Maharashtra Election 2024 Result: ಏಕಾಂಗಿಯಾಗಿ 125 ಸೀಟುಗಳಲ್ಲಿ ಬಿಜೆಪಿ ಮುನ್ನಡೆ
ಮುಂಬೈ, ನವೆಂಬರ್ 23: ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ನವೆಂಬರ್ 20ರ ಬುಧವಾರ ಒಂದೇ ಹಂತದಲ್ಲಿ ರಾಜ್ಯದ 288 ಸೀಟುಗಳಿಗೆ ಮತದಾನ ನಡೆದಿತ್ತು. ಸದ್ಯದ ಮಾಹಿತಿಯಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಮಹಾಯತಿ ಮೈತ್ರಿಕೂಟ, ಬಿಜೆಪಿ ಏಕಾಂಗಿಯಾಗಿ 125 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾಯತಿ ಮೈತ್ರಿಕೂಟ, ಎಂವಿಎ ಮೈತ್ರಿಕೂಟ ರಾಜ್ಯದ ಚುನಾವಣೆಯಲ್ಲಿ ಎದುರಾಳಿಗಳು.
ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಮತ್ತು ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು.

ಆದರೆ ಸಮಯ 10.52ರ ಮಾಹಿತಿಯಂತೆ ಬಿಜೆಪಿ ನೇತೃತ್ವದ ಮಹಾಯತಿ ಮೈತ್ರಿಕೂಟ ಭಾರೀ ಮುನ್ನಡೆ ಪಡೆದುಕೊಂಡಿದೆ. ಮಹಾಯತಿ 220 ಸೀಟು ಮತ್ತು ಎಂವಿಎ 55 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದಿದೆ.
ಯಾರಿಗೆ ಎಷ್ಟು ಸೀಟು?: ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬಿಜೆಪಿ 125, ಶಿವಸೇನೆ (ಏಕನಥ್ ಶಿಂಧೆ) 55, ಎನ್ಸಿಪಿ (ಅಜಿತ್ ಪವಾರ್) 35, ಕಾಂಗ್ರೆಸ್ 21, ಶಿವಸೇನೆ (ಉದ್ಧವ್ ಠಾಕ್ರೆ ಬಣ) 17, ಎನ್ಸಿಪಿ (ಶರದ್ ಪವಾರ್) 13, ಇತರರು ಮತ್ತು ಪಕ್ಷೇತರರು 21 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145.
ಬಿಜೆಪಿ ನೇತೃತ್ವದ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಭಾರೀ ಮುನ್ನಡೆಯನ್ನು ಪಡೆದಿದ್ದು, ಎಂವಿಎ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.
2014 ರಿಂದ 2019ರ ತನಕ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರ ನಡೆಸಿತ್ತು. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದರು. 2019ರ ಚುನಾವಣೆ ಬಳಿಕ ಉದ್ಧವ್ ಠಾಕ್ರೆ ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಕಾರಣ ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಸರ್ಕಾರ ರಚನೆಗೊಂಡಿತು. 2022ರಲ್ಲಿ ಈ ಸರ್ಕಾರ ಪತನಗೊಂಡಿತು.
ಆಗ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿತು. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರು. ದೇವೇಂಧ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.
ದೇವೇಂದ್ರ ಫಡ್ನವೀಸ್ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದಾರೆ. ಇದು ಬಿಜೆಪಿ ಭದ್ರಕೋಟೆ. ಚುನಾವಣೆಯಲ್ಲಿ ಅವರು ಸದ್ಯ 27,431 ಮತಗಳನ್ನು ಪಡೆದು ಮುನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ನ ಪ್ರಫುಲ್ಲ ಗುಡಧೆ ಎದುರಾಳಿಯಾಗಿದ್ದು, 15,422 ಮತಗಳನ್ನು ಪಡೆದುಕೊಂಡಿದ್ದಾರೆ.
ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ದೇವೇಂದ್ರ ಫಡ್ನವೀಸ್ 6ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ 'ದೇಶಕ್ಕೆ ನರೇಂದ್ರ ಮಹಾರಾಷ್ಟ್ರಕ್ಕೆ ದೇವೇಂದ್ರ', 'ಆಯೇಗಾ ತೋ ದೇವಾ ಭೌ ಹೈ' ಎಂಬ ಘೋಷಣೆಗಳು ಭಾರೀ ಸಂಚಲನಕ್ಕೆ ಕಾರಣವಾಗಿದ್ದವು.












Click it and Unblock the Notifications