ಜಯಾಗೆ ಭಾರತ ರತ್ನ: ಮೇಲ್ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ, ಜ. 6: ಕಳೆದ ತಿಂಗಳು ನಿಧನರಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಯಾವುದೇ ರೀತಿಯ ನಿರ್ದೇಶನ ನೀಡಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.
ಕೆಕೆ ರಮೇಶ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ. ಎಂ. ಸುಂದರ್ ಅವರುಳ್ಳ ನ್ಯಾಯಪೀಠ, 'ಅತ್ಯುನ್ನತ ನಾಗರಿಕಾ ಗೌರವವನ್ನು ನೀಡುವ ಬಗ್ಗೆ ಸಂಬಂಧಪಟ್ಟ ಸಮಿತಿಯು ತೀರ್ಮಾನ ಕೈಗೊಳ್ಳುತ್ತದೆ. ಹಾಗಾಗಿ, ಇಂಥ ವಿಚಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ನಿರ್ದೇಶನವನ್ನೂ ನೀಡಲು ಸಾಧ್ಯವಿಲ್ಲ' ಎಂದು ತಿಳಿಸಿತು.
ಪಿಐಎಲ್ ನಲ್ಲಿ ರಮೇಶ್ ಅವರು, 'ಮೂರು ಬಾರಿ ತಮಿಳುನಾಡಿನ ಮುುಖ್ಯಮಂತ್ರಿಯಾಗಿದ್ದ ಜಯಲಲಿತಾ, ಬಡ ಜನರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಘೋಷಿಸಿದ್ದು, ಅವುಗಳಿಂದಾಗಿ ಅನೇಕ ಬಡವರ ಬದುಕಿಗೆ ಸಹಾಯವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಭಾರತ ರತ್ನ ನೀಡಬೇಕೆಂದು ತಮಿಳುನಾಡು ಸರ್ಕಾರದ ಸಂಪುಟವೂ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಹಾಗಾಗಿ, ಮಾನ್ಯ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು' ಎಂದು ಕೋರಿದ್ದರು.
ಅಲ್ಲದೆ, ಇದೇ ವಿಚಾರವಾಗಿ ಕಳೆದ ತಿಂಗಳ 15ರಂದೇ ತಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಈವರೆಗೆ ಯಾವುದೇ ಉತ್ತರ ಬಾರದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಕೇಳಲು ಮುಂದಾಗಿದ್ದಾಗಿಯೂ ಅರ್ಜಿಯಲ್ಲಿ ರಮೇಶ್ ತಿಳಿಸಿದ್ದರು.