Maharashtra Election 2024 Result: ಏಕನಾಥ್ ಶಿಂಧೆಯಲ್ಲ, ಬಿಜೆಪಿಗೆ ಸಿಎಂ ಹುದ್ದೆ!
ಮುಂಬೈ, ನವೆಂಬರ್ 23: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಮಹಾಯತಿ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯುವುದು ಖಚಿತವಾಗಿದೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಸದ್ಯದ ಮಾಹಿತಿಯಂತೆ ಮಹಾಯತಿ ಮೈತ್ರಿಕೂಟ 218 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ನವೆಂಬರ್ 20ರ ಬುಧವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಏಕಾಂಗಿಯಾಗಿ 126 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿತ್ತು. ಸದ್ಯ ರಾಜ್ಯದಲ್ಲಿ ಅಧಿಕಾರದಲ್ಲಿರುವ ಈ ಮೈತ್ರಿಕೂಟದಲ್ಲಿ ಏಕನಾಥ್ ಶಿಂಧೆ ಮುಖ್ಯಮಂತ್ರಿ. ಆದರೆ ಈ ಬಾರಿಯ ಚುನಾವಣೆ ಫಲಿತಾಂಶದ ಬಳಿಕ ಚಿತ್ರಣ ಬದಲಾಗಲಿದೆ.

ಬಿಜೆಪಿ 2014 ರಿಂದ 2019ರ ತನಕ ಮಹಾರಾಷ್ಟ್ರದಲ್ಲಿ ಅಧಿಕಾರ ನಡೆಸಿತ್ತು. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದರು. ಆದರೆ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸರ್ಕಾರ 2022ರಲ್ಲಿ ಪತನಗೊಂಡ ಬಳಿಕ ಬಿಜೆಪಿ ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಟ್ಟಿತ್ತು.
ಏಕನಾಥ್ ಶಿಂಧೆ ಮುಖ್ಯಮಂತ್ರಿಯಲ್ಲ; ಚುನಾವಣೆ ಫಲಿತಾಂಶದ ಬಳಿಕ ನಾವು ಮುಖ್ಯಮಂತ್ರಿ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈಗ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಪಡೆದಿದ್ದು, ಬಿಜೆಪಿಯೇ ಮುಖ್ಯಮಂತ್ರಿ ಪಟ್ಟವನ್ನು ಇಟ್ಟುಕೊಳ್ಳುವ ಸೂಚನೆ ಸಿಕ್ಕಿದೆ.
ಬಿಜೆಪಿಯ ರಾಷ್ಟ್ರೀಯ ನಾಯಕರೊಬ್ಬರು ಈಗಾಗಲೇ ಈ ಕುರಿತು ಮಾತನಾಡಿ, "ಶಿಂಧೆಯಲ್ಲ, ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ನಮ್ಮ ಪಕ್ಷದವರೇ ಆಗಲಿದ್ದಾರೆ" ಎಂದು ಹೇಳಿದ್ದಾರೆ. ಈ ಮೂಲಕ ಸಂಪೂರ್ಣ ಫಲಿತಾಂಶ ಬರುವ ಮೊದಲೇ ಬಿಜೆಪಿ ಮುಖ್ಯಮಂತ್ರಿ ಹುದ್ದೆ ತಮಗೆ ಎಂದು ಹೇಳಿದೆ.
ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ನಾಗ್ಪುರ ನೈಋತ್ಯ ಕ್ಷೇತ್ರದ ಅಭ್ಯರ್ಥಿ. ಸದ್ಯ ಅವರು 59, 462 ಮತಗಳನ್ನು ಪಡೆದು 20,929 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ನ ಪ್ರಫುಲ್ಲ ಗುಡಧೆ 38,543 ಮತಗಳನ್ನು ಪಡೆದುಕೊಂಡಿದ್ದಾರೆ.
ಚುನಾವಣೆ ಪ್ರಚಾರದ ಸಂದರ್ಭದಲ್ಲಿಯೇ ದೇವೇಂದ್ರ ಫಡ್ನವೀಸ್ 2022ರಲ್ಲಿ ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಬಾರದಿತ್ತು ಎಂಬ ಮಾತು ಕೇಳಿ ಬಂದಿತ್ತು. ಅಲ್ಲದೇ 'ದೇಶಕ್ಕೆ ನರೇಂದ್ರ, ಮಹಾರಾಷ್ಟ್ರಕ್ಕೆ ದೇವೇಂದ್ರ' ಎಂಬ ಘೋಷಣೆಗಳು ಮೊಳಗಿದ್ದವು.
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಾಜ್ಯದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿದೆ. ಇಬ್ಬರು ನಾಯಕರು ಸಹ ಆರ್ಎಸ್ಎಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಫಡ್ನವೀಸ್ ಸಿಎಂ ಆಗುವ ಸಾಧ್ಯತೆ ಹೆಚ್ಚಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 127, ಶಿವಸೇನೆ (ಏಕನಾಥ್ ಶಿಂಧೆ ಬಣ) 56, ಎನ್ಸಿಪಿ (ಅಜಿತ್ ಪವಾರ್ ಬಣ) 39 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮೂರು ಪಕ್ಷಗಳು 'ಮಹಾಯುತಿ' ಮೈತ್ರಿಕೂಟದಲ್ಲಿವೆ.
ಮಹಾವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಕಾಂಗ್ರೆಸ್ 19, ಶಿವಸೇನೆ (ಉದ್ಧವ್ ಠಾಕ್ರೆ ಬಣ) 18, ಎನ್ಸಿಪಿ (ಶರದ್ ಪವಾರ್) 12, ಇತರರು/ ಪಕ್ಷೇತರರು 17 ಸೀಟುಗಳಲ್ಲಿ ಮುನ್ನಡೆ ಪಡೆದಿದ್ದಾರೆ.












Click it and Unblock the Notifications