ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಬಿಜೆಪಿಗೆ ಹೀನಾಯ ಸೋಲು!
ಭೋಪಾಲ್, ನವೆಂಬರ್ 02: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದೆ. ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಆಡಳಿತ ಪಕ್ಷ ಬಿಜೆಪಿಗೆ ಹೀನಾಯ ಸೋಲು ಉಂಟಾಗಲಿದೆ. ಕರ್ನಾಟಕದ 2023ರ ಚುನಾವಣೆ ಮಾದರಿಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕುರಿತು ಮಾತನಾಡಿದರು. "ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ಮಧ್ಯಪ್ರದೇಶದಲ್ಲಿ ಹೀನಾಯ ಸೋಲು ಕಾಣಲಿದೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ" ಎಂದು ಹೇಳಿದರು.
"ಬಿಜೆಪಿ ಕರ್ನಾಟಕದಲ್ಲಿ ಸರ್ಕಾರವನ್ನು ಉರುಳಿಸಿತು. ನಾವು (ಕಾಂಗ್ರೆಸ್) ವಿಧಾನಸಭೆ ಚುನಾವಣೆಯನ್ನು ಗೆದ್ದೆವು. ಜನರು ಅವರಿಗೆ (ಬಿಜೆಪಿ) ಶಾಕ್ ನೀಡಿದರು. ಇದೇ ಮಾದರಿ ಮಧ್ಯಪ್ರದೇಶದಲ್ಲಿ ನಡೆಯಲಿದೆ. 2020ರಲ್ಲಿ ಬಿಜೆಪಿ ಇಲ್ಲೂ ಸಹ ಸರ್ಕಾರವನ್ನು ಕೆಡವಿತು" ಎಂದು ರಾಬರ್ಟ್ ವಾದ್ರಾ ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ; ಪಿಟಿಐ ಜೊತೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ರಾಬರ್ಟ್ ವಾದ್ರಾ, "ಬಿಜೆಪಿ ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರವನ್ನು ನಡೆಸುತ್ತಿದೆ. ಜನರು ಬಿಜೆಪಿ ಬಗ್ಗೆ ಭ್ರಮನಿರಸನಗೊಂಡಿದ್ದು, ಬದಲಾವಣೆ ಬಯಸಿದ್ದಾರೆ" ಎಂದರು.
"ಮಧ್ಯಪ್ರದೇಶ ರಾಜ್ಯಕ್ಕೆ ನಾನು ಧಾರ್ಮಿಕ ಪ್ರವಾಸಕ್ಕಾಗಿ ಬಂದಿದ್ದೇನೆ. ಉಜ್ಜೈನಿ ದೇವಾಲಯದ ಭೇಟಿಗಾಗಿ ಆಗಮಿಸಿದ್ದೇನೆ" ಎಂದು ಮಾಧ್ಯಮಗಳಿಗೆ ರಾಬರ್ಟ್ ವಾದ್ರಾ ಸ್ಪಷ್ಟಪಡಿಸಿದರು.
2023ರ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷ ಹೀನಾಯ ಸೋಲು ಕಂಡಿತ್ತು. ಚುನಾವಣೆಯಲ್ಲಿ 66 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತವನ್ನು ಪಡೆದು ರಾಜ್ಯದಲ್ಲಿ ಅಧಿಕಾರ ಹಿಡಿದಿತ್ತು.
ಕಮಲ್ ನಾಥ್ ನೇತೃತ್ವದ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಮಾರ್ಚ್ 2020ರಲ್ಲಿ ಬಹುಮತ ಕಳೆದುಕೊಂಡಿತ್ತು. ಅಧಿಕಾರಕ್ಕೆ ಬಂದ 15 ತಿಂಗಳ ಬಳಿಕ ಜೋತಿರಾಧಿತ್ಯ ಸಿಂಧಿಯಾ ಬೆಂಬಲಿಗರಾದ 22 ಶಾಸಕರು ಬಿಜೆಪಿ ಸೇರಿದ ಕಾರಣ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು.
ಬಳಿಕ ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಲವು ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದು ಎಂದು ಅಂದಾಜಿಸಿವೆ. ಪ್ರತಿಪಕ್ಷ ಕಾಂಗ್ರೆಸ್ ಪ್ರಕಾರ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೃಷಿ ಸಾಲ ಮನ್ನಾ, 500 ರೂ.ಗೆ ಎಲ್ಪಿಜಿ ಸಿಲಿಂಡರ್ ವಿತರಣೆ, ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ, ಮಹಿಳೆಯರಿಗೆ ಪ್ರತಿ ತಿಂಗಳು 1500 ನಾರಿ ಸಮ್ಮಾನ್ ನಿಧಿ ನೀಡುವುದು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.
106 ಪುಟಗಳ ಪ್ರಣಾಳಿಕೆಯಲ್ಲಿ 59 ಚುನಾವಣಾ ಭರವಸೆಗಳನ್ನು ಪಕ್ಷ ನೀಡಿದೆ. ಕರ್ನಾಟಕದ ಮಾದರಿಯಲ್ಲಿಯೇ ಹಲವಾರು ಭರವಸೆಗಳನ್ನು ನೀಡಲಾಗಿದ್ದು, ಇದು ಚುನಾವಣೆಯಲ್ಲಿ ಸಹಾಯಕವಾಗಲಿದೆಯೇ? ಕಾದು ನೋಡಬೇಕು.












Click it and Unblock the Notifications