ್ಚೆಗೆ ಚಾಲನೆ ನೀಡಿರುವ ಹಿನ್ನೆಲೆ ಡಿಸೆಂಬರ್ 13 - 14 ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ ಸದಸ್ಯರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.
ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಜೀವನದ ಎಲ್ಲಾ ಅಂಶಗಳನ್ನು ಸ್ಪರ್ಶಿಸುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ದಾರಿ ಮಾಡಿಕೊಡುವುದು ನಮ್ಮ ಸಂವಿಧಾನ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ನಮ್ಮ ಸರ್ಕಾರವು ಭಾರತದ ಸಂವಿಧಾನದಲ್ಲಿ ಬರೆದಿರುವ ಧರ್ಮಕ್ಕೆ ಅನುಗುಣವಾಗಿ ಕೆಲಸ ಮಾಡುತ್ತಿದೆ, ನಮ್ಮ ಸಂವಿಧಾನವು ಪ್ರಗತಿಪರವಾಗಿದೆ. ಅದು ಎಲ್ಲರನ್ನೂ ಒಳಗೊಳ್ಳುತ್ತದೆ. ನಮ್ಮ ಸಂವಿಧಾನದ ಪ್ರಕಾರ ಬಡ ಕುಟುಂಬದಲ್ಲಿ ಜನಿಸಿದವರು ಕೂಡ ನಮ್ಮ ದೇಶದ ಪ್ರಧಾನಿಯೂ ಆಗಬಹುದು, ದೇಶದ ರಾಷ್ಟ್ರಪತಿಯೂ ಆಗಬಹುದು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ತನ್ನ ಚೊಚ್ಚಲ ಭಾಷಣದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಡಳಿತಾರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಸಂವಿಧಾನವು ನ್ಯಾಯ, ಏಕತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ಅವರು ಹೇಳಿದರು ಮತ್ತು ಬಿಜೆಪಿ ನೇತೃತ್ವದ ಕೇಂದ್ರವು ಕಳೆದ 10 ವರ್ಷಗಳಲ್ಲಿ ಮುರಿಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಎರಡೂ ಪಕ್ಷಗಳಿಂದ ಸಭೆ
ಸಂಸತ್ ನಲ್ಲಿ ಸಂವಿಧಾನದ ಕುರಿತು ಚರ್ಚೆಗೆ ಎರಡೂ ಪ್ರಮುಖ ಪಕ್ಷಗಳು ತಮ್ಮ ಕಾರ್ಯತಂತ್ರದ ಸಭೆಗಳನ್ನು ನಡೆಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪಕ್ಷವು ಸಭೆ ನಡೆಸಿದ್ದು, ಆ ಸಭೆಯಲ್ಲಿ . ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಈ ಸಭೆಯಲ್ಲಿ ಭಾಗವಹಿಸಿದ್ದರು.
ಇತ್ತ ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿತು. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸಭೆಯಲ್ಲಿ ಭಾಗವಹಿಸಿ, ಇಂದಿನ ಕಾರ್ಯತಂತ್ರದ ಕುರಿತು ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದರು.












Click it and Unblock the Notifications