Maharashtra Assembly Election 2024: ಸೀಟು ಹಂಚಿಕೆ ಗೊಂದಲದ ನಡುವೆಯೇ ಕಾಂಗ್ರೆಸ್ ಮಹತ್ವದ ಸಭೆ
ಮುಂಬೈ, ಅಕ್ಟೋಬರ್ 21: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಮಹತ್ವದ ಸಭೆಯನ್ನು ನಡೆಸಿದೆ. ಈಗಾಗಲೇ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ.
ಮಹಾರಾಷ್ಟ್ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸೋಮವಾರ ರಾತ್ರಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ರಾಹುಲ್ ಗಾಂಧಿ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತ್ತಲ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸಲು ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಜೊತೆ ಸೇರಿ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ರಚನೆ ಮಾಡಿಕೊಂಡಿದೆ. ಮೈತ್ರಿಕೂಟದಲ್ಲಿ ಯಾರಿಗೆ ಎಷ್ಟು ಸೀಟು? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಕಾಂಗ್ರೆಸ್ ಚುನಾವಣಾ ಸಮಿತಿ 68 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ.
100+100 ಸೀಟು: ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ಗೆ 100, ಶಿವಸೇನೆಗೆ 100 ಮತ್ತು ಎನ್ಸಿಪಿ (ಶರದ್ ಪವಾರ್ ಬಣ)ಕ್ಕೆ 88 ಸೀಟು ಎಂದು ಉದ್ಧವ್ ಠಾಕ್ರೆ ಪಟ್ಟು ಹಿಡಿದಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಜೊತೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಅವರು ನಿರಾಕರಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರು ಉದ್ಧವ್ ಠಾಕ್ರೆ ಮನವೊಲಿಕೆ ಮಾಡಿ ಎಂದು ಶರದ್ ಪವಾರ್ಗೆ ಸೂಚಿಸಿದೆ.
ಕಾಂಗ್ರೆಸ್ ರಚನೆ ಮಾಡಿರುವ ಸ್ಕ್ರೀನಿಂಗ್ ಕಮಿಟಿ ಗೊಂದಲವಿಲ್ಲದ 68 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಆದ್ದರಿಂದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ 68 ಅಭ್ಯರ್ಥಿಗಳನ್ನು ಕಾಂಗ್ರೆಸ್ ಅಂತಿಮಗೊಳಿಸಲಿದೆ. ಭಾನುವಾರವೇ ಚುನಾವಣಾ ಸಮಿತಿ ಸಭೆ ನಿಗದಿಯಾಗಿತ್ತು. ಆದರೆ ನಾನಾ ಪಟೋಲೆ ಮನವಿಯಂತೆ ಅದನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು.
ಮುಂಬೈ ನಗರ, ವಿದರ್ಭ ಪಾಂತ್ಯಗಳಲ್ಲಿನ ಸೀಟುಗಳ ಹಂಚಿಕೆ ವಿಚಾರದಲ್ಲಿ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಕಾಂಗ್ರೆಸ್ ನಡುವೆ ಒಮ್ಮತ ಮೂಡಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ಗೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳು ಸಿಕ್ಕ ಬಳಿಕ ಉದ್ಧವ್ ಠಾಕ್ರೆ ಮಹಾರಾಷ್ಟ್ರದಲ್ಲಿನ ಚುನಾವಣಾ ತಂತ್ರವನ್ನು ಬದಲಾವಣೆ ಮಾಡಿದ್ದಾರೆ.
ಉದ್ಧವ್ ಠಾಕ್ರೆ ಎಂವಿಎ ಮೈತ್ರಿಕೂಟ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ ಇದಕ್ಕೆ ಕಾಂಗ್ರೆಸ್ ಒಪ್ಪಿಗೆ ಕೊಟ್ಟಿಲ್ಲ. ಆದ್ದರಿಂದ ಪಕ್ಷದ ನಾಯಕರ ಜೊತೆ ಅವರಿಗೆ ಕೊಂಚ ಅಸಮಾಧಾನವಾಗಿದೆ. ಮೈತ್ರಿಕೂಟದ ಇನ್ನೊಂದು ಪಕ್ಷವಾದ ಎನ್ಸಿಪಿ (ಶರದ್ ಪವಾರ್ ಬಣ) ಜೊತೆಗೆ ಕಾಂಗ್ರೆಸ್ನ ಯಾವುದೇ ಅಸಮಧಾನವಿಲ್ಲ.
ಹಾಲಿ ಶಾಸಕರಿಗೆ ಟಿಕೆಟ್ ಖಚಿತ ಎಂಬುದು ಕಾಂಗ್ರೆಸ್ ವಲಯದಲ್ಲಿ ಹಬ್ಬಿರುವ ಮಾತು. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಶಿವಸೇನೆ, ಎನ್ಸಿಪಿಯ ಇಬ್ಬರು ಸದಸ್ಯರು ಸಹ ಪಾಳ್ಗೊಳ್ಳುತ್ತಿದ್ದಾರೆ. ಆದ್ದರಿಂದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಬದಲಾವಣೆಯಾಗಲಿದ್ದಾರೆಯೇ? ಎಂಬ ಪ್ರಶ್ನೆ ಮೂಡಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಾಗ್ಪುರದಿಂದ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಅದಕ್ಕೂ ಮೊದಲು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಬಯಸಿದೆ.












Click it and Unblock the Notifications