Maharashtra Assembly Election 2024: ಮಹಾರಾಷ್ಟ್ರ ಚುನಾವಣೆ, ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಮುಂಬೈ, ನವೆಂಬರ್ 10: ಬಿಜೆಪಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಭಾನುವಾರ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ನೇತೃತ್ವದ 'ಮಹಾಯತಿ' ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದೆ. ಈ ಚುನಾವಣೆಯನ್ನು ಸಹ ಮೈತ್ರಿಕೂಟ ರಚನೆ ಮಾಡಿಕೊಂಡು ಎದುರಿಸಲಾಗುತ್ತಿದೆ.
ಕೇಂದ್ರ ಸಚಿವ, ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಭಾನುವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.15ಕ್ಕೆ ಅವರು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಬಳಿಕ ಮೂರು ಕಡೆ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಮೂಲಕ ಬಿಜೆಪಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಅಧಿಕ ಸೀಟುಗಳನ್ನು ಗೆದ್ದು ಅಧಿಕಾರ ಹಿಡಿಯಬೇಕು ಎಂದು ಬಿಜೆಪಿ ತಂತ್ರ ರೂಪಿಸಿದೆ.
ಚುನಾವಣಾ ಪ್ರಚಾರ ಬಿರುಸು: ಬಿಜೆಪಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರವನ್ನು ಚುರುಕುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಎರಡು ದಿನಗಳ ಕಾಲ ಪ್ರಚಾರವನ್ನು ನಡೆಸಿದ್ದಾರೆ. ನವೆಂಬರ್ 14ರ ತನಕ ಒಟ್ಟು 9 ಸಮಾವೇಶ, ಪುಣೆಯಲ್ಲಿ ರೋಡ್ ಶೋ ನಡೆಸಿ ನರೇಂದ್ರ ಮೋದಿ ಮತ ಯಾಚನೆ ಮಾಡಲಿದ್ದಾರೆ.
ಅಚ್ಚರಿಯ ಸಂಗತಿ ಎಂದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಮಹಾರಾಷ್ಟ್ರ ಚುನಾವಣೆಗೆ ಭಾನುವಾರ ಪ್ರಣಾಳಿಕೆ ಬಿಡುಗಡೆ ಮಾಡಲಿವೆ. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟದ ಮೂಲಕ ಚುನಾವಣೆ ಎದುರಿಸುತ್ತಿದೆ.
ಕಾಂಗ್ರೆಸ್ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಮೂಲಕ ಚುನಾವಣೆ ಎದುರಿಸುತ್ತಿದೆ. ಈ ಮೈತ್ರಿಕೂಟದಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳಿವೆ. ಕಾಂಗ್ರೆಸ್ ಪ್ರಣಾಳಿಕೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಲಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಕಣಕ್ಕಿಳಿದಿರುವ ಪಕ್ಷ ಬಿಜೆಪಿಯಾಗಿದೆ. ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಜೊತೆ ಸೀಟು ಹಂಚಿಕೆ ಮಾಡಿಕೊಂಡಿದೆ. ಆದರೆ ಕೆಲವು ಕಡೆ ತಮ್ಮ ಅಭ್ಯರ್ಥಿಗಳನ್ನು ಶಿವಸೇನೆ, ಎನ್ಸಿಪಿ ಚಿಹ್ನೆಯಡಿ ಬಿಜೆಪಿ ಕಣಕ್ಕಿಳಿಸಿದೆ.
ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಚುನಾವಣೆ ಫಲಿತಾಂಶದ ಮೇಲೆ ಬಿಜೆಪಿ ಅಪಾರವಾದ ನಂಬಿಕೆ ಇಟ್ಟುಕೊಂಡಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳಾಗಿಸಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿತ್ತು.
ಮಹಾರಾಷ್ಟ್ರ ಬಿಜೆಪಿ ಪಾಲಿಗೆ ಬಹಳ ನಿರ್ಣಾಯಕವಾದ ರಾಜ್ಯವಾಗಿದೆ. ಆರ್ಎಸ್ಎಸ್ನ ಪ್ರಧಾನ ಕಛೇರಿ ಸಹ ನಾಗ್ಪುರದಲ್ಲಿದೆ. ಮಹಾಯತಿ ಮೈತ್ರಿಕೂಟ ರಚನೆಯಾದಾಗ ಏಕನಾಥ್ ಶಿಂಧೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಬಿಜೆಪಿ, ದೇವೇಂದ್ರ ಫಡ್ನವೀಸ್ ಅವರನ್ನು ಉಪ ಮುಖ್ಯಮಂತ್ರಿ ಮಾಡಿತ್ತು. ಈ ಬಾರಿಯೂ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಆದರೆ ಮೈತ್ರಿಕೂಟದ ಮೂಲಕ ಸರ್ಕಾರ ರಚಿಸಬಹುದು ಎಂಬ ಮಾತು ಕೇಳಿ ಬರುತ್ತಿದೆ.












Click it and Unblock the Notifications