ಗದ್ದಲಕ್ಕೆ ಕಲಾಪ ಬಲಿ, ಮಂಡನೆಯಾಗದ ಟಿಡಿಪಿ ಅವಿಶ್ವಾಸ ನಿರ್ಣಯ
ನವದೆಹಲಿ, ಮಾರ್ಚ್ 16: ಸತತ 10 ನೇ ದಿನವೂ ಲೋಕಸಭೆ ಕಲಾಪ ಗದ್ದಲಕ್ಕೆ ಬಲಿಯಾಗಿದ್ದು ತೆಲುಗು ದೇಶಂ ಪಕ್ಷ ಇಂದು ಮಂಡಿಸಲು ಉದ್ದೇಶಿಸಿದ್ದ ಬಹುನಿರೀಕ್ಷಿತ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿ ಇಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಸೃಷ್ಟಿಸಿದರು. ಇದರಿಂದ ಸತತ 10ನೇ ದಿನವೂ ಕಲಾಪವನ್ನು ಮುಂದೂಡಲಾಯಿತು. ಸೋಮವಾರದವರೆಗೆ ಲೋಕಸಭೆ ಕಲಾಪವನ್ನು ಸ್ಪೀಕರ್ ಮುಂದೂಡಿದರು.
ಕಲಾಪ ಮುಂದೂಡಿದ್ದರಿಂದ ಕೇಂದ್ರ ಸರ್ಕಾರದ ವಿರುದ್ಧ ವೈಎಸ್ಆರ್ ಕಾಂಗ್ರೆಸ್ ಸಂಸದರು ಮತ್ತು ಟಿಡಿಪಿ ಮಂಡಿಸಲು ಉದ್ದೇಶಿಸಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ನೀಡುವಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಗುರುವಾರ ಲೋಕಸಭೆಯಲ್ಲಿ ನೋಟಿಸ್ ನೀಡಿತ್ತು. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ಜತೆ ಮುನಿಸಿಕೊಂಡು ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಟಿಡಿಪಿಯೂ ಈ ಗೊತ್ತುವಳಿಗೆ ಬೆಂಬಲ ಸೂಚಿಸಿತ್ತು. ಮಾತ್ರವಲ್ಲ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಐ(ಎಂ) ಕೂಡ ಇದನ್ನು ಬೆಂಬಲಿಸುವುದಾಗಿ ಹೇಳಿದ್ದವು.
ಆದರೆ ಅವಿಶ್ವಾಸ ಗೊತ್ತುವಳಿಗೆ ಸ್ಪೀಕರ್ ಮನ್ನಣೆ ನೀಡಲಿಲ್ಲ. 'ಸದನದಲ್ಲಿ ಕಲಾಪ ಕ್ರಮದ್ಧವಾಗಿಲ್ಲ. ಈ ಕಾರಣಕ್ಕೆ ಅವಿಶ್ವಾಸ ಗೊತ್ತುವಳಿ ಪ್ರತಿಯನ್ನು ಮಂಡಿಸಲಾಗುತ್ತಿಲ್ಲ' ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ತಿಳಿಸಿದರು.












Click it and Unblock the Notifications