ಮಧ್ಯಪ್ರದೇಶ ಚುನಾವಣೆ 2023; ಚುನಾವಣೆಯ 5 ಪ್ರಮುಖ ವಿಚಾರಗಳು
ಭೋಪಾಲ್, ನವೆಂಬರ್ 09: ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದೆ. 5.6 ಕೋಟಿ ಜನರು ಚುನಾವಣೆಯಲ್ಲಿ ರಾಜ್ಯದ ಅಧಿಕಾರ ಯಾರು ಹಿಡಿಯಬೇಕು? ಎಂದು ತೀರ್ಮಾನ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಎದುರಾಳಿಗಳು. ನವೆಂಬರ್ 17ರಂದು ಮತದಾನ ನಡೆದರೂ ಸಹ ಚುನಾವಣೆ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ. ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹವನ್ನು ಹೊಂದಿದೆ.

ರಾಜ್ಯದ ಒಟ್ಟು ಮತದಾರರು 5,60,60,925. ಇವರಲ್ಲಿ ಪುರುಷರು 2,88,25,607. ಮಹಿಳೆಯರು 2,72,33,945 ಮತ್ತು ಇತರ ಮತದಾರರು 1,373. ಹಿರಿಯ ನಾಗರಿಕ ಮತದಾರರು 6,53,640 ಮತ್ತು ದಿವ್ಯಾಂಗ ಮತದಾರರು 5,05,146. 99 ಎನ್ಆರ್ಐ ಮತದಾರರು ಸಹ ರಾಜ್ಯದಲ್ಲಿ ಇದ್ದಾರೆ.
ಚುನಾವಣೆಯ ಪ್ರಮುಖ ವಿಚಾರಗಳು
1. ಭ್ರಷ್ಟಾಚಾರ; 2023ರ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ಪ್ರಮುಖ ವಿಚಾರವಾಗಿದೆ. ಆಡಳಿತ ಪಕ್ಷ ಬಿಜೆಪಿಯ ಭ್ರಷ್ಟಾಚಾರವನ್ನು ಪ್ರತಿಪಕ್ಷವಾದ ಕಾಂಗ್ರೆಸ್ ಚುನಾವಣಾ ಪ್ರಚಾರದ ಪ್ರಮುಖವಾದ ವಿಚಾರವಾಗಿ ಮಾಡಿಕೊಂಡಿದೆ. ದೇಶಾದ್ಯಂತ ಸುದ್ದಿ ಮಾಡಿದ ವ್ಯಾಪಂ ಹಗರಣ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಹಗರಣಗಳನ್ನು ಕಾಂಗ್ರೆಸ್ ಪ್ರಸ್ತಾಪ ಮಾಡುತ್ತಿದೆ.
2. ಆಡಳಿತ ವಿರೋಧಿ ಅಲೆ; ಮಧ್ಯ ಪ್ರದೇಶ ರಾಜ್ಯದಲ್ಲಿ ಬಿಜೆಪಿ 18 ವರ್ಷಗಳಿಂದ ಅಧಿಕಾರದಲ್ಲಿದೆ. 2018ರ ಚುನಾವಣೆ ಬಳಿಕ ಮಾತ್ರ ಪಕ್ಷ ಅಧಿಕಾರ ಕಳೆದುಕೊಂಡಿತ್ತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬೀಸುತ್ತಿದೆ. ಪ್ರತಿಪಕ್ಷ ಕಾಂಗ್ರೆಸ್ ಇದೇ ಪಕ್ಷಕ್ಕೆ ಸಹಾಯಕವಾಗಲಿದೆ ಎಂದು ಅಂದಾಜಿಸಿದೆ. ರಾಜ್ಯದ ನಾಯಕರ ವಿರುದ್ಧದ ಆರೋಪಗಳಿಂದ ಕಂಗೆಟ್ಟಿರುವ ಬಿಜೆಪಿ ಸಂಸದರು, ಕೇಂದ್ರ ಸಚಿವರನ್ನು ಸಹ ರಾಜ್ಯದ ಚುನಾವಣಾ ಕಣಕ್ಕೆ ಇಳಿಸಿದೆ.
3. ಹೆಚ್ಚುತ್ತಿರುವ ಅಪರಾಧ ಪ್ರಕರಣ; ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ರಾಜ್ಯದ ಜನರ ಚಿಂತೆಗೆ ಕಾರಣವಾಗಿದೆ. ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ದಲಿತರು, ಆದಿವಾಸಿಗಳ ಮೇಲೆ ದೌರ್ಜನ್ಯ ನಡೆದಿದೆ. ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ಮಾಡಿರುವುದು ಇಂತಹ ಪ್ರಕರಣಗಳಲ್ಲಿ ಒಂದಾಗಿದೆ.
4. ಕೃಷಿ, ರೈತರ ಸಮಸ್ಯೆಗಳು; ಮಧ್ಯ ಪ್ರದೇಶ ರಾಜ್ಯದ ಶೇ 70ರಷ್ಟು ಜನರು ಕೃಷಿ ಮತ್ತು ಅದಕ್ಕೆ ಸಂಬಂಧಿತ ಉದ್ಯಮಗಳಲ್ಲಿ ತೊಡಗಿದ್ದಾರೆ. ಆದ್ದರಿಂದ ಎರಡೂ ರಾಜಕೀಯ ಪಕ್ಷಗಳು ರೈತ, ಕೃಷಿ ಸಂಬಂಧಿತ ವಿಚಾರಗಳ ಬಗ್ಗೆ ಚುನಾವಣಾ ಪ್ರಚಾರದಲ್ಲಿ ಗಮನಹರಿಸುತ್ತಿವೆ. ಸಾಲಮನ್ನಾ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರೈತರು ಅಸಮಾಧಾನಗೊಂಡಿದ್ದಾರೆ.
5. ನಿರುದ್ಯೋಗ, ಬೆಲೆ ಏರಿಕೆ; ಮಧ್ಯಪ್ರದೇಶ ಚುನಾವಣೆಯಲ್ಲಿ ನಿರುದ್ಯೋಗ ಮತ್ತು ಬೆಲೆ ಏರಿಕೆ ಸಹ ಪ್ರಮುಖ ವಿಚಾರವಾಗಿದೆ. ಬೆಲೆ ಏರಿಕೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿಲ್ಲ ಎಂಬುದು ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿದೆ.
2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದರು. ಆದರೆ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರು. ಆಗ ಅವರ ಬೆಂಬಲಿಗ ಶಾಸಕರು ಕಾಂಗ್ರೆಸ್ ತೊರೆದರು. ಬಹುಮತ ಕಳೆದುಕೊಂಡು ಸರ್ಕಾರ ಪತನಗೊಂಡಿತು.
ಬಳಿಕ ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೊಂಡಿತು. ಈಗ ಆಡಳಿತ ವಿರೋಧಿ ಅಲೆ ಇದೆ ಎಂಬುದು ಬಿಜೆಪಿಗೂ ತಿಳಿದಿದೆ. ಆದ್ದರಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಪಕ್ಷ ಚುನಾವಣೆ ಎದುರಿಸುತ್ತಿದೆ. 2024ರ ಲೋಕಸಭೆ ಚುನಾವಣೆಗೂ ಮೊದಲು 5 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಮಧ್ಯಪ್ರದೇಶ ರಾಜ್ಯ ಸಹ ಒಂದು.












Click it and Unblock the Notifications