Maharashtra Assembly Election 2024: ಎನ್ಸಿಪಿ ಮೊದಲ ಪಟ್ಟಿ, ಡಿಸಿಎಂ ಸ್ಪರ್ಧಿಸುವ ಕ್ಷೇತ್ರ ಘೋಷಣೆ
ಮುಂಬೈ, ಅಕ್ಟೋಬರ್ 23: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಎನ್ಸಿಪಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಒಟ್ಟಾಗಿ ಈ ಬಾರಿಯ ಚುನಾವಣೆ ಎದುರಿಸಲಿವೆ. ಈಗಾಗಲೇ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಬುಧವಾರ ಎನ್ಸಿಪಿ (ಅಜಿತ್ ಪವಾರ್ ಬಣ) ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಕ್ಷೇತ್ರ ಬದಲಾವಣೆ ಮಾಡುವ ಮಾತುಗಳನ್ನು ಆಡಿದ್ದರು. ಆದರೆ ಈಗ ತಮ್ಮ ಭದ್ರಕೋಟೆಯಿಂದಲೇ ಕಣಕ್ಕಿಳಿಯುತ್ತಿದ್ದಾರೆ.

'ಮಹಾಯುತಿ' ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 45, ಎನ್ಸಿಪಿ (ಅಜಿತ್ ಪವಾರ್ ಬಣ) 38 ಸೇರಿ ಮತ್ತು ಬಿಜೆಪಿ 99 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಅಕ್ಟೋಬರ್ 22ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 29 ಕೊನೆಯ ದಿನವಾಗಿದೆ.
ಮಹಾಯತಿ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಬಾರಮತಿ ಕ್ಷೇತ್ರವನ್ನು ಬಿಟ್ಟುಕೊಡುವ ಮಾತನ್ನಾಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಪತ್ನಿ ಸೋತ ಅಘಾತದಲ್ಲಿರುವ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಇಲ್ಲವೇ ಬಾರಾಮತಿಯಿಂದ ಕಣಕ್ಕಿಳಿಯುವುದಿಲ್ಲ ಎಂಬ ಸುದ್ದಿಗಳು ಹಬ್ಬಿದ್ದವು.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟಕ್ಕೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಎದುರಾಳಿ. ಆದರೆ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕಗ್ಗಂಟಾಗಿದೆ. ಮಹಾಯತಿ ಮೈತ್ರಿಕೂಟ ಸೀಟು ಹಂಚಿಕೆ ಮಾಡಿಕೊಂಡು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿವೆ.
ಹೊಸ ಶಾಸಕರು ಬೇಕು: ಸೆಪ್ಟೆಂಬರ್ನಲ್ಲಿ ಮಾತನಾಡಿದ್ದ ಉಪ ಮುಖ್ಯಮಂತ್ರಿ, ಎನ್ಸಿಪಿ ನಾಯಕ ಅಜಿತ್ ಪವಾರ್, "ಬಾರಮತಿ ಕ್ಷೇತ್ರಕ್ಕೆ ನನಗಿಂತ ಹೊಸ ಶಾಸಕರು ಬೇಕು. ನನಗೆ ಈಗ 65 ವರ್ಷ ವಯಸ್ಸು, ನನಗೆ ತಪ್ತಿ ಆಗಿದೆ, ಕ್ಷೇತ್ರ ಹೊಸ ಶಾಸಕರನ್ನು ಪಡೆಯಬೇಕು. ಬಳಿಕ ನೀವು 1991-2024ರ ತನಕ ಕ್ಷೇತ್ರಕ್ಕೆ ನನ್ನ ಕೊಡುಗೆಯನ್ನು ಪರಿಶೀಲಿಸಿ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇನೆ. ಸಾಕಷ್ಟು ಅನುದಾನ ತಂದಿದ್ದೇನೆ" ಎಂದು ಹೇಳಿದ್ದರು.
ಅಜಿತ್ ಪವಾರ್ 2023ರಲ್ಲಿ ಶರದ್ ಪವಾರ್ ವಿರುದ್ಧ ಬಂಡಾಯವೆದ್ದರು. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿದರು. 5 ಬಾರಿಯ ಶಾಸಕರಾದ ಅವರನ್ನು ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ)ದ 'ಮಹಾಯುತಿ' ಮೈತ್ರಿಕೂಟ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಮಾಡಲಾಯಿತು.
ಶಾಸಕರ ಬೆಂಬಲ ಹೆಚ್ಚಿದ್ದ ಕಾರಣಕ್ಕೆ ಚುನಾವಣಾ ಆಯೋಗ ಎನ್ಸಿಪಿ ಪಕ್ಷದ ಚಿಹ್ನೆಯನ್ನು ಅಜಿತ್ ಪವಾರ್ ಬಣಕ್ಕೆ ನೀಡಿದೆ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಾರಮತಿ ಕ್ಷೇತ್ರದಲ್ಲಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಸೋಲು ಕಂಡಿದ್ದರು. ಇದು ಅಜಿತ್ ಪವಾರ್ ಕಂಗೆಡಿಸಿತ್ತು. ಇದರಿಂದಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬಿಟ್ಟುಕೊಡುವ ಮಾತನಾಡಿದ್ದರು.












Click it and Unblock the Notifications