Maharashtra Assembly Election 2024: ಹೆಚ್ಚು ಸ್ಥಾನದಲ್ಲಿ ಕಣಕ್ಕಿಳಿದ ಬಿಜೆಪಿ ಲೆಕ್ಕಾಚಾರಗಳು
ಮುಂಬೈ, ನವೆಂಬರ್ 03: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ರ ಕಾವು ಏರುತ್ತಿದೆ. ನವೆಂಬರ್ 20ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಈಗಾಗಲೇ ಅಂತ್ಯಗೊಂಡಿದೆ. ನವೆಂಬರ್ 4ರ ಸೋಮವಾರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಚುನಾವಣೆಗೆ ಬಿಜೆಪಿ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಮೂಲಕ ಚುನಾವಣೆ ಎದುರಿಸುತ್ತಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ಗೆ ಈ ಚುನಾವಣೆ ಮಹತ್ವದ್ದು. ಆದ್ದರಿಂದ ಎರಡೂ ಪಕ್ಷಗಳು ಮೈತ್ರಿಕೂಟ ಮಾಡಿಕೊಂಡು, ಸೀಟು ಹಂಚಿಕೆ ಮಾಡಿಕೊಂಡಿವೆ. ಆದರೆ ಬಿಜೆಪಿ ಮಹಾಯತಿ ಮೈತ್ರಿಕೂಟದ ಸೀಟು ಹಂಚಿಕೆಗಿಂತ ಹೆಚ್ಚಿನ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಬಿಜೆಪಿಯ ಲೆಕ್ಕಾಚಾರಗಳೇನು?: ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಮೂಲಕ ಬಿಜೆಪಿ ಚುನಾವಣೆ ಎದುರಿಸುತ್ತಿದೆ. 228 ಕ್ಷೇತ್ರಗಳ ಪೈಕಿ ಬಿಜೆಪಿ 152 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ತನ್ನ ಚಿಹ್ನೆ ಮೂಲಕ ಕಣಕ್ಕಿಳಿಸಿದೆ. ಅಲ್ಲದೇ 17 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಬೇರೆ ಪಕ್ಷದ ಚಿಹ್ನೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿಯ ಚುನಾವಣೆಗೆ ಒಟ್ಟು 179 ಕ್ಷೇತ್ರಗಳಲ್ಲಿ ಬಿಜೆಪಿ ಕಣಕ್ಕಿಳಿದಿದೆ.
ಬಿಜೆಪಿಯ 12 ನಾಯಕರು ಶಿವಸೇನೆ (ಏಕನಾಥ್ ಶಿಂಧೆ ಬಣ), ನಾಲ್ವರು ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿದರು. ಒಬ್ಬ ನಾಯಕ ಆರ್ಪಿಐ ಮೂಲಕ ಬಿಜೆಪಿ ಚಿಹ್ನೆಯಿಂದ ಕಣಕ್ಕಿಳಿದಿದ್ದಾರೆ. ಎನ್ಸಿಪಿ ಮತ್ತು ಶಿವಸೇನೆಯ ಒಪ್ಪಿಗೆ ಪಡೆದುಕೊಂಡೇ ಈ ಬದಲಾವಣೆಗಳನ್ನು ಮಾಡಲಾಗಿದೆ. ಚುನಾವಣೆ ಗೆಲ್ಲುವ ಅಭ್ಯರ್ಥಿಗಳಿದ್ದರೆ ಅವರಿಗೆ ಗೆಲುವೇ ಮಾನದಂಡ ಆಧಾರದ ಮೇಲೆ ಬಿಜೆಪಿ ಟಿಕೆಟ್ ನೀಡಿದೆ.
ಬಿಜೆಪಿಯ ಕೆಲವು ಪ್ರಮುಖ ನಾಯಕರಿಗೆ ಬೇರೆ ಪಕ್ಷದ ಟಿಕೆಟ್ ವ್ಯವಸ್ಥೆಯನ್ನು ಪಕ್ಷ ಮಾಡಿದೆ. ಮುಂಬೈನ ಮಾಜಿ ಕಾರ್ಪೊರೇಟರ್ ಮುರ್ಜಿ ಪಟೇಲ್ ಶಿವಸೇನೆ ಮೂಲಕ ಕಣಕ್ಕಿಳಿಸಿದ್ದಾರೆ. ಮುಂಬೈ ನಗರದ ಕೆಲವು ಸೀಟುಗಳಲ್ಲಿ ಈ ಮಾದರಿಯ ಹೊಂದಾಣಿಕೆಯನ್ನು ಬಿಜೆಪಿ ಮಾಡಿಕೊಂಡಿದೆ.
ಈ ಮಾದರಿಯಲ್ಲಿ ಬಿಜೆಪಿ ನಾಯಕರಾದ ಸಂತೋಷ್ ಶೆಟ್ಟಿ, ಸಂಜನಾ ಜಾಧವ್, ನಿಲೇಶ್ ರಾಣೆ, ವಿಕಾಸ್ ಥಾರೆ ಶಿವಸೇನೆ ಮೂಲಕ ಕಣಕ್ಕಿಳಿದಿದ್ದಾರೆ. ರಾಜ್ಕುಮಾರ್ ಬಡೋಲೆ, ಪ್ರತಾಪ್ ಪಾಟೀಲ್, ನಿಶಾಕಾಂತ್ ಪಾಟೀಲ್, ಸಂಜಯ್ ಕಾಕಾಪಾಟೀಲ್ ಬಿಜೆಪಿಯ ನಾಯಕರು. ಆದರೆ ಅವರು ಚುನಾವಣೆಯಲ್ಲಿ ಎನ್ಸಿಪಿ ಪಕ್ಷದಿಂದ ಕಣಕ್ಕಿಳಿದಿದ್ದಾರೆ.
ಚುನಾವಣೆಯಲ್ಲಿ 'ಮಹಾಯತಿ' ಮೈತ್ರಿಕೂಟಕ್ಕೆ ಮಹಾವಿಕಾಸ್ ಅಘಾಡಿ ಮೈತ್ರಿಕೂಟ (ಎಂವಿಎ) ಎದುರಾಳಿ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಇದಾಗಿದೆ. ಈ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಹೆಚ್ಚು ಎಂದರೆ 100 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿದೆ. ಹರಿಯಾಣದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿದ್ದವು. ಆದರೆ ಬಿಜೆಪಿ 3ನೇ ಬಾರಿಗೆ ರಾಜ್ಯದಲ್ಲಿ ಅಧಿಕಾರ ಪಡೆಯುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿತ್ತು.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಜ್ಯದ ಉಪ ಮುಖ್ಯಮಂತ್ರಿ ದೇವೇಂಧ್ರ ಫಡ್ನವೀಸ್ ಈಗಾಗಲೇ ಹೇಳಿದ್ದಾರೆ. ಆದ್ದರಿಂದ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬ ತಂತ್ರದಿಂದ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.












Click it and Unblock the Notifications